Develop a research spirit: Basappa Gowda
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶೈಕ್ಷಣಿಕ ಕ್ಷೇತ್ರದಲ್ಲಿ ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ. ಬಸಪ್ಪಗೌಡ ಹೇಳಿದರು.ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಗಣಿತಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೈಥಾನ್ ಬೋಧನೆ ಮತ್ತು ಸಂಶೋಧನೆ ಕುರಿತ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬೋಧನಾ ಕ್ರಮದಲ್ಲಿ ಧನಾತ್ಮಕ ಬದಲಾವಣೆಗಳನ್ನು ಅಳವಡಿಸಿಕೊಳ್ಳಬೇಕು. ನಿರಂತರ ಕಲಿಕಾ ಮನೋಭಾವ ಇದ್ದಲ್ಲಿ ಉತ್ತಮ ಶಿಕ್ಷಣ ನೀಡಲು ಸಾಧ್ಯ. ವಿದ್ಯಾರ್ಥಿಗಳ ಕಲಿಕಾ ಸಾಮಾರ್ಥ್ಯ ವೃದ್ಧಿಸುವಂತೆ ಪೂರಕವಾಗಿ ಸಿದ್ಧತೆ ನಡೆಸಬೇಕು ಎಂದು ತಿಳಿಸಿದರು.ಕುವೆಂಪು ವಿಶ್ವವಿದ್ಯಾಲಯ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಸ್.ಕೆ. ನರಸಿಂಹಮೂರ್ತಿ ಮಾತನಾಡಿ, ಬೋಧನೆ ಮತ್ತು ಸಂಶೋಧನೆಯಲ್ಲಿ ಆಧುನಿಕ ವೈಜ್ಞಾನಿಕ ಉಪಕರಣಗಳ ಬಳಕೆಯು ಅಗತ್ಯವಿದೆ ಎಂದು ಹೇಳಿದರು.ದೇಶೀಯ ವಿದ್ಯಾಶಾಲಾ ಸಮಿತಿ ಜಂಟಿ ಕಾರ್ಯದರ್ಶಿ ಡಾ.ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಪೈಥಾನ್ ಉಪಯೋಗ ಮತ್ತು ಪ್ರಸ್ತುತತೆ ಕುರಿತು ವಿವರಿಸಿದರು. ಬೋಧನೆ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ಪೈಥಾನ್ನಂತಹ ವೈಜ್ಞಾನಿಕ ತಂತ್ರಾಂಶಗಳ ಬಳಕೆಯು ಮಹತ್ವ ಪಡೆದಿದೆ ಎಂದರು.ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಪ್ರಥಮ ದರ್ಜೆ ಕಾಲೇಜುಗಳ ಅಧ್ಯಾಪಕರು ಭಾಗವಹಿಸಿದ್ದರು. ಬೋಧನೆ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಪೈಥಾನ್ ಬಳಕೆ, ಅದರ ಮಹತ್ವ ಹಾಗೂ ವೈಜ್ಞಾನಿಕ ಗಣಿತೀಯ ಸಮಸ್ಯೆಗಳ ಪರಿಹಾರದಲ್ಲಿ ಪೈಥಾನ್ ಅನ್ನು ಪರಿಣಾಮಕಾರಿಯಾಗಿ ಬಳಸುವ ವಿಧಾನಗಳ ಕುರಿತು ಮಾಹಿತಿ ನೀಡಲಾಯಿತು.ಅಧ್ಯಾಪಕರಿಗೆ ಪೈಥಾನ್ನ ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸಿಕೊಳ್ಳಲು ಹಾಗೂ ಬೋಧನೆ ಮತ್ತು ಸಂಶೋಧನಾ ಚಟುವಟಿಕೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಕಾರ್ಯಾಗಾರ ಉತ್ತಮ ಅವಕಾಶ ಒದಗಿಸಿತು.ಡಿವಿಎಸ್ ಸಂಸ್ಥೆಯ ಕುಲಸಚಿವ ಪ್ರೊ. ಎಂ.ವೆಂಕಟೇಶ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಎನ್. ಕುಮಾರಸ್ವಾಮಿ, ಜೆಎನ್ಸಿ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ಅಂಕಲ್ಕೋಟಿ, ಡಿವಿಎಸ್ ಸಹಾಯಕ ಪ್ರಾಧ್ಯಾಪಕ ಮನೋಜ್, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ್ ಎ.ಎನ್. ಇತರರಿದ್ದರು.-----------------
ಪೊಟೋ: 29ಎಸ್ಎಂಜಿಕೆಪಿ02ಶಿವಮೊಗ್ಗದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಗಣಿತಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೈಥಾನ್ ಬೋಧನೆ ಮತ್ತು ಸಂಶೋಧನೆ ಕುರಿತ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಉದ್ಘಾಟಿಸಿದರು.