ಕನ್ನಡಪ್ರಭ ವಾರ್ತೆ ವಿರಾಜಪೇಟೆ

ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಸ. ಪ್ರ.ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಕೆ. ಸರಸ್ವತಿ ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಆಶ್ರಯದಲ್ಲಿ ಮಂಗಳವಾರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ದಿ. ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಹಾಗೂ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್‍ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಇಂದು ಜಾತಿ, ಧರ್ಮ ಹಾಗೂ ಗಡಿಯನ್ನು ಮೀರಿ ಬೆಳೆದಿದೆ. ಇದಕ್ಕೆ ಒಂದು ಮುಖ್ಯ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತು. ತನ್ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ನಿರಂತರವಾಗಿ ಪೋಷಿಸುತ್ತ ವಿವಿಧ ಕಾರ್ಯಕ್ರಮ ಮೂಲಕ ಮುಂದಿನ ತಲೆಮಾರಿಗೆ ಕನ್ನಡದ ಶ್ರೇಷ್ಠತೆಯನ್ನು ಪರಿಚಿಸುವ ಕೆಲಸವನ್ನು ಮಾಡುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಗಳು, ಕವಿಗೋಷ್ಠಿ ಇನ್ನಿತರ ಕಾರ್ಯಕ್ರಮಗಳು ನಡೆದು ಕನ್ನಡ ಭಾಷೆ ಇನ್ನೂ ಬೆಳವಣಿಗೆ ಕಾಣುವುದರೊಂದಿಗೆ ಕನ್ನಡ ಭಾಷೆ ತನ್ನ ಅಸ್ಮಿತೆಯನ್ನು ಕನ್ನಡಿಗರಿಗೆ ತೋರಿಸಲಿ ಎಂದರು. ಕೊಡಗಿನ ಮಹಿಳಾ ಸಾಹಿತಿಗಳು ಎಂಬ ವಿಷಯ ಕುರಿತು ಉಪನ್ಯಾಸವನ್ನುನೀಡಿದ ನಿವೃತ್ತ ಶಿಕ್ಷಕಿ ಎಚ್.ಜಿ. ಸಾವಿತ್ರಿ ಅವರು ಕೊಡಗಿನಲ್ಲಿ ಕೊಡಗಿನ ಗೌರಮ್ಮನಿಂದ ಹಿಡಿದು ಇಂದಿನವರೆಗೂ ಕೃತಿಗಳನ್ನು ರಚಿಸಿದ ಪ್ರಮುಖ ಕವಿಯತ್ರಿಗಳು ಹಾಗೂ ಅವರಿಂದ ರಚಿಸಲ್ಪಟ್ಟ ಕೃತಿಗಳನ್ನು ಪರಿಚಯಿಸುವುದರೊಂದಿಗೆ ಮಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಟ್ಟದಲ್ಲಿ ಮಹಿಳೆಯರಿಂದ ಸಾಹಿತ್ಯ ಕೃತಿಗಳು ರಚನೆಯಾಗಲಿ ಎಂದು ಹೇಳಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಬಿ.ಬಿ. ಸುನಿಲ್ ಕುಮಾರ್ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್ . ತಿಮ್ಮಯ್ಯ ಅವರ ಜೀವನ ಸಾಧನೆ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ ಅದ್ಯಕ್ಷ ಎಂ.ಪಿ. ಕೇಶವ ಕಾಮತ್ ಕಾರ್‍ಯಕ್ರಮ ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು, ವೃತ್ತ ಪತ್ರಿಕೆಗಳನ್ನು ಓದುವುದರಿಂದ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯ. ಯಾವುದೇ ಕಾರ್ಯಕ್ರಮ, ಸ್ಪರ್ಧೆಯಾದರೂ ಅದರಲ್ಲಿ ಭಾಗವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು. ದತ್ತಿದಾನಿ ಮುಲ್ಲೇಂಗಡ ಮಧೂಶ್ ಪೂವಯ್ಯ ಮಾತನಾಡಿದರು. ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕನ್ನಡ ವಿಷಯದಲ್ಲಿ 100ಕ್ಕೆ 100 ಹಾಗೂ ಉತ್ತಮ ಅಂಕ ಪಡೆದ ಪದವಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿರಾಜಪೇಟೆ ತಾಲೂಕು ಕಸಾಪ ಗೌ. ಕೋಶಾಧಿಕಾರಿ ಶಬರೀಶ್ ಶೆಟ್ಟಿ, ಕೊಡಗು ಜಿಲ್ಲಾ ಕಸಾಪ ಸಹ ಕಾರ್‍ಯದರ್ಶಿ ಮಂಜುನಾಥ್, ಕನ್ನಡ ಉಪನ್ಯಾಸಕಿ ಕೆ. ಹರಿಣಿ, ಹರೀಶ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.