ಗದಗ: ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರೈತರಿಗೆ ರಸಗೊಬ್ಬರ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಶರಣು ಎಸ್ .ಗೋಡಿ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟ ಅನುಭವಿಸಿದ್ದು, ಬೆಳೆದ ಬೆಳೆ ಕೈಗೆಟುಕದೇ ರೈತರು ಆರ್ಥಿಕವಾಗಿ ಸಂಪೂರ್ಣ ಕುಸಿದಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದಿದ್ದರೆ ಜಿಲ್ಲಾಡಳಿತದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಕಳೆದ ವರ್ಷ ಜಿಲ್ಲೆಯ ಹಲವು ಭಾಗಗಳಲ್ಲಿ ರೈತರು ರಸಗೊಬ್ಬರಕ್ಕಾಗಿ ಅಂಗಡಿಗಳ ಮುಂದೆ ಹಗಲು- ರಾತ್ರಿ ಸಾಲಿನಲ್ಲಿ ನಿಂತು ಪರದಾಡಿದ ಘಟನೆಗಳು ನಡೆದಿದ್ದವು. ಕೆಲ ರಸಗೊಬ್ಬರ ವ್ಯಾಪಾರಸ್ಥರು ಯೂರಿಯಾ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಕಾಳಬಜಾರ್ ನಡೆಸಿ ರೈತರನ್ನು ಸಂಕಷ್ಟಕ್ಕೆ ದೂಡಿದ್ದರು. ಈ ಬಾರಿ ಅಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಒತ್ತಾಯಿಸಿದರು.ಮುಂಗಾರು ಹಂಗಾಮಿಗೆ ಅಗತ್ಯವಿರುವ ಯೂರಿಯಾ, ಡಿಎಪಿ ಸೇರಿದಂತೆ ಎಲ್ಲ ವಿಧದ ರಸಗೊಬ್ಬರಗಳನ್ನು ಜಿಲ್ಲೆಯ ಎಲ್ಲ ಸಹಕಾರ ಸಂಘಗಳು ಹಾಗೂ ಖಾಸಗಿ ಅಂಗಡಿಗಳಲ್ಲಿ ಸಮರ್ಪಕವಾಗಿ ಮತ್ತು ನಿರಂತರವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಒಂದು ಎಫ್‌ಐಡಿ ಖಾತೆಯ 1 ಎಕರೆ ಭೂಮಿಗೆ ಒಂದು ತಿಂಗಳಿಗೆ ಒಂದೇ ಯೂರಿಯಾ ಚೀಲ ಎಂಬ ನಿಯಮದಿಂದ ರೈತರಿಗೆ ಅನ್ಯಾಯವಾಗುತ್ತಿದ್ದು, ಈ ನಿಯಮವನ್ನು ಕೂಡಲೇ ರದ್ದುಪಡಿಸಿ ರೈತರ ಅವಶ್ಯಕತೆಗೆ ಅನುಗುಣವಾಗಿ ಗೊಬ್ಬರ ವಿತರಣೆ ಮಾಡುವಂತೆ ಒತ್ತಾಯಿಸಿದರು.ರೈತರ ಸಮಸ್ಯೆಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಜಿಲ್ಲೆಯಲ್ಲಿ ರಸ್ತೆತಡೆ, ಧರಣಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಇದರಿಂದ ಉಂಟಾಗುವ ಯಾವುದೇ ಅಹಿತಕರ ಪರಿಸ್ಥಿತಿಗೆ ಜಿಲ್ಲಾಡಳಿತವೇ ನೇರ ಹೊಣೆ ಎಂದು ಎಚ್ಚರಿಸಿದರು.ಈ ವೇಳೆ ಬಸವರಾಜ ವಡವಿ, ಮುತ್ತಣ್ಣ ಮುಂಡವಾಡ, ಅಸ್ಪಾಕ್ ಬಾಗೋಡಿ, ಲತೀಫ್ ಶಿರಹಟ್ಟಿ, ಪವನ್ ಕುಮಾರ್ ಕರಿನಾಯಕರ, ವೀರೇಶ, ನಾಗೇಶ ಅಮರಾಪುರ, ವಿನಾಯಕ ಚತ್ರಬಾವಿ, ಇಸ್ಮಾಯಿಲ್ ಉಮಚಗಿ, ಮಹಾಂತೇಶ ಮಣಕವಾಡ, ಪ್ರವೀಣ ಆಚಾರಿ, ದೇವೇಂದ್ರ ಶಿಂದೆ, ಕೈಸರ್ ಮೊಹಮ್ಮದಅಲಿ, ಸೋಹೈಲ್ ನದಾಫ್‌, ಮಹಾಂತೇಶ ಉಮಚಗಿ, ಹಜರತ್ ಮನಿಯಾರ, ಇಮ್ರಾನ್ ಭಾವಿಕಟ್ಟಿ ಸೇರಿದಂತೆ ಹಲವರು ಇದ್ದರು.