ವಿವಿಧ ಬೇಡಿಕೆಗಳನ್ನು ಬಗೆಹರಿಸುವಂತೆ ಆಗ್ರಹ

| Published : Mar 27 2024, 01:07 AM IST

ಸಾರಾಂಶ

ತಾಲೂಕಿನ ಡಿ.ಎಂ. ಸಮುದ್ರ ಗ್ರಾಮದ ಸುತ್ತಮುತ್ತಲಿನ ರೈತರ ವಿವಿಧ ಬೇಡಿಕೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಮುಖಂಡರು ಹಮ್ಮಿಕೊಂಡಿರುವ ಪ್ರತಿಭಟನೆಯೂ ಆರನೆ ದಿನವೂ ಸಹ ಮುಂದುವರೆದಿದೆ.

ರೈತ ಸಂಘಟನೆಯು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆರನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಹನೂರು ತಾಲೂಕಿನ ಡಿ.ಎಂ. ಸಮುದ್ರ ಗ್ರಾಮದ ಸುತ್ತಮುತ್ತಲಿನ ರೈತರ ವಿವಿಧ ಬೇಡಿಕೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಮುಖಂಡರು ಹಮ್ಮಿಕೊಂಡಿರುವ ಪ್ರತಿಭಟನೆಯೂ ಆರನೆ ದಿನವೂ ಸಹ ಮುಂದುವರೆದಿದೆ.

ಬರಗಾಲದ ಪರಿಸ್ಥಿತಿಯಲ್ಲಿ ಜಮೀನುಗಳಲ್ಲಿ ಸಮರ್ಪಕವಾಗಿ ನೀರಿಲ್ಲದೆ ಫಸಲು ಒಣಗುತ್ತಿದೆ. ತಾಲೂಕಿನ ಹುಬ್ಬೆಹುಣಸೆ ಹಾಗೂ ಉಡುತೊರೆ ಜಲಾಶಯದಿಂದ ಹಳ್ಳಗಳಿಗೆ ನೀರು ಹರಿಸಿ ಅಲ್ಲಲ್ಲಿ ಚೆಕ್‌ಡ್ಯಾಂಗಳನ್ನು ನಿರ್ಮಿಸಬೇಕು, ಜೊತೆಗೆ ಜಾನುವಾರುಗಳಿಗೆ ನೀರು ಹಾಗೂ ಮೇವನ್ನು ಒದಗಿಸಬೇಕು ಸೇರಿದಂತೆ. ಗ್ರಾಮಗಳಲ್ಲಿ ಸ್ಮಶಾನದ ವ್ಯವಸ್ಥೆ, ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿಗಳು ಸೇರಿದಂತೆ ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವಂತೆ ಹಾಗೂ ಪಡಿತರ ವ್ಯವಸ್ಥೆ ಕಲ್ಪಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ರೈತರು ಕಳೆದ ಐದು ದಿನಗಳಿಂದ ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ ಸಹ ಮುಂದುವರೆದಿದೆ. ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸಂಘದ ಹನೂರು ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ ಮಾತನಾಡಿ, ಈ ಭಾಗದ ಸಮಸ್ಯೆಗಳನ್ನು ಆಲಿಸಲು ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಸಮಸ್ಯೆಗಳನ್ನು ಬಗೆಹರಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಎಂದರಲ್ಲದೆ ಈ ವೇಳೆ ಸರ್ಕಾರ ಹಾಗೂ ಸ್ಥಳೀಯರು ವ್ಯಾಪಕವಾಗಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಚುನಾವಣೆ ಬಹಿಷ್ಕಾರ ಎಚ್ಚರಿಕೆ: ತಾಲೂಕು ಕೇಂದ್ರದಿಂದ ಹತ್ತಿರದಲ್ಲಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇಲ್ಲಿನ ಗ್ರಾಮಗಳ ಸ್ಥಿತಿ ತುರ್ತು ಸಂದರ್ಭಗಳಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದೆ ಹೆಚ್ಚಿನ ದರ ನೀಡಿ ಖಾಸಗಿ ವಾಹನದಲ್ಲಿ ತೆರಳಬೇಕಾದ ಪರಿಸ್ಥಿತಿ ಉಂಟಾಗಿದೆ. ಕಳೆದ ಹಲವಾರು ವರ್ಷಗಳಿಂದ ಆಳಿದ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಇನ್ನು ಸಹ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ತೆರಳಿ ನಿವಾಸಿಗಳ ಸಮಸ್ಯೆಗಳನ್ನು ಬಗೆ ಹರಿಸಲು ವಿಫಲವಾಗಿರುವುದರಿಂದ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮದ ರೈತ ಮುಖಂಡರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರೈತ ಮುಖಂಡರಾದ ಶಿವಪ್ಪ, ರಾಜು, ಮೈಕಲ್, ಅಪ್ಪುಸ್ವಾಮಿ, ಪ್ರದೀಪ್ ಕುಮಾರ್ ಸೋಮಣ್ಣ, ಪುಟ್ಟಸ್ವಾಮಿ ಮಾದಯ್ಯ ಶ್ರೀನಿವಾಸ್ ಪ್ರಸನ್ನಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.