ಹಾವೇರಿ: ದೇವರ ದಾಸಿಮಯ್ಯ ಅವರು 12ನೇ ಶತಮಾನದ ಬಸವಣ್ಣನವರ ಕಾಲದ ಶರಣರು. ವಚನ ಸಾಹಿತ್ಯದ ಮೂಲಕ ಸಮಾಜಕ್ಕೆ ಸಮಾನತೆ, ಸತ್ಯ ಮತ್ತು ಕಾಯಕದ ಮಹತ್ವ ಸಾರಿದ ಮಹಾನ್ ವ್ಯಕ್ತಿ ಎಂದು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಲಾದ ಆದ್ಯ ವಚನಕಾರರಾದ ಶ್ರೀ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತಿಗಳು ಆಯಾ ಸಮುದಾಯಗಳಿಗೆ ಮಾತ್ರ ಸೀಮಿತವಾಗಬಾರದು. ಎಲ್ಲರೂ ಶರಣರ ಜಯಂತಿಗಳಲ್ಲಿ ಭಾಗವಹಿಸಬೇಕು. ಸರ್ಕಾರ ಮಹಾನ್ ವ್ಯಕ್ತಿಗಳ ಹಾಗೂ ಶರಣರ ಜೀವನ ಮತ್ತು ತತ್ವಗಳನ್ನು ತಿಳಿಸಲು ಜಯಂತಿ ಆಚರಣೆ ಮಾಡುತ್ತಿದ್ದು, ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಜಯಂತಿಗಳಲ್ಲಿ ಭಾಗವಹಿಸಿ, ಮಹಾನ್ ವ್ಯಕ್ತಿಗಳ ತತ್ವದಾರ್ಶಗಳನ್ನು ತಿಳಿದುಕೊಂಡಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.ಹಾವೇರಿ ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಉದ್ಘಾಟಿಸಿ ಮಾತನಾಡಿ, ದೇವರ ದಾಸಿಮಯ್ಯ ಸಮಾಜದಲ್ಲಿ ಸಮಾನತೆ ಮತ್ತು ಧರ್ಮದ ಅರಿವು ಮೂಡಿಸಿದವರು. ಅವರು ವಚನ ಸಾಹಿತ್ಯದ ಮೊದಲ ಶರಣರಾಗಿದ್ದು, ಸಮಾಜದಲ್ಲಿ ಸಮಾನತೆ, ಸತ್ಯ ಮತ್ತು ಭಕ್ತಿ ಎಂಬ ಮೌಲ್ಯಗಳನ್ನು ಜನರಿಗೆ ಬೋಧಿಸಿದವರು ಎಂದು ಬಣ್ಣಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಮಾತನಾಡಿ, ವಚನ ಸಾಹಿತ್ಯದಲ್ಲಿ ಅನೇಕ ಶರಣರು ಇದ್ದರೂ ದೇವರ ದಾಸಿಮಯ್ಯ ಪ್ರಮುಖ ಸ್ಥಾನ ಪಡೆದಿದ್ದಾರೆ. ಅವರ ವಚನಗಳು ಜನಸಾಮಾನ್ಯರಿಗೆ ದಾರಿದೀಪವಾಗಿವೆ ಎಂದು ಹೇಳಿದರು.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ಸಾಹಿತ್ಯದ ಮೂಲಕ ಸಮಾಜದಲ್ಲಿ ಜನಜಾಗೃತಿ ಮೂಡಿಸಿದ ಅನೇಕ ಮಹಾನ್ ವ್ಯಕ್ತಿಗಳಲ್ಲಿ ದೇವರ ದಾಸಿಮಯ್ಯ ಅವರು ಒಬ್ಬರು. ಶರಣರು ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ವ್ಯಕ್ತಿಗಳು. ಶರಣರ ತತ್ವಾದರ್ಶಗಳನ್ನು ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸ ನೀಡಿದ ಶಿಗ್ಗಾಂವಿ ಚನ್ನಪ್ಪ ಕನ್ನೂರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ ದ್ಯಾಮನಕೊಪ್ಪ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ದಾಸಿಮಯ್ಯ ಅವರ ಸ್ಥಾನ ಅತ್ಯಂತ ಮಹತ್ವದ್ದಾಗಿದೆ. ಅವರ ಜೀವನ ಮತ್ತು ವಚನಗಳು ಇಂದಿಗೂ ಜನರಿಗೆ ಸತ್ಯ, ನಿಷ್ಠೆ ಮತ್ತು ಸಮಾನತೆ ಎಂಬ ಮೌಲ್ಯಗಳನ್ನು ಕಲಿಸುತ್ತಿವೆ. ಸಮಾಜದಲ್ಲಿನ ಜಾತಿ ಭೇದ, ಅಸಮಾನತೆ ಮತ್ತು ಅಂಧಶ್ರದ್ಧೆಗಳನ್ನು ಅವರು ತೀವ್ರವಾಗಿ ವಿರೋಧಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.
ತಹಸೀಲ್ದಾರ್ ಶರಣಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಹಿರೇಮಠ, ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಗೌರವಾಧ್ಯಕ್ಷ ಡಾ. ಬಸವರಾಜ ಕೆಲಗಾರ, ಜಿಲ್ಲಾ ಅಧ್ಯಕ್ಷ ಹನುಮಂತಪ್ಪ ಮುಕ್ತೇನಹಳ್ಳಿ ಉಪಸ್ಥಿತರಿದ್ದರು.