ಯಾವುದೇ ಸರ್ಕಾರಿ ನೆರವಿಗೆ ಕಾಯದೇ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ
ಕನ್ನಡಪ್ರಭ ವಾರ್ತೆ ಕೊಟ್ಟಿಗೆಹಾರಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದೇವರಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ತುಂಬಾ ಗುಂಡಿ-ಹೊಂಡಗಳಿಂದ ಕೂಡಿರುವ ಕಾರಣ ಸ್ಥಳೀಯ ಗ್ರಾಮಸ್ಥರೇ ಸ್ವಯಂಪ್ರೇರಿತರಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.ದೇವರಮನೆಗೆ ವಾರಾಂತ್ಯದ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು, ರಸ್ತೆ ಹಾಳಾಗಿರುವುದರಿಂದ ವಾಹನ ಸಂಚಾರ ದುಸ್ತರವಾಗಿದೆ. ಗುಂಡಿ-ಹೊಂಡಗಳ ಕಾರಣ ವಾಹನಗಳು ನಿಧಾನವಾಗಿ ಸಂಚರಿಸಬೇಕಾಗಿದ್ದು, ವಾರಾಂತ್ಯದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಯಾವುದೇ ಸರ್ಕಾರಿ ನೆರವಿಗೆ ಕಾಯದೇ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಸಿದರು.ಗ್ರಾಮಸ್ಥರಾದ ಗೌತಮ್ ಕೋಗಿಲೆ ಮಾತನಾಡಿ, "ದೇವರಮನೆ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿದ್ದರೂ ರಸ್ತೆ ಸಂಪೂರ್ಣ ಹಾಳಾಗಿದೆ. ಪ್ರತಿದಿನ ನೂರಾರು ವಾಹನಗಳು ಮತ್ತು ವಾರಾಂತ್ಯದಲ್ಲಿ ಸಾವಿರಾರು ಪ್ರವಾಸಿಗರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳಲಾಗಿಲ್ಲ. ಜನರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಗ್ರಾಮಸ್ಥರೇ ಸ್ವಯಂಪ್ರೇರಿತರಾಗಿ ರಸ್ತೆ ದುರಸ್ತಿ ಮಾಡಿದ್ದೇವೆ. ಸಂಬಂಧಪಟ್ಟ ಇಲಾಖೆ ಶೀಘ್ರದಲ್ಲೇ ಈ ರಸ್ತೆಯನ್ನು ಶಾಶ್ವತವಾಗಿ ಅಭಿವೃದ್ಧಿಪಡಿಸಬೇಕು, " ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಸಜಿತ್. ತಾರನಾಥ್ ಆಧುನಿಕ. ಸತೀಶ್. ರಂಜಿತ್. ವೀರೇಶ್. ಮೊದಲಾದವರಿದ್ದರು.
