ಹೂವಿನಹಡಗಲಿ: ಸೈನ್ಯಕ್ಕೆ ಸೇರದೇ ಆಕಸ್ಮಿಕವಾಗಿ ರಾಜಕೀಯ ಕ್ಷೇತ್ರಕ್ಕೆ ಧುಮುಕಿದ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಶ್ರಮ ಸಂಸ್ಕೃತಿ ಹರಿಕಾರರಾಗಿದ್ದರು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ. ಕೊಟ್ರಗೌಡ ಹೇಳಿದರು.

ಇಲ್ಲಿನ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರವನ್ನು ದರ್ಪ ಮತ್ತು ಅಹಂಕಾರಕ್ಕೆ ಬಳಕೆ ಮಾಡಿಕೊಳ್ಳದೇ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಇಂದಿನ ರಾಜಕಾರಣಿಗಳು ಖುರ್ಚಿಗೆ ಹೆಚ್ಚು ಮಹತ್ವ ನೀಡುತ್ತಾರೆ, ಆದರೆ ಅರಸು ಅದಕ್ಕೆ ಹೊರತಾಗಿದ್ದರು. ಅಸಮಾನತೆ ವಿರುದ್ಧ ಇವರ ಹೋರಾಟ ಅವಿಸ್ಮರಣೀಯವಾಗಿದೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಮೇಶ ಮಾತನಾಡಿ, ಅರಸು ಅವರು ಸಮಾಜದಲ್ಲಿ ಶೋಷಿತರ ಪರವಾಗಿ ನಿಂತು, ಜೀತ ಪದ್ಧತಿ, ಭೂ ಒಡೆತನ, ಎಲ್‌.ಜಿ. ಹಾವನೂರು ವರದಿ ಹೀಗೆ ಹತ್ತಾರು ಕಾರ್ಯಕ್ರಮಗಳನ್ನು ನೀಡಿದರು. ಗ್ರಾಮೀಣ ಭಾಗದ ಬಡ ಮಕ್ಕಳಿಗೆ ವಸತಿ ಸೌಲಭ್ಯ ಕಲ್ಪಿಸಿದ ಪರಿಣಾಮ, ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಸರೆಯಾಯಿತು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತಾಪಂ ಇಒ ಜಿ. ಪರಮೇಶ್ವರ ಇತರರು ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಜಿ. ಹನುಮಂತಪ್ಪ, ಸಹಾಯಕ ಕೃಷಿ ನಿರ್ದೇಶಕ ಕೆ.ಟಿ. ಮಂಜುನಾಥ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಕೆ. ಪ್ರದೀಪ್‌ಕುಮಾರ, ಎಪಿಎಂಸಿ ಕಾರ್ಯದರ್ಶಿ ತಿಮ್ಮಪ್ಪ ನಾಯಕ, ಸಮಾಜ ಕಲ್ಯಾಧಿಕಾರಿ ಜ್ಯೋತಿ ಯಳಿವಾಳ, ಸಿಡಿಪಿಒ ರೇಣುಕಾ, ದೈಹಿಕ ಅಧೀಕ್ಷಕ ರಫಿ ಅಹಮದ್‌ ಖವಾಸ್‌, ತಾಪಂ ಎಡಿ ಹೇಮಾದ್ರಿ ನಾಯ್ಕ ಇತರರಿದ್ದರು.

ಇದೇ ವೇಳೆ ಬಿಸಿಎಂ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಶೋಭಾ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.