ಅನುದಾನರಹಿತ ಶಾಲೆಗಳನ್ನು ಗುರುತಿಸಿ, ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಡಿಸುವ ಮೂಲಕ ವೇತನ ಅನುದಾನವನ್ನು ನೀಡಬೇಕೆಂದು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ನೀಲಪ್ಪ ಚಾವಡಿ ಹೇಳಿದರು.

ಹಾವೇರಿ: ಕಳೆದ 30 ವರ್ಷಗಳಿಂದ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡುತ್ತಿರುವ ಅನುದಾನರಹಿತ ಶಾಲೆಗಳನ್ನು ಗುರುತಿಸಿ, ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಡಿಸುವ ಮೂಲಕ ವೇತನ ಅನುದಾನವನ್ನು ನೀಡಬೇಕೆಂದು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ನೀಲಪ್ಪ ಚಾವಡಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು.ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶಿಕ್ಷಣ ನೀಡುವ ಉದ್ದೇಶದಿಂದ ಕಳೆದ 30 ವರ್ಷಗಳ ಹಿಂದೆ ಕನ್ನಡ ಶಾಲೆಗಳು ಸ್ಥಾಪಿತಗೊಂಡಿವೆ. 1995ರಿಂದ ಇಲ್ಲಿ ವರೆಗೂ ಮಕ್ಕಳಿಗೆ ಶಿಕ್ಷಣ ಕೊಡುತ್ತಿರುವ ಖಾಸಗಿ ಶಾಲೆಗಳು ಸರ್ಕಾರದಿಂದ ಯಾವುದೇ ಅನುದಾನವಿಲ್ಲದೇ ಸಂಕಷ್ಟದಲ್ಲಿವೆ. ಚುನಾವಣೆ ಪೂರ್ವದಲ್ಲಿ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಭರವಸೆ ನೀಡಿದ್ದ ಸರ್ಕಾರವೂ ನಿಷ್ಕಾಳಜಿ ವಹಿಸುತ್ತಿದೆ. ಜಿಲ್ಲೆಯಲ್ಲಿ 352 ಅನುದಾನ ರಹಿತ ಖಾಸಗಿ ಕನ್ನಡ ಶಾಲೆಗಳು, 43 ಅನುದಾನ ರಹಿತ ಖಾಸಗಿ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಸಿಬ್ಬಂದಿಗೆ ಸಂಬಳ, ಮೂಲಸೌಕರ್ಯ ಒದಗಿಸುವಲ್ಲಿ ಸಂಕಷ್ಟಪಡುವತಾಗಿದೆ ಎಂದು ಹೇಳಿದರು.

1995ರ ನಂತರ ಪ್ರಾರಂಭವಾದ ಕನ್ನಡ ಮಾತೃಭಾಷಾ ಶಾಲೆಗಳನ್ನು ಗುರುತಿಸಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಿ ವೇತನ ಅನುದಾನವನ್ನು ಒದಗಿಸಬೇಕು. ಈ ಹಿಂದೆ ಗ್ರಾಮೀಣ ಹಾಗೂ ನಗರ ಪ್ರದೇಶದ ಬಡವರಿಗೆ ಆಸರೆಯಾಗಿದ್ದ ಆರ್‌ಟಿಇ (ಶಿಕ್ಷಣ ಹಕ್ಕು ಕಾಯಿದೆ)ಯನ್ನು ಪುನಃ ಜಾರಿಗೆ ತರಬೇಕು. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ವಿಧಿಸಿರುವ ಮಾರ್ಗಸೂಚಿಗಳನ್ನು ಸರಳೀಕರಣ ಮಾಡಬೇಕು. ಆರ್‌ಟಿಇ ಕಾಯಿದೆ ಅಡಿಯಲ್ಲಿ ಆಯ್ಕೆಯಾದ ಶಾಲೆಗಳಿಗೆ ಬರಬೇಕಾದ ಶುಲ್ಕ ಮರುಪಾವತಿ ಹಣವನ್ನು ಈ ಕೂಡಲೇ ಎಲ್ಲ ಶಾಲೆಗಳಿಗೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸುರೇಶ ಬಿಷ್ಟನಗೌಡ್ರ, ತಿಪ್ಪೇಸ್ವಾಮಿ ಹೊಸಮನಿ, ಮುತ್ತಯ್ಯ ಕಿತ್ತೂರಮಠ, ಮಂಜುನಾಥ ಮಡಿವಾಳರ ಇದ್ದರು.

ಕಾಂಗ್ರೆಸ್ ಸರ್ಕಾರ ಅನುದಾನ ರಹಿತ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸಿದೆ. ಬಜೆಟ್‌ನಲ್ಲೂ ಖಾಸಗಿ ಶಾಲೆಗಳಿಗೆ ಅನುದಾನ ಮೀಸಲಿಡುವ ಪ್ರಸ್ತಾಪ ಮಾಡಿಲ್ಲ. ಇರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳಿಗೆ ವಿಲೀನ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಡಾ. ಬಿ.ಆರ್ ಅಂಬೇಡ್ಕರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಿ.ಎಸ್. ಮಾಳಗಿ ಆಗ್ರಹಿಸಿದ್ದಾರೆ.ಸಾಂಕೇತಿಕ ಪ್ರತಿಭಟನೆ ಇಂದು

ಖಾಸಗಿ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ರಾಜ್ಯ ಸಂಘ ನೀಡಿರುವ ಕರೆಯನ್ನು ಬೆಂಬಲಿಸಿ ಹಾವೇರಿ ನಗರದಲ್ಲಿ ಮಾ. 12ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 11ಕ್ಕೆ ನಗರದ ಎಂ.ಜಿ. ವೃತ್ತದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗುವುದು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಜಿಲ್ಲೆಯಲ್ಲಿರುವ ಎಲ್ಲ ಅನುದಾನ ರಹಿತ ಖಾಸಗಿ ಕನ್ನಡ ಮಾಧ್ಯಮ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.