ರಾಣಿಬೆನ್ನೂರು: ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಡಿ.ಕೆ. ಶಿವಕುಮಾರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸ್ಥಳೀಯ ಶಾಸಕ ಪ್ರಕಾಶ ಕೋಳಿವಾಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಿಶಾರ್ಡ್ ಸಂಸ್ಥೆ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮುಖಂಡರಾದ ರುಕ್ಮಿಣಿ ಸಾವುಕಾರ ಹೇಳಿದರು. ನಗರದಲ್ಲಿ ಭಾನುವಾರ ಸ್ಥಳೀಯ ಶಾಸಕ ಪ್ರಕಾಶ ಕೋಳಿವಾಡರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸಂಪುಟದಲ್ಲಿ ಯುವಕರಿಗೆ ಪ್ರಾಧಾನ್ಯತೆ ನೀಡುವಂತೆ ಪಕ್ಷದ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಯುವನಾಯಕ ಪ್ರಕಾಶ ಕೋಳಿವಾಡರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ. ಈಗಾಗಲೇ ಶಾಸಕರು ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವುದರಿಂದ ರಾಣಿಬೆನ್ನೂರು ತಾಲೂಕು ಜಿಲ್ಲೆಯಲ್ಲಿಯೇ ಹೆಚ್ಚಿನ ಅಭಿವೃದ್ಧಿ ಕಾಣಲಿದೆ ಎಂದು ಒತ್ತಾಯಿಸಿದರು.ಅಂಜುಮನ್ ಸಂಸ್ಥೆ ಅಧ್ಯಕ್ಷ ಎಚ್.ಎಫ್. ಬಿದರಿ, ಬಿದರಿ ಮಾತನಾಡಿ, ಶಾಸಕರು ಹೊಸ ಹೊಸ ಚಿಂತನೆ ಹೊಂದಿದ್ದು ಶಿಕ್ಷಣ ಕ್ಷೇತ್ರದ ಸುಧಾರಣೆಗೆ ವಿಶೇಷ ಒತ್ತು ನೀಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ಹಾಗೂ ಕಂಪ್ಯೂಟರ್ ತರಬೇತಿ ಮಕ್ಕಳಲ್ಲಿ ಕೊಡಿಸಲು ಶ್ರಮವಹಿಸಿದ್ದಾರೆ. ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದರು. ಬಿ.ಬಿ.ನಂದ್ಯಾಲ ಮಾತನಾಡಿ, ಹೊಸಬರ ಕೋಟಾದಲ್ಲಿ ಪ್ರಕಾಶ ಕೋಳಿವಾಡ ಅವರಿಗೆ ಸಚಿವ ಸ್ಥಾನ ನೀಡಬೇಕು. ಅವರು ಶಾಸಕರಾಗಿ ಆಯ್ಕೆಯಾದಾಗಿನಿಂದ ಕ್ಷೇತ್ರದ ಅಭ್ಯುದಯಕ್ಕಾಗಿ ಸಾಕಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಣ, ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ನೀಡಿದ್ದು ಸಚಿವ ಸ್ಥಾನ ನೀಡಿದಲ್ಲಿ ಅದನ್ನು ಸಮರ್ಪಕವಾಗಿ ನಿರ್ವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಅವರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಅಶೋಕ ನಾಯ್ಕ್, ಮುಂದಿನಮನಿ, ಬೇಬಕ್ಕ ಮೆಣಸಿನಹಾಳ, ಅಜರೆಡ್ಡಿ, ಡಾ. ಮನೋಜ ಸಾವುಕಾರ, ಇರ್ಫಾನ್ ದಿಡಗೂರ ಮತ್ತಿತರರಿದ್ದರು.