ಸಾರಾಂಶ
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಕ್ಷೇತ್ರದಲ್ಲಿ ಹೊಸ ಕಾಮಗಾರಿಗಳಿಗೆ ಚಾಲನೆ ದೊರೆತಿರಲಿಲ್ಲ. ಇನ್ನು ಎಂದಿನಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅರಸೀಕೆರೆ: ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯು ರಾಜ್ಯ ಹಾಗೂ ದೇಶದ ಬಲವರ್ಧನೆಗೆ ತಳಪಾಯವಿದ್ದಂತೆ ಎಂದು ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ತಾಲೂಕಿನ ಬಾಗೇಶಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಕೋರಿಕೆಯಂತೆ 20 ಲಕ್ಷ ರು. ವೆಚ್ಚದಲ್ಲಿ 2 ಹೆಚ್ಚುವರಿ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿ, ಅದರಲ್ಲೂ ವಿಶೇಷವಾಗಿ ನಾನು ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಮಹತ್ವ ನೀಡಿದ್ದೇನೆ. ಹೋಬಳಿವಾರು ಯಶಸ್ವಿಯಾಗಿ ನಡೆಯುತ್ತಿರುವ ವಸತಿ ಶಾಲೆಗಳು, ಮುಕ್ತಾಯದ ಹಂತದಲ್ಲಿರುವ ಎಂಜಿನಿಯರಿಂಗ್ ಕಾಲೇಜು ಹಾಗೂ ಕ್ಷೇತ್ರಾದ್ಯಂತ ಇರುವ ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಕ್ಷೇತ್ರದಲ್ಲಿ ಹೊಸ ಕಾಮಗಾರಿಗಳಿಗೆ ಚಾಲನೆ ದೊರೆತಿರಲಿಲ್ಲ. ಇನ್ನು ಎಂದಿನಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಶಿವಣ್ಣ ಮಾತನಾಡಿ, ರೈತರು, ವಿದ್ಯಾರ್ಥಿಗಳು ಸೇರಿ ಕ್ಷೇತ್ರದ ಜನತೆಯ ಅಪೇಕ್ಷೆಗೆ ಅನುಗುಣವಾಗಿ ಅವರ ನೋವು, ನಲಿವಿಗೆ ಸ್ಪಂದಿಸುತ್ತಾ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಶಿವಲಿಂಗೇಗೌಡ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಮಾಜಿ ತಾಪಂ ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಈರೇಗೌಡ, ಸ್ವಾಮಿ, ಶಿವೇಗೌಡ, ಎಂಜಿನಿಯರ್ ದೀಕ್ಷಿತ್, ಮುಖ್ಯ ಶಿಕ್ಷಕಿ ಶಬನಂ, ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ಇದ್ದರು.