ಸಾರಾಂಶ
ಚಾಮರಾಜನಗರ ವಿವಿ ವತಿಯಿಂದ ಯರಗನಹಳ್ಳಿ ಗ್ರಾಮದಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಜಿಲ್ಲಾ ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಶಿವಾಜಿರಾವ್ ಪಾಟೀಲ್ ಅಗ್ನಿ ಅವಘಡಗಳು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರ ವಿಶ್ವವಿದ್ಯಾನಿಲಯದ ವತಿಯಿಂದ ತಾಲೂಕಿನ ಯರಗನಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿರುವ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಜಿಲ್ಲಾ ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಶಿವಾಜಿರಾವ್ ಪಾಟೀಲ್ ಹಾಗೂ ತಂಡದಿಂದ ಅಗ್ನಿ ಅವಘಡಗಳು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸ ನೀಡಲಾಯಿತು.ಗ್ರಾಮೀಣ ಪ್ರದೇಶಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಜನ ಜಾಗೃತಿ ಹೆಚ್ಚಾಗಲಿದೆ. ಪ್ರಾತ್ಯಕ್ಷಿಕೆ ಮತ್ತು ಉಪನ್ಯಾಸದ ಮೂಲಕ ಹೆಚ್ಚಿನ ಮಾಹಿತಿ ನೀಡುವುದರಿಂದ ಗ್ರಾಮಸ್ಥರಿಗೆ, ಶಿಬಿರಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅರಿವು ಮೂಡಿಸಲಾಯಿತು.
ಇದೇ ವೇಳೆ ಚಾಮರಾಜನಗರ ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ.ಆರ್.ಮಹೇಶ್ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಅಗ್ನಿ ಅವಘಡಗಳಿಂದ ಅನಾಹುತಗಳು ಅಧಿಕವಾಗುತ್ತಿದ್ದು, ಈ ಬಗ್ಗೆ ಜನರಿಗೆ ಅರಿವಿನ ಕೊರತೆಯಿದೆ. ಇಂತಹ ಪ್ರಾತ್ಯಕ್ಷಿಕೆಗಳು ಮತ್ತು ವಿಶೇಷ ಉಪನ್ಯಾಸಗಳು ಪ್ರತಿಯೊಬ್ಬರಿಗೂ ಅನಿವಾರ್ಯ ಹಾಗೂ ಅರ್ಥಪೂರ್ಣವಾಗಿದೆ ಎಂದು ಹೇಳಿದರು. ಕನ್ನಡ ಉಪನ್ಯಾಸಕ ಯರಗನಹಳ್ಳಿ ಗುರುರಾಜು, ಶಿಕ್ಷಕರಾದ ನಾಗೇಶ್, ಶಿಬಿರಾರ್ಥಿಗಳು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಇದ್ದರು.