ಕನ್ನಡಪ್ರಭ ವಾರ್ತೆ ಅರಸೀಕೆರೆ
ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಇನ್ನರವ್ಹೀಲ್ ಕ್ಲಬ್ ವತಿಯಿಂದ ತಾಲೂಕಿನ ಜಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಂತ ತಪಾಸಣಾ ಶಿಬಿರ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ನಗರದ ಖಾಸಗಿ ಆಸ್ಪತ್ರೆಯ ದಂತ ವೈದ್ಯೆ ಡಾ. ಶ್ವೇತಾ ವಿದ್ಯಾರ್ಥಿಗಳ ದಂತ ತಪಾಸಣೆ ನಡೆಸಿ, ಹಲ್ಲುಗಳ ಆರೈಕೆ, ಸ್ವಚ್ಛತೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾಹಿತಿ ನೀಡಿದರು.ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಮಾತನಾಡಿ, ಆರೋಗ್ಯ, ಶಿಕ್ಷಣ, ನೈರ್ಮಲ್ಯ ಹಾಗೂ ಪರಿಸರ ಸಂರಕ್ಷಣೆಯಂತಹ ಸಮಾಜಮುಖಿ ಚಟುವಟಿಕೆಗಳನ್ನು ಕ್ಲಬ್ ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ. ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲು ಸಹಕರಿಸಿದ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಸುರೇಶ್ ಮಾತನಾಡಿ, ಶಿಕ್ಷಣವೇ ಉತ್ತಮ ಭವಿಷ್ಯ ನಿರ್ಮಾಣದ ಮೂಲಾಧಾರವಾಗಿದೆ. ಸರ್ಕಾರ ವಿದ್ಯಾರ್ಥಿಗಳಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರಾಥಮಿಕ ಶಿಕ್ಷಣವೇ ಜೀವನದ ಭದ್ರ ಅಡಿಪಾಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಶಾಲೆಯ ಮುಖ್ಯ ಶಿಕ್ಷಕ ದ್ಯಾವೇಗೌಡ ಮಾತನಾಡಿ, ಶಾಲೆಯಲ್ಲಿ ದಂತ ತಪಾಸಣೆ ಮತ್ತು ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿರುವುದು ಮಕ್ಕಳ ಆರೋಗ್ಯ ಹಾಗೂ ಪರಿಸರ ಜಾಗೃತಿಗೆ ಸಹಕಾರಿಯಾಗಿದೆ. ಶಿಕ್ಷಣ ಇಲಾಖೆಯಿಂದಲೂ ವರ್ಷಕ್ಕೆ ಎರಡು ಬಾರಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಗೆ ಇನ್ನರ್ವ್ಹೀಲ್ ಕ್ಲಬ್ ನೀಡುತ್ತಿರುವ ಸಹಕಾರ ಶ್ಲಾಘನೀಯ ಎಂದು ಹೇಳಿದರು.ಇನ್ನರ್ವ್ಹೀಲ್ ಕ್ಲಬ್ ಉಪಾಧ್ಯಕ್ಷೆ ಸಂಧ್ಯಾ ಮಾತನಾಡಿ, ವಿದ್ಯಾರ್ಥಿಗಳು ನೆಟ್ಟ ಸಸಿಗಳನ್ನು ಮರಗಳಾಗಿ ಬೆಳೆಸುವ ಜವಾಬ್ದಾರಿಯನ್ನು ಹೊತ್ತು ಪರಿಸರ ಸಂರಕ್ಷಣೆಗೆ ಮಾದರಿಯಾಗಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಕ್ಲಬ್ ಖಜಾಂಚಿ ರೇಖಾ, ಎಡಿಟರ್ ಶೋಭಾ, ಐಎಸ್ಒ ಗೀತಾ, ಸರಸ,ಸವಿತಾ ಸೇರಿದಂತೆ ಕ್ಲಬ್ ಸದಸ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.