ವಕ್ಫ್ ಸಂಸ್ಥೆಗಳ ಅಭಿವೃದ್ಧಿಗೆ ಪರಸ್ಪರ ಸಹಕಾರ ಮತ್ತು ಒಗ್ಗಟ್ಟು ಮುಖ್ಯ. ಪ್ರತಿಯೊಂದು ಸಂಸ್ಥೆಯಲ್ಲಿರುವ ಸಮಸ್ಯೆಗಳನ್ನು ಎಲ್ಲರೂ ಕುಳಿತು ಚರ್ಚಿಸಿ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು.
ಹುಬ್ಬಳ್ಳಿ:
ವಕ್ಫ್ ಸಂಸ್ಥೆಗಳ ಚುನಾಯಿತ ಮಂಡಳಿಗಳು ತಮ್ಮ ಮೊಹಲ್ಲಾಗಳ ಸಮಸ್ಯೆಗಳನ್ನು ಪರಸ್ಪರ ಸಮಾಧಾನದಿಂದ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಸಂಸ್ಥೆಗಳ ಅಭಿವೃದ್ಧಿಗೆ ಮೊದಲು ನಮ್ಮಲ್ಲಿ ಒಗ್ಗಟ್ಟು ಕಾಯ್ದುಕೊಳ್ಳುವುದು ಅಗತ್ಯ. ಬೇರೆಯವರ ಮೇಲೆ ಅವಲಂಬಿತರಾಗುವುದಕ್ಕಿಂತ ನಾವೇ ಸಂಘಟಿತರಾಗಿ ಮುನ್ನಡೆಯಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.ನಗರದ ಅಂಜುಮನ್-ಎ- ಇಸ್ಲಾಂ ಸಂಸ್ಥೆಯ ನೆಹರು ಕಾಲೇಜು ಆವರಣದ ಸರ್ದಾರ್ ಮಹಬೂಬಲಿಖಾನ್ ಶಾಲೆಯ ಮೈದಾನದಲ್ಲಿ ಶನಿವಾರ ಧಾರವಾಡ ಜಿಲ್ಲಾ ವಕ್ಫ್ ಸಂಸ್ಥೆಗಳ ಮುತುವಲ್ಲಿಗಳಿಗಾಗಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ವಕ್ಫ್ ಸಂಸ್ಥೆಗಳ ಅಭಿವೃದ್ಧಿಗೆ ಪರಸ್ಪರ ಸಹಕಾರ ಮತ್ತು ಒಗ್ಗಟ್ಟು ಮುಖ್ಯ. ಪ್ರತಿಯೊಂದು ಸಂಸ್ಥೆಯಲ್ಲಿರುವ ಸಮಸ್ಯೆಗಳನ್ನು ಎಲ್ಲರೂ ಕುಳಿತು ಚರ್ಚಿಸಿ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಆಗ ಮಾತ್ರ ಸಂಸ್ಥೆಗಳು ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಮುತುವಲ್ಲಿಗಳು ಹಾಗೂ ಚುನಾಯಿತ ಮಂಡಳಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ತಮ್ಮ ಅನಾನುಕೂಲತೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸಲು ತಾವು ಸದಾ ಸಿದ್ಧ ಎಂದು ಸಚಿವರು ಭರವಸೆ ನೀಡಿದರು.ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಯಾಸಿರಖಾನ್ ಪಠಾಣ, ಮಾಜಿ ಸಂಸದ ಐ.ಜಿ. ಸನದಿ, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಸೇರಿದಂತೆ ಶಿಕ್ಷಣ ಮಂಡಳಿ, ಆಸ್ಪತ್ರೆ ಮಂಡಳಿ ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರು, ಧಾರವಾಡ ಜಿಲ್ಲೆಯ ವಿವಿಧ ವಕ್ಫ್ ಸಂಸ್ಥೆಗಳ ಮುತುವಲ್ಲಿಗಳಿದ್ದರು.