ಗದಗ: ಜನರಿಂದಲೇ ಅಭಿವೃದ್ಧಿ ಯೋಜನೆಗಳು ರೂಪುಗೊಳ್ಳಬೇಕು. ಕೆಳಮಟ್ಟದಿಂದ ಮೇಲ್ಮಟ್ಟದವರೆಗೆ ಆಡಳಿತ ರೂಪಿಸಲು ಜಿಲ್ಲಾ ಯೋಜನಾ ಸಮಿತಿ ರಚಿಸಲಾಗಿದೆ. ಈ ಸಭೆಯು ನಿಜವಾಗಿಯೂ ಐತಿಹಾಸಿಕವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪಂಚಾಯತ್ ರಾಜ್ ಕಾನೂನು ಅನುಷ್ಠಾನ ಮಾಡುವಲ್ಲಿ ನಮ್ಮ ಜಿಲ್ಲೆಯು ದಿಟ್ಟತನದ ಹೆಜ್ಜೆ ಇಟ್ಟಿದೆ. ಯೋಜನೆ ಸಮಿತಿ ಮಾಡುವ ಕುರಿತು ಪ್ರತಿ ಗ್ರಾಮ ಗ್ರಾಮಗಳಿಗೆ ತೆರಳಿ ಸಭೆಗಳನ್ನು ಏರ್ಪಡಿಸಲಾಗಿದೆ. ಜನರ ಕಲ್ಯಾಣಕ್ಕಾಗಿ ಯೋಜನಾ ಸಮಿತಿ ಬಹು ದೊಡ್ಡ ಕೆಲಸ ಮಾಡಲಿದೆ. ಈ ಯೋಜನೆಯ ಅನುಷ್ಠಾನದಲ್ಲಿ ವಿಶೇಷ ಆಸಕ್ತಿ ತೋರಿಸಬೇಕು. ಇದು ಪ್ರಾರಂಭದ ಹಂತವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಯೋಜನೆಗಳು ರಾಜ್ಯಕ್ಕೆ ಮಾದರಿಯಾಗಬೇಕು. ಜನರ ಆಲೋಚನೆಗಳಿಗೆ ಸ್ಫೂರ್ತಿ ತುಂಬುವುದು ಬಹು ಮುಖ್ಯವಾಗಿದೆ. ಮುಂದಿನ ಆಯವ್ಯಯ ತಯಾರಿಕೆಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದರು.ಜಿಲ್ಲೆಯಲ್ಲಿ ಐತಿಹಾಸಿಕ ಸ್ಥಳ ಲಕ್ಕುಂಡಿ ಗ್ರಾಮದ ಪ್ರದೇಶಾಬಿವೃದ್ಧಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ವಿವಿಧ ನೂತನ ಸೌಲಭ್ಯಗಳಿಂದ ಕೂಡಿದ ಕೆ.ಎಚ್. ಪಾಟೀಲ ಜಿಲ್ಲಾ ಆಸ್ಪತ್ರೆ ಹೀಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿ, ಸಂವಿಧಾನದ ಸದಾಶಯಗಳೊಂದಿಗೆ ಜನರ ಭಾವನೆಗಳನ್ನು ಅರಿತುಕೊಂಡು ಜಿಲ್ಲಾ ಯೋಜನಾ ಸಮಿತಿ ಕಾರ್ಯ ನಿರ್ವಹಿಸಬೇಕು. 2027- 28ರ ಯೋಜನೆಗಳು ಜನರಿಂದ ರೂಪುಗೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯು ದೇಶದಲ್ಲಿಯೇ ಮಾದರಿಯಾಗಬೇಕು. ಅಂದಾಗ ಮಾತ್ರ ಗ್ರಾಮರಾಜ್ಯ ರಾಮ ರಾಜ್ಯವಾಗಲಿದೆ ಎಂದರು. ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಎಲ್.ಡಿ. ಚಂದಾವರಿ, ಕೃಷ್ಣ ಪರಾಪೂರ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಪಂ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಿತಿಯ ಸದಸ್ಯರು ಇದ್ದರು.