ಕನ್ನಡಪ್ರಭ ವಾರ್ತೆ ಹಾಸನ
ಕಳೆದ ಐದಾರು ದಶಕಗಳಿಂದ ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ನೀಡಿಲ್ಲ. ಹಾಗಾಗಿ ಈ ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಎಸ್ಸಿ-ಎಸ್ಟಿ ಸಮುದಾಯದ ಅರ್ಹ ಹಾಗೂ ಪಕ್ಷನಿಷ್ಠ ಮುಖಂಡರಿಗೆ ನೀಡಬೇಕು ಎಂದು ಎಸ್ಸಿ-ಎಸ್ಟಿ ಘಟಕದ ಮಾಜಿ ಸಹ ಸಂಚಾಲಕ ರತನ್ ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಹಾಸನ ಜಿಲ್ಲಾ ಕಾಂಗ್ರೆಸ್ನ ಇತಿಹಾಸವನ್ನು ಗಮನಿಸಿದರೆ ವಿವಿಧ ಸಮುದಾಯಗಳಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಆದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮಾತ್ರ ಈ ಅವಕಾಶ ದೊರೆತಿಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಗೆ ವಿವಿಧ ಸಮುದಾಯಗಳ ಮುಖಂಡರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಲಿಂಗಾಯತ ಸಮುದಾಯದ ಜಿ.ಸಿ. ಸಿದ್ಧಪ್ಪ ಹಾಗೂ ಜಾವಗಲ್ ಮಂಜುನಾಥ್, ಬ್ರಾಹ್ಮಣ ಸಮುದಾಯದ ದಿವಂಗತ ಹಾರನಹಳ್ಳಿ ರಾಮಸ್ವಾಮಿ, ಕುರುಬ ಸಮುದಾಯದ ಮುಖಂಡರು ಸೇರಿದಂತೆ ಹಲವು ಸಮುದಾಯಗಳಿಗೆ ಸೇರಿದವರಿಗೆ ಜಿಲ್ಲಾ ಕಾಂಗ್ರೆಸ್ ನೇತೃತ್ವದ ಅವಕಾಶ ದೊರೆತಿದೆ. ಎಸ್. ಎಂ. ಆನಂದ್ ಅವರು ಎರಡು ಬಾರಿ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಬಿ. ಶಿವರಾಂ ಅವರೂ ಜಿಲ್ಲಾ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದಾರೆ.
ಪ್ರಸ್ತುತ ಅತಿ ಸಣ್ಣ ಹಿಂದುಳಿದ ಸಮುದಾಯಕ್ಕೆ ಸೇರಿದ ಇ. ಲಕ್ಷ್ಮಣ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದರು. ಆದರೆ ಜಿಲ್ಲೆಯ ರಾಜಕೀಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಹಾಗೂ ಮತದಾರರ ಸಂಖ್ಯೆ ಗಣನೀಯವಾಗಿದ್ದರೂ, ಆ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಟ್ಟದ ಅತ್ಯುನ್ನತ ಸಂಘಟನಾ ಜವಾಬ್ದಾರಿ ನೀಡುವಲ್ಲಿ ನಿರಂತರವಾಗಿ ಅನ್ಯಾಯವಾಗಿದೆ. ದಲಿತ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ನೋಡಬಾರದು. ಅಧಿಕಾರ ಮತ್ತು ಸಂಘಟನಾ ಜವಾಬ್ದಾರಿಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ವಿಜಯಕುಮಾರ್, ಮಲ್ಲೇಶ್, ಕೃಷ್ಣಪ್ಪ ಇತರರು ಇದ್ದರು.