ಕಾಂಗ್ರೆಸ್ ಸರ್ಕಾರವಿದ್ದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ

| Published : Apr 29 2024, 01:45 AM IST / Updated: Apr 29 2024, 08:55 AM IST

Congress flag

ಸಾರಾಂಶ

 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

 ಬೆಳಗಾವಿ :  ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆ, ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದಿಂದ ದೇಶದಲ್ಲೇ ಆತಂಕ ಮೂಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಮಾಲಿನಿ ಸಿಟಿಯಲ್ಲಿ ಭಾನುವಾರ ಬಿಜೆಪಿ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬೃಹತ್‌ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ ನಡೆಯುತ್ತಿದೆ. ಕೋಮು ಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಇರುವೆಲ್ಲ ಕಡೆಯೂ ಕಾನೂನು ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ದೂರಿದರು.

ಕಾಂಗ್ರೆಸ್ ಪಕ್ಷವು ಕುಟುಂಬವಾದದಲ್ಲಿ ದೇಶಹಿತ ಮರೆತಿದೆ. ಭಾರತದ ವಿಭಜನೆಯಲ್ಲಿ ದೊಡ್ಡ ಪಾತ್ರ ವಹಿಸಿದವರನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆ. ಕಾಂಗ್ರೆಸ್‌ನ ತುಷ್ಟೀಕರಣ ನೀತಿ ಅವರ ಪ್ರಣಾಳಿಕೆಯಲ್ಲೂ ವಿವರವಾಗಿ ಹೊರಬಂದಿದೆ. ಬಿಜೆಪಿ-ಎನ್‍ಡಿಎ ಸರ್ಕಾರವು ಕಳೆದ 10 ವರ್ಷಗಳಲ್ಲಿ ಭಾರತೀಯ ನ್ಯಾಯ ಸಂಹಿತಾ ಮೂಲಕ ಆಂಗ್ಲರ ಮುಷ್ಟಿಯಿಂದ ಜನರನ್ನು ಹೊರತಂದಿದೆ. ಗುಲಾಮಿ ಪದ್ಧತಿಯಿಂದ ಭಾರತೀಯರನ್ನು ಹೊರಕ್ಕೆ ತರಲಾಗಿದೆ. ಜನರಿಗೆ ನ್ಯಾಯ ನೀಡಲು ಪೂರಕ ಕಾನೂನು ಇದು. ಅತ್ಯಾಚಾರಿಗಳಿಗೆ ಕಠಿಣ ಕಾನೂನು ಇದೆ. ಶೀಘ್ರವೇ ಇದು ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ಅವಧಿಯಲ್ಲಿ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಕಾಂಗ್ರೆಸ್ಸಿಗರು ಟೀಕಿಸಿ ವಿರೋಧಿಸಿದ್ದರು. ಜನರನ್ನು ಗೊಂದಲದಲ್ಲಿ ಸಿಲುಕಿಸಿದರು. ಇವಿಎಂ ವಿಚಾರದಲ್ಲಿ ಕೂಡ ಸುಳ್ಳು ಹೇಳಿ ಗೊಂದಲ ಮೂಡಿಸಿದ್ದರು. ಸುಪ್ರೀಂ ಕೋರ್ಟ್ ಕೆಲದಿನಗಳ ಹಿಂದೆ ಇವಿಎಂ ವಿಷಯದಲ್ಲಿ ಸ್ಪಷ್ಟ ಆದೇಶ ನೀಡಿ ಕಾಂಗ್ರೆಸ್‌ ನಾಯಕರಿಗೆ ಕಿವಿ ಹಿಂಡಿದೆ. ಕಾಂಗ್ರೆಸ್‌ ನಾಯಕರು ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರ ಪಿಎಫ್‍ಐ ಸಂಘಟನೆಯನ್ನು ನಿಷೇಧಿಸಿತ್ತು. ನಿಷೇಧಿತ ಪಿಎಫ್‍ಐ ಸಂಘಟನೆ ಜೊತೆ ಹೊಂದಾಣಿಕೆ ಮಾಡಿಕೊಂಡ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಪಕ್ಷವು ಆಡಳಿತ ನಡೆಸಲು ಸಾಧ್ಯವಾಗದಿದ್ದರೇ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಗುಡುಗಿದರು.

ನವಾಬರು, ನಿಜಾಮರು, ಸುಲ್ತಾನರು ನಿಜವಾದ ಅತ್ಯಾಚಾರಿಗಳು:

ಸ್ವಾತಂತ್ರ್ಯ ಚಳವಳಿಯನ್ನು ಮತಬ್ಯಾಂಕಿಗಾಗಿ ತುಷ್ಟೀಕರಣದ ಚರಿತ್ರೆಯಾಗಿ ಮಾಡಿದ ಪಕ್ಷ ಕಾಂಗ್ರೆಸ್. ಭಾರತದ ಮಹಾರಾಜರು ಅತ್ಯಾಚಾರಿಗಳು, ಬಡವರ ಜಮೀನನ್ನು ಕಿತ್ತುಕೊಂಡವರೆಂದು ಚರಿತ್ರೆ ಬರೆಸಿದ್ದರು. ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚನ್ನಮ್ಮರ ಅವಮಾನ ಮಾಡಿದ ಪಕ್ಷ ಕಾಂಗ್ರೆಸ್ ಎಂದು ಕಟುವಾಗಿ ಟೀಕಿಸಿದರು.

ನಿಜವಾಗಿ ನವಾಬರು, ನಿಜಾಮರು, ಸುಲ್ತಾನರು ಅತ್ಯಾಚಾರ ಮಾಡಿದವರು. ಕಾಂಗ್ರೆಸ್ಸಿಗೆ ಔರಂಗಜೇಬನ ಅತ್ಯಾಚಾರ, ಮಂದಿರಗಳ ಧ್ವಂಸ ಮಾಡಿದ್ದು ನೆನಪಿಗೆ ಬರುವುದಿಲ್ಲ. ದೇಗುಲಗಳನ್ನು ಅವಮಾನ ಮಾಡುವವರ ಜೊತೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಅಧಿಕಾರ ಎಂದರೇ ಅಭಿವೃದ್ಧಿಹೀನ ಸ್ಥಿತಿ ಎಂದು ಜನರು ಅರ್ಥ ಮಾಡಿಕೊಂಡಿದ್ದಾರೆ. ಹಿಂದೆ ವಿದೇಶಿ ಹೂಡಿಕೆ ಕರ್ನಾಟಕದಲ್ಲಿ ಗರಿಷ್ಠ ಮಟ್ಟದಲ್ಲಿತ್ತು. ಕಾಂಗ್ರೆಸ್ ಅಧಿಕಾರದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದೆ. ಕಾಂಗ್ರೆಸ್ ಎಂದರೇ ದಿವಾಳಿ ಪರಿಸ್ಥಿತಿ ಎಂದು ಜನರಿಗೆ ಅರ್ಥವಾಗಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ರೈತ ವಿರೋಧಿ:

ಬಿಜೆಪಿ-ಎನ್‍ಡಿಎ ಸರ್ಕಾರವು ಸ್ವಸಹಾಯ ಗುಂಪು, ಕೃಷಿ ಉತ್ಪಾದನಾ ಸಂಘಗಳಿಗೆ ಬೆಂಬಲ ನೀಡಿದೆ. 10 ವರ್ಷಗಳಲ್ಲಿ 10 ಕೋಟಿ ಮಹಿಳೆಯರು ಸ್ವಸಹಾಯ ಗುಂಪುಗಳ ಪ್ರಯೋಜನ ಪಡೆದಿದ್ದಾರೆ. ಇಂಧನದಲ್ಲಿ ಎಥೆನಾಲ್ ಸೇರ್ಪಡೆಯಿಂದ ಕೃಷಿಕರಿಗೆ ಪ್ರಯೋಜನವಾಗಿದೆ. ಆದರೆ, ಕಾಂಗ್ರೆಸ್ ಪಕ್ಷವು ರೈತದ್ರೋಹಿಯಾಗಿದೆ. ಇಲ್ಲಿ ಬಿಜೆಪಿ ಸರ್ಕಾರ ಇದ್ದಾಗ ರೈತರ ಖಾತೆಗೆ ₹10 ಸಾವಿರ ಸಿಗುತ್ತಿತ್ತು. ರಾಜ್ಯ ಸರ್ಕಾರದ ಪಾಲಿನ ₹4 ಸಾವಿರವನ್ನು ಕಾಂಗ್ರೆಸ್ ಸರ್ಕಾರ ಕಡಿತಗೊಳಿಸಿದೆ. ಆದರೆ, ರೈತರಿಗೆ ₹6 ಸಾವಿರ ಮುಂದುವರೆಯಲಿದೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್ಸಿಗರು ನಿಮ್ಮ ಬ್ಯಾಂಕಿನ ಹಣ, ಆಸ್ತಿ, ಮಹಿಳೆಯರ ಬಳಿ ಇರುವ ಒಡವೆ ಸೇರಿ ಮಂಗಲಸೂತ್ರದ ಎಕ್ಸರೇ ಮಾಡಲಿದ್ದಾರೆ. ಮುಂದೆ ನಿಮ್ಮ ಸಂಪತ್ತಿನ ಲೂಟಿ ಮಾಡಲಿದ್ದಾರೆ. ಅದನ್ನು ತಮ್ಮ ಮತಬ್ಯಾಂಕ್‌ಗೆ ಕೊಡಲಿದ್ದಾರೆ. ಮೋದಿ ಬದುಕಿರುವವರೆಗೆ ಕಾಂಗ್ರೆಸ್ಸಿಗರ ಈ ಕನಸು ನನಸಾಗದು. ಅವರ ಆಟ ನಡೆಯುವುದಿಲ್ಲ ಎಂದು ಗುಡುಗಿದರು.

ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿ ಹೊಸ ನೀತಿ ತರಲು ಕಾಂಗ್ರೆಸ್ ಮುಂದಾಗಿದೆ. ಮಕ್ಕಳಿಗಾಗಿ ಶೇಖರಿಸಿಟ್ಟ ಹಣ, ಆಸ್ತಿಯನ್ನು ನೀವು ಅವರಿಗೆ ಕೊಡಲು ಸಾಧ್ಯವಾಗದು. ಅದನ್ನು ಮಕ್ಕಳಿಗೆ ಕೊಡಲು ಶೇ.55ರಷ್ಟು ತೆರಿಗೆ ಪಾವತಿಸಲು ಕಾಂಗ್ರೆಸ್ ಕೇಳಲಿದೆ. ಅದನ್ನು ಮತಬ್ಯಾಂಕಿಗೆ ಹಂಚಲು ನಿಮ್ಮ ಸಂಪತ್ತಿನ ಲೂಟಿ ಹೊಡೆಯಲು ಮುಂದಾಗಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ಸಿಗರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಸೇನೆಯಲ್ಲಿ ಯುವತಿಯರಿಗೆ ಅವಕಾಶ ಕೊಡಲಾಗುತ್ತಿದೆ. ಸಿಆರ್‌ಪಿಎಫ್‌ನಲ್ಲಿಯೂ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಾಗಿದೆ. ಜನರ ಕನಸೇ ಬಿಜೆಪಿ ಸಂಕಲ್ಪ. ನಿಮ್ಮ ಕನಸನ್ನು ನನಸಾಗುಸುತ್ತೇನೆ. ದೇಶಕ್ಕಾಗಿ ಸದಾ 24/7 ಗಂಟೆ ಕಾಲ ದುಡಿದು 2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸುತ್ತೇವೆಂದು ಕರ್ನಾಟಕದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

ಕರ್ನಾಟಕದ ಎಲ್ಲೆಡೆ ಮತ್ತೊಮ್ಮೆ ಮೋದಿ ಎಂಬ ಧ್ವನಿಯೇ ಕೇಳುತ್ತಿದೆ. ನಾವೆಲ್ಲರೂ ಛತ್ರಪತಿ ಶಿವಾಜಿಯನ್ನು ಗೌರವಿಸುವವರು. ಭಗವಾನ್ ಬಸವೇಶ್ವರರನ್ನು ಗೌರವಿಸುವವರು. ಬಸವೇಶ್ವರರು ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸಿಕೊಟ್ಟವರು. ಭಾರತವನ್ನು ಶಕ್ತಿಶಾಲಿ ಮಾಡುವುದನ್ನು ನೀವೆಲ್ಲರೂ ಹೆಮ್ಮೆಯಿಂದ ನಿರೀಕ್ಷಿಸುತ್ತೀರಿ ಎಂದು ಆಶಿಸಿದರು.

ಭಾರತದ 25 ಕೋಟಿ ಜನರು ಬಿಪಿಎಲ್ ರೇಖೆಯಿಂದ ಮೇಲೆ ಬಂದಿದ್ದಾರೆ. ಇದರಿಂದ ಹಿಂದೂಸ್ತಾನಿಗಳ ಆತ್ಮವಿಶ್ವಾಸ ಹೆಚ್ಚಾಗಿದೆ. ಬಡವರ ಕಲ್ಯಾಣ, ಒಳಿತಿಗಾಗಿ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕಿದೆ ಎಂದು ಮನವಿ ಮಾಡಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ರಾಜ್ಯ ಸರ್ಕಾರವು ಸಂಪೂರ್ಣ ದಿವಾಳಿಯಾಗಿದೆ. ಜಗದೀಶ್ ಶೆಟ್ಟರ್, ಅಣ್ಣಾಸಾಬೇಬ್ ಜೊಲ್ಲೆ ಅವರನ್ನು ಲಕ್ಷಕ್ಕೂ ಹೆಚ್ಚು ಅಂತರದಲ್ಲಿ ಗೆಲ್ಲಿಸುತ್ತೇವೆ. ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.

ಬೆಳಗಾವಿ ಅಭ್ಯರ್ಥಿ ಜಗದೀಶ ಶೆಟ್ಟರ್‌, ಚಿಕ್ಕೋಡಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ, ಸಂಸದೆ ಮಂಗಲ ಅಂಗಡಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಅಭಯ ಪಾಟೀಲ, ಧುರ್ಯೋಧನ ಐಹೊಳೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮೊದಲಾದವರು ಉಪಸ್ಥಿತರಿದ್ದರು.ಬಾಕ್ಸ್‌...

ಹರಿದು ಬಂದ ಜನಸಾಗರ

ಮೋದಿ ಬೃಹತ್‌ ಸಮಾವೇಶಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಜನಸಾಗರೇ ಹರಿದು ಬಂದಿತ್ತು. ಪ್ರಧಾನಿಯವರ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ ಮೊದಲೇ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಮೋದಿ ಬರುತ್ತಿದ್ದಂತೆಯೇ ಮೋದಿ ಮೋದಿ... ಎಂಬ ಘೋಷಣೆ ಮೊಳಗಿತು. ಜೈ ಶ್ರೀರಾಮ, ಮೋದಿ ಮೋದಿ ಘೋಷಣೆ ಮುಗಿಲು ಮುಟ್ಟಿತ್ತು. ಕಾರ್ಯಕ್ರಮದಲ್ಲಿ ಮೋದಿ ಅವರ ಕಟೌಟ್‌ಗಳನ್ನು ಹಿಡಿದು ಅಭಿಮಾನಿಗಳು ಪ್ರದರ್ಶಿಸುತ್ತಿರುವುದು ಕಂಡುಬಂದಿತು. ಬಿಸಿನಲಿ ಝಳವನ್ನು ಲೆಕ್ಕಿಸದೇ ಜನರು ಸಾಗರೋಪಾದಿಯಲ್ಲಿ ಹರಿದುಬಂದಿತ್ತು.ಬಾಕ್ಸ್‌..

ತಾಯಿ ಫೋಟೋ ನೋಡಿ ಮೋದಿ ಭಾವುಕ

ಸಮಾವೇಶದ ವೇದಿಕೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಅಭ್ಯರ್ಥಿ ಜಗದೀಶ ಶೆಟ್ಟರ್‌, ಚಿಕ್ಕೋಡಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರು ಶಾಲು ಹೊದಿಸಿ, ಪೇಟಾ ತೊಡಿಸಿ ಸನ್ಮಾನ ಮಾಡಿದರು. ರೈತ ಮತ್ತು ಚಕ್ಕಡಿಯನ್ನು ಕೊಡುಗೆಯಾಗಿ ನೀಡಲಾಯಿತು. ಬಳಿಕ ಮೋದಿ ಮತ್ತು ಅವರ ತಾಯಿಯ ಫೋಟೋವಿರುವ ಪ್ರೇಮವೊಂದನ್ನು ಉಡುಗೊರೆಯಾಗಿ ನೀಡಲಾಯಿತು. ತಮ್ಮ ತಾಯಿ ಫೋಟೋ ನೋಡುತ್ತಿದ್ದಂತೇ ಮೋದಿ ಅವರು ಕೆಲಕ್ಷಣ ಭಾವುಕರಾದರು. ಬಿಸಿಲಿನ ಸೆಖೆ ಪ್ರಖರವಾಗಿತ್ತು. 32 ನಿಮಿಷಗಳ ಕಾಲ ಅಬ್ಬರದ ಚುನಾವಣಾ ಪ್ರಚಾರ ಭಾಷಣ ಮಾಡಿದ ಮೋದಿ ಅವರು ತಮ್ಮ ಭಾಷಣದ ನಡುವೆ 3 ಬಾರಿ ನೀರು ಕುಡಿದು ನೀರಿನ ದಾಹ ತನಿಸಿಕೊಂಡರು.ಕೋಟ್..

ಕರ್ನಾಟಕದ ಜನರ ಆಶೀರ್ವಾದ ಕೇಳಲು ಬಂದಿದ್ದೇನೆ. ಜಗದೀಶ್ ಶೆಟ್ಟರ್, ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗರಿಷ್ಠ ಮತದಿಂದ ಚುನಾಯಿಸಿ, ಕಮಲದ ಚಿಹ್ನೆಗೆ ನೀಡಿದ ಮತವು ಮೋದಿಯವರಿಗೆ ಹೋಗಲಿದೆ. ಮೋದಿಯವರನ್ನು ಸಶಕ್ತಗೊಳಿಸಲು ಬಿಜೆಪಿಗೆ ಮತದಾನ ಮಾಡಿ. ಪ್ರತಿ ಬೂತ್‍ನಲ್ಲಿ ಬಿಜೆಪಿ ಗೆಲ್ಲುವಂತೆ ನೋಡಿಕೊಳ್ಳಿ.

-ನರೇಂದ್ರ ಮೋದಿ, ಪ್ರಧಾನಿ.