ಹಾವೇರಿಯ ಜಿಪಂ ಕಚೇರಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಸಚಿವ ಶಿವಾನಂದ ಪಾಟೀಲಗೆ ಮನವಿ ಸಲ್ಲಿಸಿದರು.

ಹಾವೇರಿ: ಅಕ್ರಮ ಸಕ್ರಮ ಯೋಜನೆ ಮರುಜಾರಿ, ಸಮರ್ಪಕ ವಿದ್ಯುತ್ ಪೂರೈಕೆ, ಓವರ್ ಲೋಡ್ ಟಿಸಿ ಅಪ್‌ಗ್ರೇಡ್ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ರೈತ ಮುಖಂಡರು ಶುಕ್ರವಾರ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಮನವಿ ಸಲ್ಲಿಸಿದರು.ಈ ವೇಳೆ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ಜಿಲ್ಲೆಯ ರೈತರ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಸುವ ಯೋಜನೆಯಿಂದಾಗಿ ರೈತರಿಗೆ ಬಹಳಷ್ಟು ಅನಾನುಕೂಲ ಆಗುತ್ತಿದ್ದು ತಕ್ಷಣದಿಂದಲೇ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೆ ತರಬೇಕು. ಕೃಷಿ ಪಂಪ್‌ಸೆಟ್‌ಗಳ ಟಿಸಿಗಳು ಬಹಳಷ್ಟು ಓವರ್ ಲೋಡ್ ಆಗಿದ್ದು, ತಕ್ಷಣ ಓವರ್ ಲೋಡ್ ಆದ ಟಿಸಿಗಳನ್ನು ಅಪ್ ಗ್ರೇಡ್ ಮಾಡಬೇಕು. ಎಲ್ಲಾ ತಾಲೂಕುಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಬೆಳೆಗಳು ಒಣಗುತ್ತಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಏಳು ಗಂಟೆಗಳ ಬದಲಿಗೆ ಕೇವಲ 3-4 ಗಂಟೆ ಮಾತ್ರ ವಿದ್ಯುತ್ ಸಿಗುತ್ತಿದ್ದು, ತಕ್ಷಣದಿಂದಲೇ ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ವಿದ್ಯುತ್ ಪೂರೈಕೆ ಮಾಡಬೇಕೆಂದು ಜೊತೆಗೆ ಗ್ರೀಡ್‌ಗಳನ್ನು ಅಪ್‌ಗ್ರೇಡ್ ಮಾಡಬೇಕೆಂದು ಆಗ್ರಹಿಸಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಸುಟ್ಟ ಟ್ರಾನ್ಸಫಾರ್ಮರ್‌ಗಳನ್ನು 24 ಗಂಟೆಯೊಳಗೆ ಬದಲಾಯಿಸಬೇಕು. ಈ ಪ್ರಕ್ರಿಯೆಯನ್ನು ಹೆಸ್ಕಾಂ ಇಲಾಖೆ ಅಧಿಕಾರಿಗಳು ಮಾಡುತ್ತಿಲ್ಲ ಎಂದು ಆರೋಪಿಸಿದರು. ವಿದ್ಯುತ್ ವ್ಯತ್ಯಯದ ಜತೆಗೆ ಕಡಿಮೆ ವೋಲ್ಟೇಜ್ ಇರುವುದರಿಂದ ಪಂಪ್‌ಸೆಟ್‌ಗಳ ಮೋಟಾರ್‌ಗಳು ಸುಟ್ಟು ಹೋಗುತ್ತಿದ್ದು, ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ತಕ್ಷಣ ಕಡಿಮೆ ವೋಲ್ಟೇಜ್ ಸಮಸ್ಯೆ ಬಗೆಹರಿಸಬೇಕು. ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಮೂರು ತಿಂಗಳ ಹಿಂದೆ ಖರೀದಿ ಮಾಡಿದ ಗೋವಿನ ಜೋಳದ ಹಣ ಜಮಾ ಮಾಡಬೇಕು ಎಂದು ಆಗ್ರಹಿಸಿದರು.ಈ ವೇಳೆ ರಾಜ್ಯ ಸಮಿತಿ ಮುಖಂಡ ಮಾಲತೇಶ ಪೂಜಾರ, ಜಿಲ್ಲಾ ಉಪಾಧ್ಯಕ್ಷ ಎಚ್.ಎಚ್‌. ಮುಲ್ಲಾ, ಜಿಲ್ಲಾ ಕಾರ್ಯಾಧ್ಯಕ್ಷ ಶಿವಬಸಪ್ಪ ಗೋವಿ, ಶಿವಯೋಗಿ ಹೊಸಗೌಡ್ರ, ಮರಿಗೌಡ ಪಾಟೀಲ, ರುದ್ರಗೌಡ ಕಾಡನಗೌಡ್ರ, ಪ್ರಭುಗೌಡ ಪ್ಯಾಟಿ, ರಾಜು ತರ್ಲಗಟ್ಟ, ಶಂಕ್ರಣ್ಣ ಶಿರಗಂಬಿ, ಚೆನ್ನಪ್ಪ ಮರಡೂರ, ಗುಡ್ಡನಗೌಡ ಪ್ಯಾಟಿಗೌಡ್ರ, ಎ.ಆರ್. ಮಣಕೂರ, ಮಲ್ಲನಗೌಡ ಮಾಳಗಿ, ಜಗದೀಶ ಮೂಲಿಮನಿ, ಸುಭಾಷ ಬೆಣ್ಣಿಹಟ್ಟಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.