ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಸದಸ್ಯರು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ವಿಶೇಷ ಅಧಿಕಾರಿ ಡಾ.ಜಾನಕಿ ತೊರವಿ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾಗಿ ಕಾಲೇಜು ಸ್ಥಾಪನೆ ಹಾಗೂ ಡಿಪಿಆರ್ ಪ್ರಸ್ತುತ ಸ್ಥಿತಿಗತಿಯ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.

ಅಧಿಕಾರಿ ಡಾ.ಜಾನಕಿ ತೊರವಿ ಮಾಹಿತಿ ನೀಡಿ, ಸರ್ಕಾರಿ ವೈದ್ಯಕೀಯ ಕಾಲೇಜಿನ ವಿಸ್ತೃತ ಯೋಜನಾ ವರದಿ ಸಿದ್ಧಗೊಂಡು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಅದಕ್ಕೆ ಮಂಜೂರಾತಿ ದೊರೆತಿದೆ. ಜೊತೆಗೆ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧಿಕೃತ ನೋಂದಣಿ ಪ್ರಕ್ರಿಯೆಯೂ‌ ಪೂರ್ಣಗೊಂಡಿದೆ ಎಂದರು.

ಸಮಿತಿ ಸದಸ್ಯ ಡಾ.ಬಿ.ಭಗವಾನರೆಡ್ಡಿ ಮಾತನಾಡಿ, ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಆದಷ್ಟು ಬೇಗ ನಿರ್ಮಾಣಗೊಳ್ಳಬೇಕು. ಮುಂಬರುವ ಶೈಕ್ಷಣಿಕ ವರ್ಷದಲ್ಲೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭವಾಗುವಂತೆ ತಮ್ಮ ಹಂತದಲ್ಲಿನ ಎಲ್ಲಾ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಆಗ್ರಹಿಸಿ ಐತಿಹಾಸಿಕ 116 ದಿನಗಳ ಹೋರಾಟ ನಡೆದಿದೆ. ಎಲ್ಲ ಪಕ್ಷಗಳು, ಜಿಲ್ಲೆಯ ಸಮಸ್ತ ಜನತೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ವಿಕಲಚೇತನರ ಸಂಘ ಮತ್ತು ಬಹುತೇಕ ಎಲ್ಲ ಜನಪ್ರತಿನಿಧಿಗಳು ಬೆಂಬಲಿಸಿದ್ದರು. ಜನವರಿ 1ರಂದು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ 27 ಜನ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಸುಳ್ಳು ಮೊಕದ್ದಮೆ ಹಾಕಿ ಹಾಗೂ 6 ಜನ ಹೋರಾಟಗಾರರನ್ನು 14 ದಿನಗಳ ಕಾಲ ಜೈಲಿಗಿಟ್ಟಿತ್ತು. ಮತ್ತೆ ಜನ ಹೋರಾಟದ ಹಿನ್ನೆಲೆಯಲ್ಲಿ ಜನವರಿ 9ರಂದು ಜಿಲ್ಲೆಗೆ ಆಗಮಿಸಿದ್ದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಿಸಿದರು. ​ಮಾರ್ಚ್‌ನಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿಸ್ತೃತ ಯೋಜನಾ ವರದಿ ಪಡೆದು ಮುಂದುವರೆಯಲಾಗುವುದು ಎಂದಿದ್ದರು.


ಈ ಸಂದರ್ಭದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಸದಸ್ಯರಾದ ಅಕ್ರಮ ಮಾಶಾಳ್ಕರ, ನೀಲಂಬಿಕಾ ಬಿರಾದಾರ, ಭೋಗೇಶ ಸೋಲಾಪುರ, ಲಕ್ಷ್ಮಣ ಹಂದ್ರಾಳ, ಜಗದೇವ ಸೂರ್ಯವಂಶಿ, ಬಾಳು ಜೇವೂರ, ಮಲ್ಲಿಕಾರ್ಜುನ ಎಚ್.ಟಿ, ಶ್ರೀನಾಥ ಪೂಜಾರಿ, ಸುರೇಶ.ಜಿ.ಬಿ, ಸುರೇಶ ಬಿಜಾಪುರ, ಲಲಿತಾ ಬಿಜ್ಜರಗಿ, ಲಕ್ಷ್ಮಣ ಕಂಬಾಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.