ದೇವನಹಳ್ಳಿ ಭೂ ಹೋರಾಟಗಾರರ ಬೇಷರತ್ ಬಿಡುಗಡೆಗೆ ಆಗ್ರಹ

| Published : Jun 27 2025, 12:49 AM IST

ಸಾರಾಂಶ

ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್‌ ಮೂಲಕ ಸಂಯುಕ್ತ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.

ಗಜೇಂದ್ರಗಡ: ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್‌ ಮೂಲಕ ಸಂಯುಕ್ತ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.

ಈ ವೇಳೆ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಅಧ್ಯಕ್ಷ ಬಾಲು ರಾಠೋಡ ಮಾತನಾಡಿ, ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿ ಹೋರಾಟಗಾರರನ್ನು ಬಂಧಿಸಿದ್ದಾರೆ ಎಂದ ಅವರು, ಸರ್ಕಾರದ ಕ್ರಮವನ್ನು ಸಂಘಟನೆಯಿಂದ ಖಂಡಿಸುತ್ತೇವೆ. ಚನ್ನರಾಯಪಟ್ಟಣ ಹೋಬಳಿಯ ೧೩ ಹಳ್ಳಿಗಳ ತಮ್ಮ ೧೧೭೭ ಎಕರೆ ಭೂಮಿ ಉಳಿಸಿಕೊಳ್ಳಲು ೧೧೮೧ ದಿನಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಸರ್ಕಾರ ಕಿವಿಕೊಡದೇ ಭೂ ಸ್ವಾಧೀನ ಪ್ರಕ್ರಿಯೆಯ ಅಂತಿಮ ಘಟ್ಟಕ್ಕೆ ಕೈ ಹಾಕಿದ ಹಿನ್ನೆಲೆ ಹೋರಾಟ ಬೆಂಬಲಿಸಿದ ರಾಜ್ಯದ ಸಾಮಾಜಿಕ ಕಾರ್ಯಕರ್ತರು ಹಾಗೂ ಹೋರಾಟಗಾರನ್ನು ಬಂಧಿಸಿದ್ದು ಖಂಡನೀಯ ಎಂದರು.ಬೀದಿ ಬದಿ ವ್ಯಾಪಾರಸ್ಥರು ಸಂಘದ ಪೀರು ರಾಠೋಡ ಮಾತನಾಡಿ, ಬಂಧಿತ ಹೋರಾಟಗಾರರನ್ನು ಯಾವುದೇ ಪ್ರಕರಣಗಳನ್ನು ಹಾಕದೇ ಬೇಷರತ್ ಬಿಡುಗಡೆ ಮಾಡಬೇಕು. ವೈಯಕ್ತಿಕವಾಗಿ ಸಂಘಟನಾತ್ಮಕವಾಗಿ ಆಗಿರುವ ಅನಾಹುತ ಸರಕಾರವೇ ತುಂಬಿಕೊಡಬೇಕು. ಅಮಾನವೀಯ ದೌರ್ಜನ್ಯ ಎಸಗಿದ ಪೋಲಿಸರ ಮೇಲೆ ಕ್ರಮಕೈಗೊಳ್ಳಬೇಕು, ತನಿಖೆ ನಡೆಸಬೇಕು. ಇನ್ನೆಂದೂ ಹೋರಾಟವನ್ನು ಮುರಿಯುವ ಅಸಾಂವಿಧಾನಿಕ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.ಡಿವಾಯ್‌ಎಫ್‌ಐ ಮುಖಂಡ ದಾವಲಸಾಬ ತಾಳಿಕೋಟಿ ಮಾತನಾಡಿ, ಸರ್ಕಾರ ತನ್ನ ಭೂ ಸ್ವಾಧೀನ ನೀತಿ ಕೈ ಬಿಡಬೇಕು. ಇಡೀ ರಾಜ್ಯಾದ್ಯಂತ ಈ ಪ್ರತಿಭಟನೆ ತೀವ್ರವಾಗಿ ನಡೆಯಲಿದೆ. ಪ್ರಜಾಸತ್ತಾತ್ಮಕ ಹೋರಾಟವನ್ನು ಪ್ರತಿಬಂಧಿಸಿ ಹೋರಾಟಗಾರರನ್ನು ಅಮಾನವೀಯವಾಗಿ ಹಿಂಸಿಸಿ ಬಂಧಿಸಿದ ನಡೆಯನ್ನು ನಾವು ಖಂಡಿಸುತ್ತೇವೆ. ಪೊಲೀಸ್ ದೌರ್ಜನ್ಯ ಖಂಡಿಸುತ್ತೇವೆ ಎಂದ ಅವರು, ಫಲವತ್ತಾದ ಭೂಮಿಯಲ್ಲಿ ತಮ್ಮ ಬದುಕು ಕಂಡುಕೊಂಡ ಯಾವುದೇ ರೈತರ ತಂಟೆಗೆ ಬರಬೇಡಿ. ರೈತರ ಭೂಮಿ ರೈತರದ್ದೇ ಆಗಿ ಉಳಿಸಬೇಕು, ಬೇಷರತ್ತಾಗಿ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು. ರೈತರ ಭೂಮಿಯನ್ನು ಸರ್ಕಾರದ ಯಾವುದೇ ಯೋಜನೆಗೆ ನೀಡಬಾರದು, ಕೂಡಲೇ ಕ್ಯಾಬಿನೆಟ್ ನಿರ್ಣಯ ಮಾಡಬೇಕು ಎಂದರು.ಮೆಹಬೂಬ ಹವಾಲ್ದಾರ, ರೂಪ್ಲೇಶ ಮಾಳೊತ್ತರ, ನೀಲಮ್ಮ ಹಿರೇಮಠ ಸೇರಿದಂತೆ ಕಟ್ಟಡ ಕಾರ್ಮಿಕ ಸಂಘಟನೆ, ಬೀದಿ ಬದಿ ವ್ಯಾಪಾರಸ್ಥರ ಸಂಘ, ಅಂಗನವಾಡಿ ನೌಕರರ ಸಂಘ, ಕೃಷಿಕೂಲಿಕಾರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು.