ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಸ್ಕಿ ಕ್ಷೇತ್ರದ ಜನರು ಕೊಟ್ಟಿರುವ ಅವಕಾಶದಿಂದ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿ ಮಾಡಲು ಬದ್ಧನಾಗಿದ್ದೇನೆ. ಸರ್ಕಾರದಿಂದ ಬಂದಿರುವ ಅನುದಾನವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಶಾಸಕ ಆರ್ ಬಸನಗೌಡ ತುರ್ವಿಹಾಳ ಹೇಳಿದರು.

ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ 3 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿ ಹಾಗೂ 20 ಲಕ್ಷ ವೆಚ್ಚದ ಅಂಗನವಾಡಿ ಕಟ್ಟಡ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೇರವೇರಿಸಿ ಅವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಬಹುಮುಖ್ಯವಾಗಿ ಅಭಿವೃದ್ಧಿ ಕಾರ್ಯಗಳಿಗಾಗಿ ಹೆಚ್ಚಿನ ಹೊತ್ತು ನೀಡುವುದರ ಜೊತೆಗೆ ರೈತರ ಹಾಗೂ ಕಾರ್ಮಿಕರ ಜೊತೆಗೆ ಸದಾ ಇರುತ್ತದೆ. ಗ್ರಾಮೀಣ ಪ್ರದೇಶಕ್ಕೆ ಹೋಗುವ ರಸ್ತೆಗಳ ಅಭಿವೃದ್ಧಿಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಜೆಜೆಎಂ ಕಾಮಗಾರಿಗಳನ್ನು ಆದಷ್ಟು ಬೇಗನೆ ಮುಗಿಸಿ ಪ್ರತಿ ಮನೆಗೂ ನೀರು ತಲುಪಿಸುವ ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂತೆಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಂಬಮ್ಮ ಶಿವರಾಯ, ಆದನಗೌಡ ಮಾಲಿಪಾಟೀಲ್, ದ್ಯಾಮಣ್ಣ ಯರದಿಹಾಳ್, ಮಲ್ಲನಗೌಡ ಹಳ್ಳಿ, ಬಸನವರಾಜ್ ಕಂದಗಲ್, ವಜೀರ್ ಹುಸೇನ್, ಡಾ:ಶಿವರಾಜ್ ಸೇರಿದಂತೆ ಅಧಿಕಾರಿಗಳು ಹಾಗೂ ಇನ್ನಿತರ ಮುಖಂಡರಿದ್ದರು.ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದ ಶಾಸಕ

ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗೆ ಬುಧವಾರ ಬೇಟಿ ನೀಡಿದ ಶಾಸಕ ಆರ್,ಬಸನಗೌಡ ತುರ್ವಿಹಾಳ ಅವರು ಶಾಲಾ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದು ಸರಳತೆ ಮೆರೆದರು.