ಜಮಖಂಡಿ: ರಾಜ್ಯದ ನೂತನ ಸರ್ಕಾರದಲ್ಲಿ ಹಿರಿಯ ನಾಯಕ, ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ಮುಸ್ಲಿಂ ಮುಖಂಡ ಫಕೀರಸಾಬ ಭಾಗವಾನ ಒತ್ತಾಯಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಜಮಖಂಡಿ:
ರಾಜ್ಯದ ನೂತನ ಸರ್ಕಾರದಲ್ಲಿ ಹಿರಿಯ ನಾಯಕ, ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ಮುಸ್ಲಿಂ ಮುಖಂಡ ಫಕೀರಸಾಬ ಭಾಗವಾನ ಒತ್ತಾಯಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಬಲ ಅಹಿಂದ ನಾಯಕರಾಗಿ ಗುರುತಿಸಿಕೊಂಡಿರುವ ತಿಮ್ಮಾಪೂರ ಅವರು ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಾ ಬಂದಿದ್ದಾರೆ. ಅತ್ಯಂತ ಅನುಭವಿ ರಾಜಕಾರಣಿಯಾಗಿರುವ ಅವರು, ಎಡಗೈ ಸಮುದಾಯದ ಉತ್ತರ ಕರ್ನಾಟಕದ ಏಕೈಕ ಪ್ರಮುಖ ನಾಯಕರಾಗಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದರು.ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಅವರ ಗೆಲುವಿನ ಹಿಂದೆ ತಿಮ್ಮಾಪೂರ ಅವರ ಚಾಣಾಕ್ಷ ನಡೆ ಹಾಗೂ ರಾಜಕೀಯ ತಂತ್ರಗಾರಿಕೆ ಪ್ರಮುಖ ಪಾತ್ರ ವಹಿಸಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡುವುದರಿಂದ ಪಕ್ಷದ ಸಂಘಟನೆಗೆ ಆನೆ ಬಲ ಬಂದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮುಖಂಡರಾದ ಅಬುಬಕರ ಕುಡಚಿ, ಪೀರಾ ಖಾದ್ರಿ, ಮಲ್ಲಪ್ಪ ಚಾಮೋಜಿ, ಅಪ್ಪಾಸಾಬ ಮನಗೂಳಿ, ಹಾಜಿ ಅಲ್ತಾಪ ಸಗರ, ಹುಸೇನ ಟಿನಮೇಕರ ಹಾಗೂ ಶಾಹಿದ ಬಿಲಕೇರಿ ಅವರು ಮಾತನಾಡಿ, ಉತ್ತರ ಕರ್ನಾಟಕದ ಹಿತದೃಷ್ಟಿಯಿಂದ ಆರ್.ಬಿ. ತಿಮ್ಮಾಪೂರ ಅವರಿಗೆ ತಕ್ಷಣವೇ ಡಿಸಿಎಂ ಸ್ಥಾನ ಕಲ್ಪಿಸಬೇಕು ಎಂದು ಜಂಟಿಯಾಗಿ ಒತ್ತಾಯಿಸಿದರು.