ದೊಡ್ಡಬಳ್ಳಾಪುರ: ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್‌ ಜಿಲ್ಲಾ ಪ್ರಚಾರ ಸಮಿತಿ ಹಾಗೂ ತಾಲೂಕು ಕಾಂಗ್ರೆಸ್‌ ವಿವಿಧ ಸಮಿತಿಗಳ ನೇತೃತ್ವದಲ್ಲಿ ಶುಕ್ರವಾರ ನಗರ ಪೊಲೀಸ್‌ ಠಾಣೆ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು

ದೊಡ್ಡಬಳ್ಳಾಪುರ: ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್‌ ಜಿಲ್ಲಾ ಪ್ರಚಾರ ಸಮಿತಿ ಹಾಗೂ ತಾಲೂಕು ಕಾಂಗ್ರೆಸ್‌ ವಿವಿಧ ಸಮಿತಿಗಳ ನೇತೃತ್ವದಲ್ಲಿ ಶುಕ್ರವಾರ ನಗರ ಪೊಲೀಸ್‌ ಠಾಣೆ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಯಶ್‌ಪಾಲ್‌ ಸುವರ್ಣ ವಿರುದ್ದ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯಿಸಿ ಪೊಲೀಸರಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಉಡುಪಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಗರ ಸರ್ವೀಸ್‌ ಬಸ್‌ ನಿಲ್ದಾಣದ ಸಮೀಪದಲ್ಲಿರುವ ಜಟ್ಕಾ ಸ್ಟ್ಯಾಂಡ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಶಾಸಕ ಯಶ್‌ಪಾಲ್‌ ಸುವರ್ಣ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್‌ ಗಾಂಧಿ ಅವರನ್ನು ಡ್ರಗ್‌ ಅಡಿಕ್ಟ್‌ ಎಂದು ಸಂಬೋಧಿಸಿದ್ದಾರೆ. ಸುಳ್ಳು ಪ್ರಚಾರ ಮಾಡಿ ಜನರಲ್ಲಿ ತಪ್ಪು ಭಾವನೆ ಉಂಟು ಮಾಡುವಂತೆ ಮತ್ತು ಜನರಲ್ಲಿ ಅಪನಂಬಿಕೆ, ಅಗೌರವ ಉಂಟು ಮಾಡುವ ರೀತಿ ಮಾತನಾಡಿದ್ದಾರೆ ಎಂದು ಆರೋಪಿಸಿದರು.

ಉತ್ತರ ಪ್ರದೇಶದಲ್ಲಿ ಅಂದು ಮುಸ್ಲಿಮರ ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದಂತೆ ಗಾಂಧಿ ಕುಟುಂಬವನ್ನು ಧ್ವಂಸ ಮಾಡುತ್ತೇವೆಂದು ಬೆದರಿಕೆ ಒಡ್ಡಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತವೆ. ಕೂಡಲೇ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ರಾಹುಲ್‌ಗಾಂಧಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಯಶ್‌ಪಾಲ್‌ ಸುವರ್ಣ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ತಾಪಂ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಮಾತನಾಡಿ, ನೀಟ್‌ ಅಕ್ರಮದ ವಿರುದ್ದ ಹೋರಾಡಿದ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಧರ್ಮ ಮತ್ತು ಜಾತಿಗಳ ಮಧ್ಯೆ ಅಶಾಂತಿ, ದ್ವೇಷವನ್ನುಂಟು ಮಾಡುವಂತೆ ಮತ್ತು ಸೌಹಾರ್ದತೆಗೆ ಧಕ್ಕೆಯಾಗುವ ಕೃತ್ಯವೆಸಗಿದ್ದು, ಕೂಡಲೇ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಸಬಾ ಘಟಕದ ಅಧ್ಯಕ್ಷ ಅಪ್ಪಿ ವೆಂಕಟೇಶ್, ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಮುಖಂಡರಾದ ಆಂಜನಮೂರ್ತಿ, ರಾಜೇಶ್‌, ಮುನಿರಾಜು, ಅಲ್ತಾಫ್‌, ಮಹೇಶ್‌, ಮಮತ, ಆನಂದ್‌, ಬಷೀರ್‌ ಸೇರಿದಂತೆ ವಿವಿಧ ಘಟಕಗಳ ಮುಖಂಡರು, ಪದಾಧಿಕಾರಿಗಳು ಹಾಜರಿದ್ದರು.

31ಕೆಡಿಬಿಪಿ1-

ರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಯಶ್‌ಪಾಲ್‌ ಸುವರ್ಣ ಬಂಧನಕ್ಕೆ ಆಗ್ರಹಿಸಿ, ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ಪೊಲೀಸ್‌ ಠಾಣೆ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ದೂರು ಸಲ್ಲಿಸಲಾಯಿತು.