ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ರೆ ಮಾತ್ರ ಅಭಿವೃದ್ಧಿ

| Published : Mar 09 2025, 01:49 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆಯರಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಸಾಧ್ಯ. ಮಹಿಳೆ ಒಂದೇ ಕ್ಷೇತ್ರವಲ್ಲದೇ ಹಲವಾರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇಂದು ಇಡೀ ವಿಶ್ವದಲ್ಲೇ ಅಗ್ರಸ್ಥಾನ ಪಡೆದಿದ್ದಾಳೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮಹಿಳೆಯರಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಸಾಧ್ಯ. ಮಹಿಳೆ ಒಂದೇ ಕ್ಷೇತ್ರವಲ್ಲದೇ ಹಲವಾರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇಂದು ಇಡೀ ವಿಶ್ವದಲ್ಲೇ ಅಗ್ರಸ್ಥಾನ ಪಡೆದಿದ್ದಾಳೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫ ಉದ್ಘಾಟಿಸಿ ಮಾತನಾಡಿದರು. ಮಹಿಳಾ ವಿಶ್ವವಿದ್ಯಾನಿಲಯ ಮಹಿಳೆಯರ ಶಕ್ತಿಯನ್ನು ಗುರುತಿಸುವ ಹಾಗೂ ಅವರ ಸೌಭಾಗ್ಯವನ್ನು ಬೆಳೆಸುವ ಪ್ರಮುಖ ಕೇಂದ್ರವಾಗಿದೆ. ಇದು ಕೇವಲ ಶಿಕ್ಷಣ ನೀಡುವ ಕೇಂದ್ರವಲ್ಲ, ಆತ್ಮವಿಶ್ವಾಸ, ಸ್ವಾಯತ್ತತೆ ಮತ್ತು ನಾಯಕತ್ವ ಗುಣಗಳನ್ನು ವೃದ್ಧಿಸುತ್ತದೆ. ಸಮಾನತೆ ಮತ್ತು ನ್ಯಾಯದ ತತ್ವಗಳನ್ನು ಬೆಳೆಸುವ ಈ ಸಂಸ್ಥೆ, ಮಹಿಳೆಯರನ್ನು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ಹೆಣ್ಣುಮಕ್ಕಳು ಗುಣಾತ್ಮಕ ಶಿಕ್ಷಣ ಪಡೆದು, ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಲು ಸಾಧ್ಯ. ಸಮಾಜದ ಬೆಳೆವಣಿಗೆಗೆ ಮಹಿಳೆಯರ ಶಿಕ್ಷಣ ಅತ್ಯಗತ್ಯಗಿದೆ. ಈ ವಿಶ್ವವಿದ್ಯಾನಿಲಯ ಮತ್ತಷ್ಟು ಬಲಪಡಿಸಲು ನಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಅಗತ್ಯ ಎಂದರು.

ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ಮಾತನಾಡಿ, ಮಹಿಳಾ ಸಬಲೀಕರಣವನ್ನು ವೃದ್ಧಿಸಲು ನಮ್ಮ ವಿಶ್ವವಿದ್ಯಾನಿಲಯದ ಬೋಧಕ ಮತ್ತು ಬೋಧಕೇತರ ವರ್ಗ ನಿರಂತರ ಶ್ರಮವಹಿಸುತ್ತಿದೆ. ವಿದ್ಯಾರ್ಥಿನಿಯರು ನೀಡಲಾಗುವ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಸಮಗ್ರ ಅಭಿವೃದ್ಧಿಯತ್ತ ಗಮನಹರಿಸಬೇಕು. ನಮ್ಮ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಕಲೆ, ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರುತ್ತಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹತ್ತರ ಸಾಧನೆ ಮಾಡುತ್ತಾ, ಮಹಿಳಾ ಶಕ್ತಿಯ ಮಹತ್ವವನ್ನು ದೃಢಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾ ಉಸ್ತುವಾರಿ ಸಚಿವರ ಮಾಧ್ಯಮ ಸಲಹೆಗಾರ ಮಹಾಂತೇಶ ಬಿರಾದಾರ, ಪತ್ರಕರ್ತ ಮಹೇಶ ಶೆಟಗಾರ, ಸಿಂಡಿಕೇಟ್ ಸದಸ್ಯೆ ಮಮತಾ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಲಕ್ಷ್ಮೀದೇವಿ ಹಾಗೂ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕುಲಸಚಿವ ಶಂಕರಗೌಡ ಸೋಮನಾಳ ಸ್ವಾಗತಿಸಿದರು. ಪ್ರೊ.ರೇಣುಕಾ ಮೇಟಿ ಕಾರ್ಯಕ್ರಮ ನಿರೂಪಿಸಿದರು.