ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗ ದಳದ ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕೊಡಗು ಜಿಲ್ಲಾ ಘಟಕದ ಪ್ರಮುಖರು ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಮಡಿಕೇರಿ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗ ದಳದ ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕೊಡಗು ಜಿಲ್ಲಾ ಘಟಕದ ಪ್ರಮುಖರು ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.ಶಿಕಾರಿಪುರದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಲು ಮುಂದಾದ ಗೋ ರಕ್ಷಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಕಾರ್ಯಕರ್ತರು ಗಾಯಗೊಂಡಿದ್ದಾರೆ, ವಾಹನಗಳಿಗೆ ಹಾನಿ ಮಾಡಲಾಗಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಗೋ ರಕ್ಷಕರ ಮೇಲೆ ದಾಳಿ ನಡೆಸಿದ ಎಲ್ಲ ಆರೋಪಿಗಳನ್ನು ಹಾಗೂ ಘಟನೆ ಹಿಂದಿರುವ ಸಂಚುಕೋರರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020ರ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಗೋ ಸಾಗಾಟ, ಅಕ್ರಮ ಕಸಾಯಿಖಾನೆಗಳು ಹಾಗೂ ಪರವಾನಗಿ ಇಲ್ಲದ ಮಾಂಸದ ಅಂಗಡಿಗಳ ವಿರುದ್ಧ ತಕ್ಷಣ ಕಾರ್ಯಾಚರಣೆ ನಡೆಸಿ ಬಂದ್ ಮಾಡಿಸಬೇಕು.ಅಕ್ರಮ ಗೋ ಸಾಗಾಟ ತಡೆಗಟ್ಟಲು ಜಿಲ್ಲೆಗಳು ಹಾಗೂ ಗಡಿ ಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸುವುದು ಮತ್ತು ವಿಶೇಷ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅಕ್ರಮ ಸಾಗಾಟ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಮುಖರು ಮನವಿ ಪತ್ರ ಮೂಲಕ ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭ ವಿಹಿಂಪ, ಬಜರಂಗ ದಳದ ಜಿಲ್ಲಾ ಸಹ ಸಂಯೋಜಕ ದುರ್ಗೇಶ್ ಭಜರಂಗಿ, ತಾಲ್ಲೂಕು ಸಹ ಸಂಯೋಜಕ ಮುಕುಂದ್, ತಾಲೂಕು ಗೋ ರಕ್ಷಾ ಪ್ರಮುಖ್ ರಾಜೇಶ್ ಮಣಿ, ನಗರ ಸಹ ಸಂಯೋಜಕ ಅಜಿತ್ ಶೆಟ್ಟಿ ಸೇರಿದಂತೆ ಬಜರಂಗ ದಳದ ಕಾರ್ಯಕರ್ತರಾದ ಮಣಿ, ಕೇಶವ, ರಂಜಿತ್, ವಿನೋದ್, ಗಣೇಶ್ ಹಾಗೂ ಹರ್ಷಿತ್ ಇದ್ದರು.