ಮುಂಡರಗಿ: ಪುರಸಭೆಯ ವ್ಯಾಪ್ತಿಯ ಶಿರೋಳ ಗ್ರಾಮದ ಹತ್ತಿರ ಸರ್ಕಾರದಿಂದ ಖರೀದಿಸಿರುವ ಸುಮಾರು 25 ಎಕರೆ ಜಮೀನಿನಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ವಿತರಿಸಿ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿ ತಾಲೂಕು ಕಿಸಾನ್ ಜಾಗೃತಿ ವಿಕಾಸ ಸಂಘದ ಆಶ್ರಯದಲ್ಲಿ ಸೋಮವಾರ ಮುಂಡರಗಿ ಪುರಸಭೆ ಎದುರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ವಿ.ಎಸ್. ಘಟ್ಟಿ ಮಾತನಾಡಿ, ಪುರಸಭೆ ವ್ಯಾಪ್ತಿಯ ನಿರಾಶ್ರಿತ ಫಲಾನುಭವಿಗಳಿಗಾಗಿ 2017ರಲ್ಲಿ ಶಿರೋಳ ಗ್ರಾಮದ ಹತ್ತಿರ 25 ಎಕರ ಜಮೀನನ್ನು ಖರೀದಿ ಮಾಡಲಾಗಿದೆ. ಅದರೆ ಜಮೀನು ಖರೀದಿಸಿ 9 ವರ್ಷಗಳಾದರೂ ಇದುವರೆಗೂ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಿ ಹಕ್ಕುಪತ್ರ ನೀಡಿಲ್ಲ. ಆದ್ದರಿಂದ ತಕ್ಷಣವೇ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಿ, ಹಕ್ಕುಪತ್ರ ವಿತರಿಸುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ.

ಈಗಾಗಲೇ 127 ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧವಾಗಿದ್ದು, ಇದನ್ನು ಪುರಸಭೆ ಜಿಲ್ಲಾಧಿಕಾರಿ ಮೂಲಕ ರಾಜೀವಗಾಂಧಿ ವಸತಿ ನಿಗಮಕ್ಕೆ ಕಳಿಸದೆ ವಿಳಂಬ ಮಾಡಿದೆ. ಹೀಗಾಗಿ ಫಲಾನುಭವಿಗಳು ಅವಕಾಶ ವಂಚಿತರಾಗಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ನಿವೇಶನ ನೀಡಿ ಹಕ್ಕುಪತ್ರ ವಿತರಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಧರಣಿ ಸ್ಥಳಕ್ಕೆ ಪುರಸಭೆ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ ಆಗಮಿಸಿ 127 ಫಲಾನುಭವಿಗಳ ಆಯ್ಕೆಯಾಗಿದ್ದು, ಅನುಮೋದನೆಗೆ ರಾಜೀವಗಾಂಧಿ ವಸತಿ ನಿಗಮಕ್ಕೆ ಕಳಿಸಿಕೊಡಲಾಗಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು, ನಿಗಮಕ್ಕೆ ಈ ವರೆಗೂ ಪಟ್ಟಿ ಅನುಮೋದನೆಗೆ ಹೋಗಿಲ್ಲ. ನಿಗಮದ ವ್ಯವಸ್ಥಾಪಕ ನಿರ್ದೇಶಕರಿಂದ ಭರವಸೆ ಕೊಡಿಸಿದ ನಂತರ ಪ್ರತಿಭಟನೆ ವಾಪಸ್ ಪಡೆಯುವುದಾಗಿ ಪಟ್ಟು ಹಿಡಿದರು.

ನಿಗಮ ಹಾಗೂ ಪುರಸಭೆಯಿಂದ ಸ್ಪಷ್ಟತೆ ಸಿಗದ ಕಾರಣ ಮಂಗಳವಾರವೂ ಪ್ರತಿಭಟನೆ ಮುಂದುವರಿಯುತ್ತದೆ ಎಂದು ವಿ.ಎಸ್. ಘಟ್ಟಿ ತಿಳಿಸಿದರು.

ಧರಣಿ ಸತ್ಯಾಗ್ರಹದಲ್ಲಿ ಸಂಘದ ಜಿಲ್ಲಾಧ್ಯಕ್ಷ ನಿಂಗಪ್ಪ ಭಂಡಾರಿ, ಕುಸುಮ ಹಳ್ಳಿಕೇರಿ ಫಲಾನುಭವಿಗಳಾದ ದ್ಯಾಮವ್ವ ಕೊರವರ, ಯಲ್ಲಮ್ಮ ಕೊರವರ, ದ್ಯಾಮವ್ವ ಕೊರವರ, ಈರಮ್ಮ, ಲಕ್ಷ್ಮವ್ವ, ಲಕ್ಷ್ಮಿ ಸೇರಿದಂತೆ 25ಕ್ಕೂ ಹೆಚ್ಚು ಫಲಾನುಭವಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.