ಶಿಕಾರಿಪುರ: ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆಗಾಗಿ ಲೈಂಗಿಕ ಕಿರುಕುಳ, ದೌರ್ಜನ್ಯ, ಅತ್ಯಾಚಾರದ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಇಲ್ಲಿನ ಸ್ತ್ರೀಬಂಧು ಸ್ವ.ಸಹಾಯ ಸಂಘಗಳ ಒಕ್ಕೂಟಗಳು ಮತ್ತು ವಿವಿಧ ಗ್ರಾಪಂ ವ್ಯಾಪ್ತಿಯ ಸ್ವ-ಸಹಾಯ ಸಂಘಗಳ ಒಕ್ಕೂಟಗಳ ವತಿಯಿಂದ ಗುರುವಾರ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಒಕ್ಕೂಟಗಳ ಅಧ್ಯಕ್ಷೆ ನಾಗವೇಣಿ ಮಾತನಾಡಿ, ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಕಿರುಕುಳ, ಹತ್ಯೆ ಮುಂತಾದ ಕಂಡು ಕೇಳರಿಯದ ಭೀಭತ್ಸ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ ಸಾವಿರಾರು ಅತ್ಯಾಚಾರ ಪ್ರಕರಣಗಳು ವಿಚಾರಣಾ ಹಂತದಲ್ಲಿವೆ. ಇಂತಹ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಮಹಿಳೆಯರು ಮತ್ತು ಮಕ್ಕಳು ಉಸಿರುಗಟ್ಟುವ ವಾತಾವರಣದಲ್ಲಿ ಜೀವಿಸುವ ಸಂದರ್ಭ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.ಮಹಿಳೆಯರ ವಿರುದ್ದದ ಇಂತಹ ಅನಾಗರಿಕ ಪ್ರಕರಣ ಶಾಶ್ವತವಾಗಿ ಸ್ಥಗಿತಗೊಳ್ಳಲು ಅಪರಾಧಿಗಳಿಗೆ ಕಠಿಣ ಶಿಕ್ಷೆ, ಶಾಶ್ವತ ಜಾಮೀನು ನಿರಾಕರಣೆ, ಅಥವಾ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಿ ಮಹಿಳೆಯರು ಭಯಮುಕ್ತರಾಗಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು. ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
ವಿವಿಧ ಗ್ರಾ.ಪಂ.ಒಕ್ಕೂಟಗಳ ಅಧ್ಯಕ್ಷರಾದ ರೇಖಾ, ಶ್ರುತಿ, ಮಮತಾ, ಮಧುಮತಿ, ಹಸೀನಾ ಭಾನು, ಶಹನಾಜಾ ಭಾನು ಸೇರಿದಂತೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಜರಿದ್ದರು.