ಚಳ್ಳಕೆರೆ ನಗರದ ನಗರಸಭೆ ಕಾರ್ಯಾಲಯದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ವಾಸುದೇವ ಮೇಟಿಬಣ)ದಿಂದ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಕಳೆದ 2019ರಲ್ಲಿ ನಗರದಾದ್ಯಂತ ಕೋವಿಡ್‌ ಮಾರಿ ವ್ಯಾಪಿಸಿ ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡಿದ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಕಾರ್ಯ ನಿರ್ವಹಿಸಿದ 18 ಪೌರ ಕಾರ್ಮಿಕರನ್ನು ಮರುನೇಮಕ ಮಾಡಿಕೊಳ್ಳಬೇಕಲ್ಲದೆ, ಹಾಲಿ ಇರುವ ಹೊರಗುತ್ತಿಗೆ ಪೌರಕಾರ್ಮಿಕರನ್ನು ಸೇವೆಯಲ್ಲಿ ಮುಂದುವರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ವಾಸುದೇವ ಮೇಟಿ ಬಣ) ತಾಲೂಕು ಘಟಕದ ಮಹಿಳಾ ಅಧ್ಯಕ್ಷ್ಯೆಎನ್.ಜಯಲಕ್ಷ್ಮಿ ನಗರಸಭೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದವರು, 2019ರಲ್ಲಿ ಸಾರ್ವಜನಿಕರು ಮನೆಯಿಂದ ಹೊರಗೆ ಬರುವ ವಾತಾವರಣವಿರಲಿಲ್ಲ. ಎಲ್ಲೆಡೆ ಸಾವಿನ ಸುದ್ದಿಗಳು ಹರಿದಾಡುತ್ತಿದ್ದವು. ವಿಶೇಷವಾಗಿ ಚಳ್ಳಕೆರೆ ನಗರದಲ್ಲಿ ಸ್ವಚ್ಚತೆಯನ್ನು ಕಾಪಾಡಿದ ಪರಿಣಾಮವಾಗಿ ಕೋವಿಡ್ ನಿಯಂತ್ರಣವಾಯಿತು. ಈ ಸಂದರ್ಭದಲ್ಲಿ ಕಾರ್ಯನಿರ್ವಹಿಸಿ 18 ಪೌರ ಕಾರ್ಮಿಕರನ್ನು ನಗರಸಭೆ ಆಡಳಿತ ಪುನರ್ ನೇಮಕ ಮಾಡಿಕೊಳ್ಳಬೇಕು ಹಾಗೂ ಹೊರಗುತ್ತಿಗೆದಾರರನ್ನು ಸೇವೆಯಲ್ಲಿ ಮುಂದುವರೆಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ಧಾರ್ ರೇಹಾನ್‌ ಪಾಷ, ತಾವು ನೀಡಿದ ಮನವಿ ಬಗ್ಗೆ ಪ್ರಸ್ತುತ ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳಿಗೆ ವರದಿ ಕಳಿಸುವ ಭರವಸೆ ನೀಡಿದರು.

ಪೌರಾಯುಕ್ತ ಎಚ್.ಜಿ.ಜಗರೆಡ್ಡಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿಬಣ) ಜಿಲ್ಲಾಧ್ಯಕ್ಷ ಈ.ಎನ್.ಲಕ್ಷ್ಮಿಕಾಂತ, ತಾಲೂಕು ಅಧ್ಯಕ್ಷ ವೇಮರೆಡ್ಡಿ, ನಾಗರಾಜ, ವೆಂಕಟೇಶ್, ಕೇಶವ, ಮಂಜುಳಾ, ಎಚ್.ಅಂಜಿನಪ್ಪ, ವಿಶ್ವಕರ್ಮ ಪರಿಷತ್ ರಾಜ್ಯಾಧ್ಯಕ್ಷ ಆರ್.ಪ್ರಸನ್ನಕುಮಾರ್, ಕಂದಿಕೆರೆಸುರೇಶ್‌ಬಾಬು, ಭಿ.ಫರೀದ್‌ಖಾನ್, ಕಂದಾಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮಲೆಕ್ಕಿಗ ಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.