ಸಾರಾಂಶ
ಉರ್ವಸ್ಟೋರ್ನಲ್ಲಿ ನಿರ್ಮಾಣಗೊಂಡ ಡಿ.ದೇವರಾಜ ಅರಸು ಭವನದ ನೂತನ ಕಟ್ಟಡ ಹಾಗೂ ಶ್ರೀಮತಿ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯದ ಉದ್ಘಾಟನೆ, ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಉರ್ವಸ್ಟೋರ್ನಲ್ಲಿ ನಿರ್ಮಾಣಗೊಂಡ ಡಿ.ದೇವರಾಜ ಅರಸು ಭವನದ ನೂತನ ಕಟ್ಟಡ ಹಾಗೂ ಶ್ರೀಮತಿ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯದ ಉದ್ಘಾಟನೆ, ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನೂರಾರು ಶಿಕ್ಷಣ ಸಂಸ್ಥೆಗಳಿದ್ದು, ದೇಶದ ಮೂಲೆ ಮೂಲೆಯಿಂದ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಕಾರಣದಿಂದಲೇ ಇಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಬೇಡಿಕೆ ಹೆಚ್ಚಿದೆ. ಈಗಾಗಲೇ ಸುಮಾರು 5 ಕೋಟಿ ರು. ವೆಚ್ಚದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಾಣಗೊಂಡಿದೆ. ಮಾತ್ರವಲ್ಲದೆ 2 ಹೊಸ ವಿದ್ಯಾರ್ಥಿ ನಿಲಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನದಲ್ಲಿ ಇಲಾಖೆಯಿಂದ ಹೆಚ್ಚಿನ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಅನುದಾನ ಮೀಸಲಿಡಲಾಗುವುದು ಎಂದು ಹೇಳಿದರು.
ಮಹಿಳೆಯರಿಗೆ ಹೆಚ್ಚಿನ ಶಕ್ತಿ ನೀಡುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಫಲಾನುಭವಿಗಳಿಗೆ ಯಶಸ್ವಿಯಾಗಿ ತಲುಪುತ್ತಿವೆ. ರಾಜಕೀಯ ವಲಯದಲ್ಲೂ ಮಹಿಳೆಯರಿಗೆ ಹೆಚ್ಚು ಅವಕಾಶ ನೀಡಬೇಕಾಗಿದ್ದು, ವಿಧಾನಸಭೆ ಹಾಗೂ ಸಂಸತ್ತಿನಲ್ಲೂ ಹೆಚ್ಚಿನ ಅವಕಾಶ ಸಿಗಬೇಕಾಗಿದೆ. ಇದಕ್ಕಾಗಿ ಮಹಿಳೆಯರು ಹೆಚ್ಚು ಶಿಕ್ಷಣವಂತರಾಗಬೇಕು. ಸರ್ಕಾರ ಮಹಿಳಾ ಶಿಕ್ಷಣಕ್ಕೆ ಬೇಕಾಗಿರುವ ಯೋಜನೆಗಳನ್ನು ಜಾರಿಗೊಳಿಸಲು ಬದ್ಧವಾಗಿದೆ ಎಂದರು.ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿನಾಯಕ ಕರ್ಬಾರಿ, ಎಂಎಲ್ಸಿ ಐವನ್ ಡಿಸೋಜ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ಎನ್. ನಾಯಕ್, ತಾಲೂಕು ಕಲ್ಯಾಣಾಧಿಕಾರಿ ಮಹಾಲಕ್ಷ್ಮಿ ಬೋಳಾರ್, ಗೇರು ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಸದಾನಂದ ಮಾವಜಿ ಇದ್ದರು.