ಚತುಷ್ಟಥ ಹಾಸನ-ಬೇಲೂರು ಮಾರ್ಗದ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ಸುಮಾರು ₹ ೪೭೮ ಕೋಟಿ ಯೋಜನೆಯ ಹಿಂದೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಹೋರಾಟ ಮತ್ತು ನಿರಂತರ ಪ್ರಯತ್ನ ಮಹತ್ವದ್ದಾಗಿದೆ. ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಪಟ್ಟಿಯಲ್ಲಿ ಬದಲಾವಣೆ ಮಾಡಿರುವ ಕ್ರಮದ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಚತುಷ್ಟಥ ಹಾಸನ-ಬೇಲೂರು ಮಾರ್ಗದ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ಸುಮಾರು ₹ ೪೭೮ ಕೋಟಿ ಯೋಜನೆಯ ಹಿಂದೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಹೋರಾಟ ಮತ್ತು ನಿರಂತರ ಪ್ರಯತ್ನ ಮಹತ್ವದ್ದಾಗಿದೆ. ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಪಟ್ಟಿಯಲ್ಲಿ ಬದಲಾವಣೆ ಮಾಡಿರುವ ಕ್ರಮದ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ತಿಳಿಸಿದರು.ನಗರದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಹಾಸನ-ಬೇಲೂರು ಮಾರ್ಗಕ್ಕೆ ಸಂಬಂಧ ಪಟ್ಟ ಹೆದ್ದಾರಿ ಕಾಮಗಾರಿ ರಸ್ತೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಶಾಸಕರು ಉತ್ತರಿಸಿ, ಸಂಬಂಧಪಟ್ಟ ಯೋಜನೆ ಅಥವಾ ಕಾಮಗಾರಿಯನ್ನು ಜಿಲ್ಲೆಗೆ ತರಲು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ತಮ್ಮ ಅವಧಿಯಲ್ಲಿ ಸಾಕಷ್ಟು ಹೋರಾಟ ನಡೆಸಿದ್ದರು. ಅವರ ನಿರಂತರ ಪ್ರಯತ್ನ ಮತ್ತು ಹೋರಾಟದ ಫಲವಾಗಿಯೇ ಯೋಜನೆಗೆ ಮಂಜೂರಾತಿ ದೊರೆತು, ಅನುಷ್ಠಾನದ ಹಂತಕ್ಕೆ ಬಂದಿದೆ ಎಂದು ತಿಳಿಸಿದರು. ಈ ವಿಷಯದ ಕುರಿತು ತಾವು ಕೂಡ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿದ್ದು, ಯೋಜನೆಗೆ ಸಂಬಂಧಿಸಿದ ಪತ್ರ ವ್ಯವಹಾರಗಳು ಹಾಗೂ ಸರ್ಕಾರದ ದಾಖಲೆಗಳ ಮೂಲಕ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದರು. ಯೋಜನೆಗೆ ಸಂಬಂಧಿಸಿದಂತೆ ಸುಮಾರು ೪೭೮ ಕೋಟಿ ರು. ವೆಚ್ಚದ ಪ್ರಸ್ತಾವನೆ ಅಥವಾ ಅನುದಾನದ ಕುರಿತು ಈ ಹಿಂದೆ ಹಲವು ಹಂತಗಳಲ್ಲಿ ಚರ್ಚೆ ನಡೆದಿದ್ದು, ಅಗತ್ಯ ಕ್ರಮಕ್ಕಾಗಿ ಸಭೆಗಳನ್ನು ಕರೆಯಲಾಗಿತ್ತು. ಯೋಜನೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಫಾಲೋ ಅಪ್ ಮಾಡಲಾಗಿದೆ ಎಂದು ಹೇಳಿದರು. ದೇವೇಗೌಡರ ಕಾಲದಲ್ಲಿ ಅವರ ಹೋರಾಟದ ಹಿನ್ನೆಲೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಗಳು ನಡೆದಿದ್ದವು. ಈ ಕುರಿತು ಲಭ್ಯವಿರುವ ಎಲ್ಲ ಪತ್ರಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸಂಪೂರ್ಣ ವಿವರಗಳನ್ನು ಚರ್ಚಿಸಿ ಸ್ಪಷ್ಟಪಡಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ಅವರ ಮನವಿ ನೀಡಿ ನಿರಂತರ ಪ್ರಯತ್ನದಿಂದ ಬಂದಿದೆ ಎನ್ನುವ ಹೇಳಿಕೆಗೆ ಶಾಸಕರು ಸ್ಪಷ್ಟಪಡಿಸಿದರು.
ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಪಟ್ಟಿಯಲ್ಲಿ ಬದಲಾವಣೆ ಮಾಡಿರುವ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಶಾಸಕರು ತಿಳಿಸಿದರು. ಹಾಸನ ಜಿಲ್ಲೆಯ ಪಂಚಾಯಿತಿ ಮೀಸಲಾತಿ ವಿಚಾರದಲ್ಲಿ ಈ ಹಿಂದೆ ಸಾಕಷ್ಟು ಹೋರಾಟ ನಡೆಸಲಾಗಿದೆ. ಈ ಸಂಬಂಧ ಹಲವು ಬಾರಿ ಚರ್ಚೆ ನಡೆಸುವುದರ ಜತೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರಕ್ಕೆ ಪತ್ರಗಳ ಮೂಲಕ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಮೀಸಲಾತಿಗೆ ಸಂಬಂಧಿಸಿದಂತೆ ಈಗಾಗಲೇ ಒಂದು ಪಟ್ಟಿ ಬಿಡುಗಡೆ ಮಾಡಿ, ನಂತರ ಅದರಲ್ಲಿ ಬದಲಾವಣೆ ಮಾಡಿರುವುದು ಪ್ರಶ್ನಾರ್ಹವಾಗಿದೆ. ಒಂದು ಬಾರಿ ಅಧಿಕೃತವಾಗಿ ಪಟ್ಟಿ ಪ್ರಕಟಿಸಿದ ಬಳಿಕ ಅದರಲ್ಲಿ ಬದಲಾವಣೆ ಮಾಡಿರುವ ಕ್ರಮದಿಂದ ಹಲವು ಗೊಂದಲಗಳು ಉಂಟಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ಮತ್ತು ಪತ್ರ ವ್ಯವಹಾರಗಳನ್ನು ಸಂಗ್ರಹಿಸಲಾಗುತ್ತಿದೆ. ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು. ಹಿಂದೆಯೂ ಈ ವಿಚಾರದಲ್ಲಿ ಜನಪ್ರತಿನಿಧಿಗಳು ಹಾಗೂ ಮುಖಂಡರು ನಿರಂತರವಾಗಿ ಹೋರಾಟ ನಡೆಸಿದ್ದರು. ಹಿರಿಯ ನಾಯಕರ ಹೋರಾಟದ ಫಲವಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಕ್ರಮಗಳು ಕೈಗೊಳ್ಳಲಾಗಿದ್ದವು ಎಂದು ಸ್ಮರಿಸಿದರು.ಪಂಚಾಯಿತಿ ಮೀಸಲಾತಿ ಪಟ್ಟಿಯಲ್ಲಿನ ಬದಲಾವಣೆಯಿಂದ ಅನ್ಯಾಯವಾಗಿರುವ ಬಗ್ಗೆ ಸಮಗ್ರ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಅಗತ್ಯವಿದ್ದಲ್ಲಿ ನ್ಯಾಯಾಲಯದ ಮೂಲಕ ನ್ಯಾಯ ಪಡೆಯಲು ಮುಂದಾಗಲಾಗುವುದು ಎಂದು ಹೇಳಿದರು.