ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯ ಸರ್ಕಾರವು ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿ, ಅದೇ ಸಂದರ್ಭದಲ್ಲಿ ಕೇಸರಿ ಶಾಲು ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು. ಜೊತೆಗೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋಸಾಗಾಟ ಹಾಗೂ ಕಾನೂನುಬಾಹಿರ ಗೋಹತ್ಯೆ ತಡೆಗಟ್ಟಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಹಿಂದೂ ಜನಜಾಗೃತಿ ಸಮಿತಿ ವೆಂಕಟೇಶ್ ರಾಜು ಮಾತನಾಡಿ, ಶಿಕ್ಷಣ ಸಂಸ್ಥೆಗಳು ಜ್ಞಾನ, ಶಿಸ್ತು, ರಾಷ್ಟ್ರೀಯ ಏಕತೆ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕೇಂದ್ರಗಳಾಗಿರಬೇಕು. ಆದರೆ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳಿಗೆ ಪ್ರತ್ಯೇಕ ಅವಕಾಶ ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ಧರ್ಮ ಆಧಾರಿತ ವಿಭಜನೆ ಹಾಗೂ ತಾರತಮ್ಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು. ೨೦೨೨ರಲ್ಲಿ ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ರಾಜ್ಯಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನಲ್ಲಿ, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯ ಆಚರಣೆಯ ಭಾಗ ಎಂದು ಸಾಬೀತಾಗಿಲ್ಲ ಎಂದು ತಿಳಿಸಲಾಗಿತ್ತು. ಜೊತೆಗೆ ಶಾಲೆ-ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರವನ್ನು ಪಾಲಿಸಬೇಕು ಎಂಬ ಅಭಿಪ್ರಾಯವನ್ನೂ ನ್ಯಾಯಾಲಯ ವ್ಯಕ್ತಪಡಿಸಿತ್ತು. ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿಯೂ ವಿಚಾರಣೆಯಲ್ಲಿರುವ ಸಂದರ್ಭದಲ್ಲಿ ಸರ್ಕಾರದ ಇತ್ತೀಚಿನ ನಿರ್ಧಾರ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಬಹುದು ಎಂದು ಸಮಿತಿ ಆತಂಕ ವ್ಯಕ್ತಪಡಿಸಿದರು.

ಇದೇ ವೇಳೆ ರಾಷ್ಟ್ರ ರಕ್ಷಣ ಸೇನೆಯ ಮುಖಂಡ ಸುರೇಶ್ ಗೌಡ ಮಾತನಾಡಿ, ಮೇ ೨೮ರಂದು ನಡೆಯಲಿರುವ ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ರಮ ಗೋಸಾಗಾಟ ಹಾಗೂ ಕಾನೂನುಬಾಹಿರ ಗೋಹತ್ಯೆ ನಡೆಯುವ ಸಾಧ್ಯತೆ ಬಗ್ಗೆ ನಾಗರಿಕರಲ್ಲಿ ಆತಂಕ ವ್ಯಕ್ತವಾಗುತ್ತಿದೆ ಎಂದು ಸಂಘಟನೆ ಹೇಳಿದೆ. ಕರ್ನಾಟಕ ಗೋಹತ್ಯೆ ನಿಷೇಧ ಹಾಗೂ ಗೋಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದರೂ, ಕೆಲವೆಡೆ ಕಾನೂನು ಉಲ್ಲಂಘಿಸಿ ರಸ್ತೆ ಬದಿ, ಜನವಸತಿ ಪ್ರದೇಶಗಳು ಹಾಗೂ ತಾತ್ಕಾಲಿಕ ಸ್ಥಳಗಳಲ್ಲಿ ಗೋಹತ್ಯೆ ನಡೆಯುತ್ತಿರುವ ಬಗ್ಗೆ ಹಿಂದಿನ ಸಂದರ್ಭಗಳಲ್ಲಿ ದೂರುಗಳು ಬಂದಿವೆ ಎಂದು ಉಲ್ಲೇಖಿಸಿದೆ. ಇಂತಹ ಘಟನೆಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರ ಜೊತೆಗೆ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತವೆ ಎಂದು ತಿಳಿಸಿದೆ. ಆದ್ದರಿಂದ ಬಕ್ರಿದ್ ಹಬ್ಬದ ಸಂದರ್ಭದಲ್ಲಿ ರಾಜ್ಯಾದ್ಯಂತ ಅಕ್ರಮ ಗೋಹತ್ಯೆ ಹಾಗೂ ಗೋಸಾಗಾಟವನ್ನು ಸಂಪೂರ್ಣ ತಡೆಯಲು ವಿಶೇಷ ಪೊಲೀಸ್ ಹಾಗೂ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಸುಜಾತ, ಶ್ರೀರಾಮಸೇನೆಯ ಧರ್ಮನಾಯಕ್, ಸಂಪತ್ ಕುಮಾರ್, ಪವನ್ ಕುಮಾರ್, ನೇಹಾವತಿ ಇತರರು ಉಪಸ್ಥಿತರಿದ್ದರು.