ಕನ್ನಡಪ್ರಭ ವಾರ್ತೆ ಶಿರಸಿ

ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಪಂ ವ್ಯಾಪ್ತಿಯ ಮಾದನಕಳ–ಶ್ರೀನಗರ ಸಂಪರ್ಕಿಸುವ ಸಿಮೆಂಟ್ ರಸ್ತೆ ನಿರ್ಮಾಣದ ₹20 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು, ಶಿರಸಿ–ಸಿದ್ದಾಪುರ ವಿಧಾನಸಭಾ ಕ್ಷೇತ್ರಕ್ಕೆ ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ನೂರಾರು ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸ್ವಾತಂತ್ರ್ಯ ಲಭಿಸಿ 78 ವರ್ಷವಾದರೂ ಇನ್ನೂ ಮೂಲಸೌಕರ್ಯ ಕಾಣದ ಗ್ರಾಮಗಳಿವೆ. ಅವುಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಅಹವಾಲುಗಳನ್ನು ಆಲಿಸಿ, ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲಾಗಿದೆ ಎಂದರು.ಅಭಿವೃದ್ಧಿ ಎನ್ನುವುದು ನಿಂತ ನೀರಲ್ಲ. ಸದಾ ಅಭಿವೃದ್ಧಿ ಕಾರ್ಯಗಳು ನಡೆಯುತ್ತಲೇ ಇರುತ್ತವೆ. ಅಲ್ಲದೇ, ಅಧಿಕಾರ ಶಾಶ್ವತವಲ್ಲ. ನಮ್ಮ ಅಧಿಕಾರಾವಧಿಯಲ್ಲಿ ಮಂಜೂರುಗೊಳಿಸಿ ಜನರ ಬೇಡಿಕೆಗಳನ್ನು ಈಡೇರಿಸುವುದು ಶಾಶ್ವತವಾಗಿರುತ್ತದೆ. ರಸ್ತೆ, ಸೇತುವೆ, ಕುಡಿಯುವ ನೀರು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಿ ರಾಜ್ಯದ ಕಾಂಗ್ರೆಸ್ ಸರ್ಕಾರ ಅನುದಾನ ನೀಡುತ್ತಿದೆ. ಅದನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ. ಕಾನಸೂರು ಗ್ರಾಪಂ ವ್ಯಾಪ್ತಿಗೆ ಸಾಕಷ್ಟು ಅನುದಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.ಕ್ಷೇತ್ರದ ಜನರು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ ಬಳಿಕ ಜನರ ಸೇವೆಯೇ ನನ್ನ ಮುಖ್ಯ ಗುರಿಯಾಗಿದೆ. ಅವರ ಬೇಡಿಕೆಗಳನ್ನು ಆಲಿಸಿ ಹಂತ ಹಂತವಾಗಿ ಈಡೇರಿಸುತ್ತಿದ್ದೇನೆ ಎಂಬ ಆತ್ಮತೃಪ್ತಿ ನನಗಿದೆ ಎಂದರು.ಕಾನಸೂರು ಗ್ರಾಪಂ ಮಾಜಿ ಅಧ್ಯಕ್ಷೆ ಅನಿತಾ ನಾಯ್ಕ, ತಾಪಂ ಕಾರ್ಯನಿರ್ವಹಣಾಧಿಕಾರಿ ದೇವರಾಜ ಹಿತ್ತಲಕೊಪ್ಪ, ಪ್ರಮುಖರಾದ ಬಾಬು ನಾಯ್ಕ, ಗುತ್ತಿಗೆದಾರ ರಾಘವೇಂದ್ರ ನಾಯ್ಕ ಸೇರಿದಂತೆ ಇತರರಿದ್ದರು.