ಸಾರಾಂಶ
ನಗರದ ಇತಿಹಾಸ ಪ್ರಸಿದ್ಧ ಶ್ರೀ ಒಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶ್ರೀ ಒಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ರಾಜ್ಯ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ಹಾಗೂ ಪದಾಧಿಕಾರಿಗಳು ಮುಜರಾಯಿ ಸಚಿವರ ಬಳಿಗೆ ನಿಯೋಗ ತೆರಳುವ ಇಂಗಿತವನ್ನು ವ್ಯಕ್ತಪಡಿಸಿದರು.ಇದಕ್ಕೆ ಬೆಂಬಲ ಸೂಚಿಸಿದ ಶಾಸಕರು, ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಅನುದಾನ ಪಡೆಯಲು ತಮ್ಮ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.
ದೇವಾಲಯಕ್ಕೆ ಬರುವ ಭಕ್ತರಿಗೆ ದೇವಾಲಯ ವ್ಯವಸ್ಥಾಪನಾ ಸಮಿತಿಯಿಂದ ಅನುಕೂಲಕರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ದೇವಾಲಯದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ದೇವಾಲಯದ ಸಾಂಪ್ರದಾಯಿಕ ಉತ್ಸವಾದಿಗಳನ್ನು ಕಾಲಕಾಲಕ್ಕೆ ತಕ್ಕಂತೆ ನಡೆಸಿಕೊಂಡು ಹೋಗಬೇಕು ಎಂದು ಡಾ. ಮಂತರ್ ಗೌಡ ತಿಳಿಸಿದರು.ಸಮಿತಿಯ ಸದಸ್ಯರಾದ ಜಿ.ರಾಜೇಂದ್ರ, ಎ.ಎಸ್.ಪ್ರಕಾಶ್, ಸದಸ್ಯರು, ಶ್ರೀ ಆಂಜನೇಯ ದೇವಾಲಯದ ಅರ್ಚಕ ಎಂ.ಬಿ.ಸಂತೋಷ್ ಹಾಗೂ ಶ್ರೀ ಓಂಕಾರೇಶ್ವರ ದೇವಾಲಯದ ಸಿಬ್ಬಂದಿ ಹಾಜರಿದ್ದರು.