ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರ ಪಾವತಿ ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿ. ಮಧ್ಯವರ್ತಿಗಳ ಹಾವಳಿಗೆ ಪಾಲಿಕೆ ಆಯುಕ್ತರು ಕಡಿವಾಣ ಹಾಕಲಿ ಎಂದು ದಕ್ಷಿಣ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯಿಸಿದ್ದಾರೆ.

- ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು: ಅಫ್ಸರ್ ಆಗ್ರಹ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರ ಪಾವತಿ ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿ. ಮಧ್ಯವರ್ತಿಗಳ ಹಾವಳಿಗೆ ಪಾಲಿಕೆ ಆಯುಕ್ತರು ಕಡಿವಾಣ ಹಾಕಲಿ ಎಂದು ದಕ್ಷಿಣ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯಿಸಿದ್ದಾರೆ.

ನೇರ ಪಾವತಿ ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯಲ್ಲೂ ಅನ್ಯಾಯ ಆಗದಂತೆ, ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆಯನ್ನು ಪಾಲಿಕೆ ಆಯುಕ್ತರು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್‌ ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್ ಅವಲಂಬಿತರಿಗೆ ಅರ್ಜಿ ನಮೂನೆಗಳನ್ನು ವಿತರಿಸಲಾಗಿದೆ. ಸೆ.11ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಮೊರೆ ಹೋಗದೇ ನೇರವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಪೌರ ಕಾರ್ಮಿಕರು ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಪೌರ ಕಾರ್ಮಿಕರಿಗೆ ಸಿಗಬೇಕಾದ ಉದ್ಯೋಗ ಅವಕಾಶವನ್ನು ಹಣದ ವ್ಯವಹಾರಕ್ಕೆ ಬಳಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಪಾಲಿಕೆ ಸಹಿಸಬಾರದು. ನೇಮಕಾತಿಯಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ನೇಮಕಾತಿ ಮಾಡುವುದಾಗಿ ಅಭ್ಯರ್ಥಿಗಳಿಂದ ಹಣ ಕೇಳುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಧ್ಯವರ್ತಿಗಳ ಬಗ್ಗೆ ದೂರುಗಳು ಕೇಳಿಬಂದ ತಕ್ಷಣ ‍ಅದರ ಬಗ್ಗೆ ತ್ವರಿತವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಅರ್ಜಿ ಸಲ್ಲಿಕೆ, ಅರ್ಹತಾ ಪರಿಶೀಲನೆ, ಆಯ್ಕೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಯ ಪ್ರತಿಯೊಂದು ಹಂತದ ಮಾಹಿತಿಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಲಭ್ಯವಾಗುವಂತೆ ಮಾಡಬೇಕು. ಯಾವುದೇ ಶಿಫಾರಸ್ಸು, ಹಣದ ವ್ಯವಹಾರ ಅಥವಾ ಮಧ್ಯವರ್ತಿಗಳ ಪ್ರಭಾವಕ್ಕೆ ಅ‍ವಕಾಶ ಇಲ್ಲವೆಂಬ ಸಂದೇಶವನ್ನು ಪಾಲಿಕೆ ಸ್ಪಷ್ಟವಾಗಿ ನೀಡಬೇಕು ಎಂದು ಮನವಿ ಮಾಡಿರುವರು.

ಇದು ಪೌರ ಕಾರ್ಮಿಕರ ಹಕ್ಕಾಗಿದೆ. ಉದ್ಯೋಗ ಕೊಡಿಸುವ ಹೆಸರಿನಲ್ಲಿ ಯಾರಿಗೂ ಒಂದು ರುಪಾಯಿ ಸಹ ಕೊಡಬಾರದು. ಅರ್ಹ ಅಭ್ಯರ್ಥಿಗಳು ಧೈರ್ಯದಿಂದ ನೇರವಾಗಿ ಅರ್ಜಿ ಸಲ್ಲಿಸಬೇಕು. ಹಣ ಕೇಳುವವರು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ‍ವೇ ದೂರು ನೀಡಬೇಕು. ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆ ನ್ಯಾಯಸಮ್ಮುತ, ಪಾರದರ್ಶಕ ಹಾಗೂ ಭ್ರಷ್ಟಾಚಾರ ಮುಕ್ತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರು, ಸಂಬಂಧಿಸಿದ ಅಧಿಕಾರಿಗಳಿಗೆ ಅಪ್ಸರ್ ಕೊಡ್ಲಿಪೇಟೆ ಒತ್ತಾಯಿಸಿದ್ದಾರೆ.

- - -

-6ಕೆಡಿವಿಜಿ1: ಅಪ್ಸರ್ ಕೊಡ್ಲಿಪೇಟೆ.

-6ಕೆಡಿವಿಜಿ2: ದಾವಣಗೆರೆ ಮಹಾ ನಗರ ಪಾಲಿಕೆಯ ಒಂದು ಸಂಗ್ರಹ ಚಿತ್ರ.