ಸಾರಾಂಶ
ಸಮ್ಮೇಳನದಲ್ಲಿ ಯಾವುದೇ ಅನಾಹುತಕ್ಕೆ ಎಡೆಮಾಡಿಕೊಡದಂತೆ ಜನದಟ್ಟಣೆ ಹೆಚ್ಚಾಗಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು. ವ್ಯಾಪಕವಾಗಿ ಪೊಲೀಸ್ ಬಂದೋಬಸ್ತ್ ಆಗಬೇಕು.
ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ನಡೆಸಲು ಸಮ್ಮೇಳನ ನಡೆಯುವ ಸ್ಥಳದಲ್ಲಿ 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ, ಸಿಸಿ ಟಿವಿ ಕಣ್ಗಾವಲು ಹಾಕಲಾಗುತ್ತಿದೆ ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೊಲೀಸ್ ಬಂದೋಬಸ್ತ್ ಆಯೋಜನೆ ಸಂಬಂಧ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮಂಡ್ಯದಲ್ಲಿ 30 ವರ್ಷಗಳ ಬಳಿಕ ನೆರವೇರುತ್ತಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುತ್ತಿದ್ದಾರೆ. ಗಣ್ಯರು, ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡುವ ಹೊಣೆ ಪೊಲೀಸರ ಮೇಲಿದೆ ಎಂದರು.
ಸಮ್ಮೇಳನದಲ್ಲಿ ಯಾವುದೇ ಅನಾಹುತಕ್ಕೆ ಎಡೆಮಾಡಿಕೊಡದಂತೆ ಕರ್ತವ್ಯ ನಿರ್ವಹಿಸಬೇಕು. ಸಮ್ಮೇಳನಕ್ಕೆ ಆಗಮಿಸುವವರಿಗೆ ಸಂಚಾರ ಮಾರ್ಗದ ಫಲಕಗಳು ಹಾಗೂ ಆಗಮನ, ನಿರ್ಗಮನದ ಸ್ಥಳಗಳ ಕುರಿತ ಸೂಚನಾ ಫಲಕಗಳನ್ನು ಹೆದ್ದಾರಿಗಳಲ್ಲಿ ಹಾಕಬೇಕು. ಜನದಟ್ಟಣೆ ಹೆಚ್ಚಾಗಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು. ವ್ಯಾಪಕವಾಗಿ ಪೊಲೀಸ್ ಬಂದೋಬಸ್ತ್ ಆಗಬೇಕು ಎಂದರು.
ಸಮ್ಮೇಳನದ ಸಂಬಂಧ ಪೊಲೀಸ್ ಬಂದೋಬಸ್ತ್ಗೆ ನಿಯೋಜನೆಗೊಳ್ಳಲಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಊಟ, ತಿಂಡಿ, ವಸತಿ ಸೌಕರ್ಯ ಕಲ್ಪಿಸಬೇಕು. ಗಣ್ಯರ ಭದ್ರತೆಯಲ್ಲಿ ಲೋಪವಾಗದಂತೆ ನಿಗಾ ವಹಿಸಬೇಕು. ಅಡುಗೆ ಮಾಡುವ ಸ್ಥಳ, ಪಾರ್ಕಿಂಗ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬೆಂಕಿ ಅವಘಡ ಸಂಭವಸಿದರೆ ಅದನ್ನು ನಂದಿಸಲು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸಮ್ಮೇಳನ ಸಂಬಂಧ ಕೈಗೊಂಡಿರುವ ಪೊಲೀಸ್ ಬಂದೋಬಸ್ತ್ ಕುರಿತು ಸಚಿವರಿಗೆ ಮಾಹಿತಿ ನೀಡಿ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಸಾಗುವ ಮಾರ್ಗದಲ್ಲಿ ಸೂಕ್ತ ಬಂದೋಬಸ್ತ್, ಸಮ್ಮೇಳನಕ್ಕೆ ಬೆಂಗಳೂರು, ಮೈಸೂರು ಕಡೆಯಿಂದ ಆಗಮಿಸುವವರಿಗೆ, ನಿರ್ಗಮಿಸುವವರಿಗೆ ಮಾರ್ಗದ ಸೂಚನಾ ಫಲಕಗಳನ್ನು ಅಳವಡಿಕೆ, ಸಂಚಾರ ದಟ್ಟಣೆ ಆಗದಂತೆ ಕ್ರಮ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು ಎಲ್ಲಾ ಕಡೆ ಪೊಲೀಸರನ್ನು ನಿಯೋಜಿಸಲಾಗುವುದು ಎಂದರು.
ಬಂದೋಬಸ್ತ್ ಗೆ 6 ಎಎಸ್ ಪಿ, 21 ಡಿವೈಎಸ್ಪಿ , 63 ಸಿಪಿಐ, 170 ಪಿಎಸ್ ಐ, 262 ಎಎಸ್ ಐ, 1500 ಪೇದೆಗಳು, 1000 ಹೋಂ ಗಾರ್ಡ್, 165 ಮಹಿಳಾ ಕಾನ್ ಸ್ಟೇಬಲ್ ಒಳಗೊಂಡಂತೆ 14 ಜಿಲ್ಲೆಗಳಿಂದ 3200ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಆಗಮಿಸಲಿದ್ದಾರೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಪಾಳಿಯಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಸಂಚಾರ ನಿರ್ವಹಣೆ, ಪಾರ್ಕಿಂಗ್, ಊಟದ ಕೌಂಟರ್, ವೇದಿಕೆ ಹೀಗೆ ಎಲ್ಲಾ ಕಡೆ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.ಹಗಲು ಮತ್ತು ರಾತ್ರಿ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿ ನಿರತರಾಗಿರಲಿದ್ದಾರೆ. ಸಿಸಿಟಿವಿ ನಿಗಾ ವ್ಯವಸ್ಥೆ ಮಾಡಲಾಗಿದೆ. ಅಪರಾಧ ಹಾಗೂ ಕಳ್ಳತನ ತಡೆಯಲು ಅಪರಾಧಿ ಪತ್ತೆ ದಳ ಹಾಗೂ ಮಫ್ತಿಯಲ್ಲಿ ಪೊಲೀಸರು ಗಸ್ತು ತಿರುಗಲಿದ್ದಾರೆ ಎಂದರು.
ಪೊಲೀಸರು ತಂಗಲು ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ವಾಹನಗಳಿಗೆ ಪಾರ್ಕಿಂಗ್ ಪಾಸ್ ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪಾಸ್ ವ್ಯವಸ್ಥೆ ಮಾಡಲಾಗಿದೆ. ಹೆದ್ದಾರಿ ಹಾಗೂ ನಗರದಲ್ಲಿ ಟೋಯಿಂಗ್ ವಾಹನಗಳ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ. 10ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗುತ್ತಿದೆ. ಪೊಲೀಸ್ ಔಟ್ ಪೋಸ್ಟ್, ಮಹಿಳಾ ಸಹಾಯವಾಣಿ ಕೇಂದ್ರಗಳನ್ನು ಸಹ ತೆರೆಯಲಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಪ್ರತಿ ಅರ್ಧ ಗಂಟೆಗೆ ಒಂದರಂತೆ ವಿಶೇಷ ಸಾಹಿತ್ಯ ಸಾರಿಗೆ ಬಸ್ಗಳು ಸಂಚರಿಸಲಿವೆ. ಪ್ರತಿ ತಾಲೂಕಿಗೆ 15 ಬಸ್ಗಳಂತೆ 105 ಬಸ್ಗಳು ಸಂಚರಿಸಲಿವೆ. ನಗರದಿಂದ 15 ಬಸ್ ಗಳು ಉಚಿತವಾಗಿ ಸಂಚರಿಸಲಿವೆ. ನೋಂದಣಿ ಕೇಂದ್ರದ ಸಮೀಪ ಆರೋಗ್ಯ ಕೇಂದ್ರ ತೆರೆಯಲಾಗುತ್ತಿದೆ ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ ಎಂದರು.
ಸಭೆಯಲ್ಲಿ ಶಾಸಕರಾದ ಪಿ.ರವಿಕುಮಾರ್, ರಮೇಶ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಡಿಐಜಿಪಿ ಡಾ. ಬೋರಲಿಂಗಯ್ಯ, ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.