ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ಸುಮಾರು 1,777 ಎಕರೆ ಫಲವತ್ತಾದ ಭೂಮಿಯನ್ನು ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವುದನ್ನು ವಿರೋಧಿಸಿ ಜೂ.25ರಂದು ದೇವನಹಳ್ಳಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.ಕಳೆದ ಬಿಜೆಪಿ ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದ್ದಾಗ ಇದನ್ನು ವಿರೋಧಿಸಿ ಆ ಭಾಗದ ರೈತರು ಪ್ರತಿಭಟನೆ ಸತ್ಯಾಗ್ರಹ ಪ್ರಾರಂಭಿಸಿದ್ದರು. ಆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಅದರಲ್ಲಿ ಪಾಲ್ಗೊಂಡು ಬಲವಂತದ ಭೂಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದರು. ಆದರೆ ಈಗ ಇವರು ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಮಾತಿಗೆ ತಪ್ಪಿದ ಸರ್ಕಾರದ ನೀತಿ ಖಂಡಿಸಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿ ಜೂ. 25 ರಂದು ದೇವನಹಳ್ಳಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ರೈತ, ದಲಿತ, ಕಾರ್ಮಿಕ, ಮಹಿಳಾ, ಯುವಜನ ಚಳವಳಿಗಾರರು, ಪ್ರಗತಿಪರ ಹೋರಾಟಗಾರರು ರಾಜ್ಯದ ಮೂಲೆ ಮೂಲೆಗಳಿಂದ ದೇವನಹಳ್ಳಿಗೆ ಬಂದು ಅಲ್ಲಿನ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟಿಸುವುದಾಗಿ ತಿಳಿಸಿದರು.ನಂಜನಗೂಡು ತಾಲೂಕಿನ ಚಿಕ್ಕಯ್ಯನಛತ್ರ ಹೋಬಳಿ ಇಮ್ಮಾವು ಗ್ರಾಮದ 1,123 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸ್ವಾಧೀನ ಪಡಿಸಿಕೊಂಡಿದೆ. ಇದರಲ್ಲಿ ಫಿಲಂ ಸಿಟಿಗಾಗಿಯೂ ಭೂಮಿ ನೀಡಲಾಗಿದೆ. ಆದರೆ ಅನೇಕ ಗ್ರಾಮಗಳ 700 ರೈತರು 70 - 80 ವರ್ಷಗಳಿಂದ ಸ್ವಾಧೀನ ಹೊಂದಿ ಬೇಸಾಯ ಮಾಡುತ್ತ ಬಂದಿದ್ದು, ಗೇಣಿ ಅರ್ಜಿಯನ್ನು ಕೂಡ ಸಲ್ಲಿಸಿದ್ದರು. ಇವರಲ್ಲದ ಅನೇಕ ಅನಧಿಕೃತ ಸಾಗುವಳಿ ಹೊಂದಿದ್ದ ರೈತರಿಗೆ 4 ಲಕ್ಷ ಎಕ್ಸ್ಗ್ರೇಷಿಯಾ ನೀಡಲು ತೀರ್ಮಾನಿಸಿ, ಈಗಾಗಲೆ ನೀಡಲಾಗಿದೆ. ಬೇರೆ ಬೇರೆ ತಾಲೂಕಿನವರೂ ಇದರಲ್ಲಿ ಸೇರಿದ್ದಾರೆ. ಹೀಗಾಗಿ ಈ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
92 ಕೋಟಿ ರು. ವೆಚ್ಚದಲ್ಲಿ ಕಾವೇರಿ ಆರತಿ ಎಂಬ ಅರ್ಥಹೀನ ಕಾರ್ಯಕ್ರಮಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ. ಅಮ್ಯೂಸ್ ಮೆಂಟ್ ಪಾರ್ಕ್ ಕೂಡ ಬೇಡ, ಇದರಿಂದ ಕೆಆರ್ಎಸ್ ಗೆ ಧಕ್ಕೆಯಾಗಲಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಎ.ಎಲ್. ಕೆಂಪೂಗೌಡ, ಹೊಸಕೋಟೆ ಬಸವರಾಜು, ಹೊಸೂರು ಕುಮಾರ್, ಪಿ. ಮರಂಕಯ್ಯ ಮೊದಲಾದವರು ಇದ್ದರು.