ಎಸ್ಸಿ, ಎಸ್ಟಿ ವಿರೋಧಿ ನೀತಿ ಸಹಿತ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ, ಎಸ್ಸಿ, ಎಸ್ಟಿ ಮೀಸಲಾತಿ ಸಂರಕ್ಷಣಾ ವೇದಿಕೆ ವತಿಯಿಂದ ಡಾ.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಹುಣಸಗಿ
ಎಸ್ಸಿ, ಎಸ್ಟಿ ವಿರೋಧಿ ನೀತಿ ಸಹಿತ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ, ಎಸ್ಸಿ, ಎಸ್ಟಿ ಮೀಸಲಾತಿ ಸಂರಕ್ಷಣಾ ವೇದಿಕೆ ವತಿಯಿಂದ ಡಾ.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.ವಾಲ್ಮೀಕಿ ಮುಖಂಡ ದೇವೇದ್ರಪ್ಪ ಬಡಿಗೇರ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ ಹಕ್ಕುಗಳನ್ನು ಸಂರಕ್ಷಿಸುವುದು ಸರ್ಕಾರದ ಜವಾಬ್ದಾರಿ.. ಆದರೆ ಇತ್ತೀಚಿನ ದಿನಗಳಲ್ಲಿ ಎಸ್ಸಿ, ಎಸ್ಟಿ, ಇಡಬ್ಲ್ಯೂಎಸ್ ಹಾಗೂ ಓಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಹಲವು ಗೊಂದಲಗಳು ಉಂಟಾಗಿವೆ ಎಂದರು.
ಮೀಸಲಾತಿ ಶೇ.50ರ ಮಿತಿ ಮೀರಬಾರದು ಎಂಬ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ, ರಾಜ್ಯಗಳ ಜನಸಂಖ್ಯೆ ಹಾಗೂ ಸಾಮಾಜಿಕ-ಶೈಕ್ಷಣಿಕ ಸ್ಥಿತಿಗತಿಗಳನ್ನು ಪರಿಗಣಿಸಿ ಮೀಸಲಾತಿ ಕಲ್ಪಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಕರ್ನಾಟಕದಲ್ಲಿ ಮೀಸಲಾತಿ ಆಯೋಗದ ವರದಿ ಆಧರಿಸಿ ಶೇ.50ಕ್ಕಿಂತ ಹೆಚ್ಚಿನ ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಅಂದಿನ ಸರ್ಕಾರ ಶಿಫಾರಸು ಮಾಡಿತ್ತು. ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ದೊರೆಯಬೇಕಾದ ಮೀಸಲಾತಿ ಹಕ್ಕುಗಳು ಯಾವುದೇ ಕಾರಣಕ್ಕೂ ಕಡಿತಗೊಳ್ಳದಂತೆ ಸಂವಿಧಾನಾತ್ಮಕ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.ದಲಿತ ಮುಖಂಡ ಶರಣಪ್ಪ ಮಾಸ್ತಾರ ಗುಳಬಾಳ ಮಾತನಾಡಿ, ಎಸ್ಸಿಗೆ ಶೇ.17 ಹಾಗೂ ಎಸ್ಟಿಗೆ ಶೇ.7.5 ಮೀಸಲಾತಿಗೆ ಸಂಬಂಧಿಸಿದ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮೀಸಲಾತಿ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯವಿರುವ ಸಂವಿಧಾನ ತಿದ್ದುಪಡಿಗೆ ಕ್ರಮ ವಹಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ಸಿ-ಎಸ್ಟಿ ಸಮುದಾಯದವರ ಮೇಲೆ ನಡೆಯುತ್ತಿರುವ ಅನ್ಯಾಯ, ದಬ್ಬಾಳಿಕೆ, ಸರ್ಕಾರಿ ಸೌಲಭ್ಯಗಳಿಂದ ವಂಚನೆ ಹಾಗೂ ಗಲಭೆಗಳನ್ನು ನಿಯಂತ್ರಿಸಲು ಉನ್ನತ ಮಟ್ಟದ ಸಮಿತಿ ರಚಿಸಿ, ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ದಲಿತ ಮುಖಂಡ ಶಿವಪ್ಪ ಸದಬ ಮಾತನಾಡಿದರು. ನಂದೀಶ ದೊರೆ, ಗೌಡಪ್ಪ ಬಿರಾದಾರ, ಭೀಮಣ್ಣ ದೂರಿ ವಜ್ಜಲ್ , ಕನಕಪ್ಪ ಸಿದ್ದಾಪುರ, ಮಲ್ಲಣ್ಣ ಕಟ್ಟಿಮನಿ, ಭೀಮಣ್ಣ ನಾಟೆಕಾರ, ಶಿವಪ್ಪ ಸದಬ, ಸೋಮಣ್ಣಗೌಡ ಬೈಲಾಪುರ, ವೀರೇಶ್ ಗುಳಬಾಳ ಸೇರಿದಂತೆ ಇತರರಿದ್ದರು.-----ಫೋಟೊ------
26ವೈಡಿಆರ್8 : ಎಸ್ಸಿ, ಎಸ್ಟಿ ವಿರೋಧಿ ನೀತಿ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಹುಣಸಗಿಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಸಂರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟಿಸಿ ತಹಸೀಲ್ದಾರ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.