ಕಾರ್ಕಳ: ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಸಮುದಾಯದ ಪ್ರತಿನಿಧಿಯನ್ನು ನೇಮಕ ಮಾಡಬೇಕು ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬುಡಕಟ್ಟು ಜನಾಂಗದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ರಚಿಸಲಾಗಿರುವ ಆದಿವಾಸಿ ಅಭಿವೃದ್ಧಿ ನಿಗಮದಲ್ಲಿ ಇತರೆ ನಿಗಮಗಳ ನೀತಿ ಮತ್ತು ಮಾನದಂಡಗಳನ್ನು ಅನುಸರಿಸದೇ, ಆದಿವಾಸಿ ಸಮುದಾಯದ ಅಗತ್ಯಗಳಿಗೆ ಅನುಗುಣವಾದ ಹೊಸ ನೀತಿ ಹಾಗೂ ಮಾನದಂಡಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಅರಣ್ಯ ಹಕ್ಕುಪತ್ರ ಪಡೆದ ರೈತರ ಆರ್ಥಿಕ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಆದಿವಾಸಿ ಸಮುದಾಯದ ಆರೋಗ್ಯ ಹಿತದೃಷ್ಟಿಯಿಂದ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುವ ಯೋಜನೆ ರೂಪಿಸಬೇಕು ಎಂದು ಅವರು ತಿಳಿಸಿದ್ದಾರೆ.

ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ, ಭೂಮಿ ಖರೀದಿ, ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಉದ್ಯಮೋದ್ಯಮಗಳಿಗೆ ನೀಡುವ ಸಾಲ ಮತ್ತು ಸಹಾಯಧನದ ಮೊತ್ತವನ್ನು ಹೆಚ್ಚಿಸಬೇಕು. ಇದರಿಂದ ಬುಡಕಟ್ಟು ಜನಾಂಗದ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ದೊರೆಯಲಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಆದಿವಾಸಿ ಅಭಿವೃದ್ಧಿ ನಿಗಮದ ಪರಿಣಾಮಕಾರಿ ಕಾರ್ಯನಿರ್ವಹಣೆಗಾಗಿ ಪ್ರತಿ ಆರ್ಥಿಕ ವರ್ಷದಲ್ಲೂ ಕನಿಷ್ಠ ₹200 ಕೋಟಿ ಅನುದಾನ ಮೀಸಲಿಡುವಂತೆ ರಾಜ್ಯ ಸರ್ಕಾರವನ್ನು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.