ಸಾರಾಂಶ
ಹಾವೇರಿ: ರಾಣಿಬೆನ್ನೂರು ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿಯಾಗಿದ್ದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ ಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ, ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದವು.
ನಗರದ ಸಂಗೂರು ಕರಿಯಪ್ಪ ಪ್ರತಿಮೆ ಹತ್ತಿರ ಎಸ್ಎಫ್ಐ ಹಾಗೂ ಡಿವೈಎಫ್ಐ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ಈ ಘಟನೆ ಕುರಿತಂತೆ ಪೋಲಿಸರು ಒಬ್ಬ ಆರೋಪಿಯನ್ನು ಬಂಧಿಸಿರುವ ವರದಿಯಿದೆ. ಇನ್ನುಳಿದ ಇಬ್ಬರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಮೃತ ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ಹಾಗೂ ಸಮಾಜ ಘಾತುಕರಿಗೆ ಜಾತಿ, ಧರ್ಮ ಇರುವುದಿಲ್ಲ. ಇಂತಹ ದುಷ್ಟರನ್ನು ಮಟ್ಟ ಹಾಕಲು ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು. ಮಹಿಳೆಯರನ್ನು ಕೇವಲ ಭೋಗದ ವಸ್ತುವನ್ನಾಗಿ ಹಾಗೂ ಎರಡನೇ ದರ್ಜೆ ಪ್ರಜೆಯಾಗಿ ನೋಡುವ ಪುರುಷ ಪ್ರಧಾನ ವ್ಯವಸ್ಥೆಯನ್ನು ತೊಡೆದು ಹಾಕಿ ಲಿಂಗ ಸಮಾನತೆ ಕಲ್ಪಿಸಬೇಕು. ಇದನ್ನು ಸಾಧಿಸಲು ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು ಎಂದರು.ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ಹಾಗೂ ಭದ್ರತೆ ಒದಗಿಸಬೇಕು. ದುರುಳರಿಂದ ಕೊಲೆಯಾಗಿರುವ ಸ್ವಾತಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಹಾಗೂ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಭದ್ರತೆ ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.ಪ್ರತಿಭಟನೆಯಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷ ಉಡಚಪ್ಪ ಮಾಳಗಿ, ಅಲೆಮಾರಿ ಸಮುದಾಯ ಸಂಘಟನೆ ಜಿಲ್ಲಾಧ್ಯಕ್ಷ ಶೆಟ್ಟಿ ವಿಭೂತಿ, ಧನುಷ್ ದೊಡ್ಡಮನಿ, ಗಾಯತ್ರಿ ದಂಡಿ, ದಿವ್ಯಾ ಹುಡೇದಕರ, ರೇಷ್ಮಾ ಎನ್., ಭೂಮಿಕಾ ನರೆಗಲ್, ಅನ್ವಿಕಾ ಆರ್.ಬಿ. ಇತರರು ಇದ್ದರು.