ಕೊಪ್ಪಳ: ನಗರದ ರಾಜಕಾಲುವೆ ಒತ್ತುವರಿ ತೆರವು ಹಾಗೂ ಗಿಡಗಂಟಿಗಳನ್ನು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿ, ಮುಂಗಾರು ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಆಗ್ರಹಿಸಲಾಗಿದೆ.

ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ನಗರಸಭೆ ಮುಂದೆ ಸೋಮವಾರ ಸಾಂಕೇತಿಕ ಧರಣಿ ನಡೆಸಿ, ನಗರಸಭೆ ಆಡಳಿತ ಅಧಿಕಾರಿಯಾದ ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ ಅವರಿಗೆ ಪ್ರಭಾರಿ ಪೌರಾಯುಕ್ತ ಮಂಜುನಾಥ ಗುಂಡೂರ್ ಅವರ ಮೂಲಕ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸದೆ ನಿರ್ಲಕ್ಷ್ಯ ಮಾಡಿರುವ ಮತ್ತು ನಗರದ ಎಲ್ಲ ಬಡಾವಣೆಗಳ ವಾರ್ಡ್‌ಗಳ ಚರಂಡಿಗಳನ್ನು ಸ್ವಚ್ಛಗೊಳಿಸಲು ನಿರಾಸಕ್ತಿ ತೋರಿರುವ ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಘೋಷಣೆ ಕೇಳಿಬಂದಿತು.

ನಗರದ ಎಲ್ಲ ಬಡಾವಣೆಗಳ ಚರಂಡಿಗಳ ಗಿಡಗಂಟಿಗಳು ಹಾಗೂ ತುಂಬಿದ ಹೂಳು ತೆಗೆಯುವ ಕಾರ್ಯ ತುರ್ತಾಗಿ ನಡೆಸಬೇಕು. ಮಳೆ ನೀರು ಸರಾಗವಾಗಿ ಹರಿದುಹೋಗಲು ಇಡೀ ರಾಜಕಾಲುವೆ ನವೀಕರಣಗೊಳಿಸುವ ಕಾಮಗಾರಿ ನಡೆಸಬೇಕು. ನಗರಸಭೆ ಸಕಾಲಕ್ಕೆ ಕ್ರಿಯಾಶೀಲಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಸಾರ್ವಜನಿಕರನ್ನು ಒಟ್ಟುಗೂಡಿಸಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ. ಗಫಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖ್ಯ ಸಂಚಾಲಕ ಬಸವರಾಜ್ ಶೀಲವಂತರ್, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣವರ್, ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ತುಕಾರಾಮ್ ಪಾತ್ರೋಟಿ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮುದುಕಪ್ಪ ಹೊಸಮನಿ, ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಡಾ: ಎನ್. ಮೂರ್ತಿ ಸ್ಥಾಪಿತ) ರಾಜ್ಯ ಕಾರ್ಯದರ್ಶಿ ರಾಮಣ್ಣ ಕಂದಾರಿ, ರಾಜ್ಯ ಹಿರಿಯ ಮುಖಂಡ ಡಾ. ಬಿ. ಜ್ಞಾನಸುಂದರ ಇದ್ದರು.