ಕನ್ನಡಪ್ರಭ ವಾರ್ತೆ ಕೋಲಾರಒಳ ಮೀಸಲಾತಿ ವರದಿ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾ. 25ರಂದು ಕರ್ನಾಟಕ ಬಲಗೈ ಸಮುದಾಯಗಳ ಒಕ್ಕೂಟದ ಸಮಿತಿಯಿಂದ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಕೋಲಾರ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಬಲಗೈ ಸಮುದಾಯದವರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖಂಡ ಎಸ್.ಬಿ.ಮುನಿವೆಂಕಟಪ್ಪ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್‌ರ ಆಯೋಗದ ವರದಿ ಕೂಡಲೇ ರಾಜ್ಯ ಸರ್ಕಾರವು ತಿರಸ್ಕರಿಸಬೇಕು ಎಂದರು.ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿ-ಅಂಶಗಳೊಂದಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್‌ರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡುವುದು, ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳುಬೇಕೆಂದು ಒತ್ತಾಯಿಸಿದರು.ರಾಜ್ಯ ಸರ್ಕಾರವು ಸೆ. 3 2025ರಂದು ಯಾವುದೇ ಮಾನದಂಡ ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯಬೇಕು. ಸಮಾಜ ಕಲ್ಯಾಣ ಇಲಾಖೆಯ ಸುತ್ತೋಲೆ ಸಂಖ್ಯೆ ಸಕಇ/೦೮/ಎಂ.ಎಲ್ ಪಿ/೨೦೨೪ (ಭಾಗ-೫) ದಿನಾಂಕ:೦೮.೧೦.೨೦೨೫ ರ ನಿರ್ದೇಶನದಂತೆ ಜಾತಿ ಪ್ರಮಾಣ ಪತ್ರಗಳನ್ನು ವರ್ಗೀಕರಿಸಿರುವುದನ್ನು ಹಿಂಪಡೆದು ಮೂಲ ಜಾತಿಗಳನ್ನು ನಮೂದಿಸಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸೂಕ್ತ ಆದೇಶ ಹೊರಡಿಸಬೇಕು. ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಸೂಕ್ತ ಆದೇಶ ಹೊರಡಿಸಬೇಕು ಎಂದು ತಿಳಿಸಿದರು.ಚಿತ್ರದುರ್ಗ ಜಿಲ್ಲೆಯಲ್ಲಿ ಹೊಲಯ ಸಮುದಾಯ ಕೇವಲ ೨೨೩ ಎಂದು ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿಯಲ್ಲಿ ದಾಖಲಿಸಿರುವುದನ್ನು ಮರು ಪರಿಶೀಲಿಸಿ ಉದ್ದೇಶ ಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕು. ಮಾ.೨೭ರಂದು ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಮೀಸಲಾತಿಯ ಬಗ್ಗೆ ನಮಗೆ ನ್ಯಾಯ ಸಿಗುವ ಭರವಸೆ ಇದೆ, ಅದರಲ್ಲೂ ನಮ್ಮನ್ನು ಕಡೆಗಣಿಸಿದರೆ ನಮಗೆ ನ್ಯಾಯ ಸಿಗುವವರೆಗೂ ಮುಂದಿನ ಹೋರಾಟ ನಡೆಸಲಿದ್ದೇವೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಲಗೈ ಸಮುದಾಯದ ಮುಖಂಡರಾದ ದಲಿತ್ ನಾರಾಯಣಸ್ವಾಮಿ, ಡಿಪಿಎಸ್ ಮುನಿರಾಜು, ವಕ್ಕಲೇರಿ ರಾಜಪ್ಪ, ಚಂದ್ರಮೌಳಿ, ಗೋವಿಂದಪ್ಪ, ಪಿವಿಸಿ ಕೃಷ್ಣಪ್ಪ, ಜಯದೇವ್, ತಿಮ್ಮಯ್ಯ, ಖಾದ್ರಿಪುರ ಬಾಬು ಇದ್ದರು.