ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬಿಸಿಯೂಟ ಕಾರ್ಮಿಕರಿಗೆ ಮಾಸಿಕ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಸಿಯೂಟ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಅಂಗವಾಗಿ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ಬಿಸಿಯೂಟ ನೌಕರರಿಗೆ ಮಾಸಿಕ ವೇತನವನ್ನು 7000ಕ್ಕೆ ಹೆಚ್ಚಿಸಬೇಕು. ಸರ್ಕಾರಗಳು ಬದಲಾಗುತ್ತಿದ್ದರೂ ನೀತಿಗಳು ಬದಲಾಗುತ್ತಿಲ್ಲ. 2008 ರಿಂದ ಕೇಂದ್ರ ಸರ್ಕಾರ ಈ ಬಡ ಮಹಿಳೆಯರ ವೇತನ ಹೆಚ್ಚಳ ಮಾಡಿಲ್ಲ. ಜಿಲ್ಲೆಯಲ್ಲಿ ಸುಮಾರು 4500ಕ್ಕೂ ಹೆಚ್ಚು ಬಿಸಿಯೂಟ ಕಾರ್ಮಿಕರಿದ್ದು, ರಾಜ್ಯದಲ್ಲಿ 1,18,000 ಕ್ಕೂ ಹೆಚ್ಚು ಮಂದಿ ಇದ್ದಾರೆ. ಇವರ ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಕೊಟ್ಟ ಆಶ್ವಾಸನೆಯಂತೆ ಬಿಸಿಯೂಟ ಕಾರ್ಮಿಕರಿಗೆ ಮಾಸಿಕ 7000 ರು. ವೇತನ ಕೊಡಬೇಕು. ಬೆಲೆ ಏರಿಕೆ ಆಧಾರದಲ್ಲಿ ಅನುದಾನ ಹೆಚ್ಚಾಗಿ ನೀಡಬೇಕು. ಇಸ್ಕಾನ್ಗೆ ಬಿಸಿಯೂಟ ವಹಿಸುವ ಪ್ರಸ್ತಾಪ ಕೈ ಬಿಡಬೇಕು. ಖಾಸಗಿ ಸಂಸ್ಥೆಗಳಿಗೆ ಈ ಜವಾಬ್ದಾರಿ ನೀಡಬಾರದು ಎಂದು ಒತ್ತಾಯಿಸಿದರು.ಎಲ್ಲಾ ಜಿಲ್ಲೆಗಳಲ್ಲಿ ನಿವೃತ್ತಿ ಹೊಂದಿದ ನೌಕರರಿಗೆ ಇಡುಗಂಟು ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯದ ಉಚ್ಚ ನ್ಯಾಯಾಲಯ 6 ಗಂಟೆ ಕೆಲಸದ ಅವಧಿಯ ಸುತ್ತೋಲೆ ಹೊರಡಿಸಬೇಕು. ಮಾಸಿಕ ಪಿಂಚಣಿ 10,000 ರು. ತೀರ್ಮಾನಿಸಿದಂತೆ ವರ್ಷದ 12 ತಿಂಗಳೂ ಕೆಲಸ ಮತ್ತು ಕನಿಷ್ಟ ಕೂಲಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಸಬೇಕು. ಕೆಲಸದ ಸಮಯದಲ್ಲಿ ಮರಣ ಹೊಂದಿದರೆ 25 ಲಕ್ಷ ರು. ಪರಿಹಾರ ನೀಡಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ನಿಲ್ಲಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಎರಡು ಜನ ಅಡುಗೆಯವರು ಇರಲೇಬೇಕು ಎಂಬುದೂ ಸೇರಿದಂತೆ ಸುಮಾರು 19 ಕ್ಕೂ ಹೆಚ್ಚು ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಸಂಘದ ಅಧ್ಯಕ್ಷೆ ಹನುಮಮ್ಮ, ಪ್ರಧಾನ ಕಾರ್ಯದರ್ಶಿ ಸುನಿತಾ, ಖಜಾಂಚಿ ಸೂರ್ಯಕಲಾ, ಸಿಐಟಿಯು ಸಂಚಾಲಕ ಎಂ. ನಾರಾಯಣ, ವಿವಿಧ ತಾಲೂಕಿನ ಅಧ್ಯಕ್ಷರಾದ ಭಾಗ್ಯಮ್ಮ, ಜಯಮ್ಮ, ವಿಜಯಲಕ್ಷ್ಮಿ, ಗೀತಾ, ರೂಪಾ, ಚಂದ್ರಮ್ಮ, ಅಶ್ವಿನಿ, ತಾರಾ ಹಾಗೂ ಸಿಐಟಿಯುನ ಲಕ್ಷ್ಮಿ ನಾರಾಯಣ, ಮುನಿರಾಜ್, ಯಲ್ಲಪ್ಪ, ಷಣ್ಮುಖಪ್ಪ ಮುಂತಾದವರಿದ್ದರು.
-------------ಪೊಟೋ: 10ಎಸ್ಎಂಜಿಕೆಪಿ05
ಬಿಸಿಯೂಟ ಕಾರ್ಮಿಕರಿಗೆ ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಸಿಯೂಟ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆಯ ಅಂಗವಾಗಿ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.