ಧರ್ಮಸ್ಥಳ ಸಾಮೂಹಿಕ ವಿವಾಹ: 75 ಜೋಡಿ ಗೃಹಸ್ಥಾಶ್ರಮಕ್ಕೆ

| N/A | Published : May 04 2025, 01:33 AM IST / Updated: May 04 2025, 10:49 AM IST

ಸಾರಾಂಶ

ವೇದಘೋಷ, ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಹಾರ ವಿನಿಮಯ ಮತ್ತು ಮಾಂಗಲ್ಯಧಾರಣೆ ನಡೆಯಿತು.  

 ಬೆಳ್ತಂಗಡಿ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಸಂಜೆ 6.48ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ ೫೩ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 75 ಜೊತೆ ವಧೂ-ವರರು ಗೃಹಸ್ಥಾಶ್ರಮಕ್ಕೆ ಪದಾರ್ಪಣೆ ಮಾಡಿದರು. 

ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಮದುವೆಯ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು.ವೇದಘೋಷ, ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ಸಂಜೆ ೬.೪೮ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಹಾರ ವಿನಿಮಯ ಮತ್ತು ಮಾಂಗಲ್ಯಧಾರಣೆ ನಡೆಯಿತು. ಅವರವರ ಜಾತಿ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.ಸುಶ್ರಾವ್ಯವಾದ ಶೋಭಾನೆ ಹಾಡುಗಳು, ವಧು-ವರರಿಗೆ ಆರತಿ ಕಾರ್ಯಕ್ರಮ ಮದುವೆಗೆ ವಿಶೇಷ ಸೊಗಡನ್ನು ನೀಡಿತು. 

ದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ನೂತನ ದಂಪತಿಗಳಿಗೆ ಶುಭ ಹಾರೈಸಿ, ಸರಳ ಸಾಮೂಹಿಕ ವಿವಾಹ ಅತ್ಯಂತ ಪುಣ್ಯದ ಸೇವೆಯಾಗಿದೆ. ನಾಡಿನೆಲ್ಲೆಡೆ ಬಹುಮುಖಿ ಸಮಾಜಸೇವಾ ಕಾರ್ಯಗಳ ಮೂಲಕ ಗ್ರಾಮೀಣ ಪ್ರದೇಶದ ಜನರಲ್ಲಿಯೂ ಹಣದ ಮಿತಬಳಕೆ, ಉಳಿತಾಯ ಹಾಗೂ ಸಮರ್ಪಕ ಹೂಡಿಕೆ ಬಗ್ಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ಸೇವೆ ಹಾಗೂ ಸಾಧನೆ ಶ್ಲಾಘನೀಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ತಾವು ಕಾನೂನು ಸಚಿವರಾಗಿದ್ದಾಗ ಸರಳ ಸಾಮೂಹಿಕ ವಿವಾಹ ಪದ್ಧತಿ ಜಾರಿಗೆ ತರಲು ಕಾನೂನು ರೂಪಿಸಿದ್ದೆ. ಆದರೆ ಸಚಿವ ಸಂಪುಟದಲ್ಲಿ ಹಾಗೂ ಇತರರು ಕೂಡ ಇದ್ದಕ್ಕೆ ವಿರೋಧ ವ್ಯಕ್ತಪಡಿಸಿರುವುದರಿಂದ ತಾನು ವಿಫಲನಾದೆ ಎಂದು ವಿಷಾದ ವ್ಯಕ್ತಪಡಿಸಿದರು. 

ಹೆಗ್ಗಡೆಯವರ ಕಷ್ಟದ ಕಾಲದಲ್ಲಿ ಶ್ರೀ ಮಂಜುನಾಥ ಸ್ವಾಮಿ ಅವರಿಗೆ ಶಾಂತಿ, ನೆಮ್ಮದಿ ನೀಡಲಿ. ಪೂಜ್ಯರ ಜೊತೆಗೆ ನಾವೆಲ್ಲ ಸದಾ ಸಿದ್ಧರೂ, ಬದ್ಧರೂ ಆಗಿದ್ದೇವೆ ಎಂದು ಅವರು ಭರವಸೆ ನೀಡಿದರು.ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಸನಾತನ ಪರಂಪರೆಯಲ್ಲಿ ಷೋಢಶ ಸಂಸ್ಕಾರಗಳಲ್ಲಿ ಮದುವೆ ಎಂಬುದು ಭಾವನಾತ್ಮಕ ಸಂಬಂಧ ಹೊಂದಿದೆ. ಈ ಪವಿತ್ರ ಸಂಸ್ಕಾರ ಪಡೆದ ಪತಿ-ಪತ್ನಿ ಸಮಾನವಾಗಿ ಸುಖ-ಕಷ್ಟ, ನೋವು-ನಲಿವು ಎಲ್ಲವನ್ನೂ ಶಾಂತಿ ಮತ್ತು ತಾಳ್ಮೆಯಿಂದ ಅನುಭವಿಸಿ ಧನ್ಯತಾಭಾವ ಹೊಂದಿರಬೇಕು ಎಂದು ಅವರು ಸಲಹೆ ನೀಡಿದರು.ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮೂಹಿಕ ವಿವಾಹದಲ್ಲಿ ಮದುವೆ ಆದವರು ದುಂದುವೆಚ್ಚ ಮಾಡಬಾರದು. ಸತ್ಕಾರ ಕೂಟ, ನಿಶ್ಚಿತಾರ್ಥ, ಅತಿಥಿ ಸತ್ಕಾರಕ್ಕೆಂದು ಅನಗತ್ಯ ವೆಚ್ಚ ಮಾಡಬಾರದು ಎಂದು ಸಲಹೆ ನೀಡಿದರು.

ಸಾಮೂಹಿಕ ವಿವಾಹ ಇಂದು ಹೆಚ್ಚು ಜನಪ್ರಿಯವಾಗುತ್ತಿದ್ದು, ತಮಗೆ ಧನ್ಯತಾಭಾವ ಮೂಡಿಬಂದಿದೆ. ಅನೇಕ ಮಂದಿ ದಾನಿಗಳು ನಗದು ದೇಣಿಗೆ, ಮಂಗಳಸೂತ್ರ, ಮೂಗುತಿ, ಸೀರೆ ಮೊದಲಾದವುಗಳನ್ನು ಉಚಿತ ಸಾಮೂಹಿಕ ವಿವಾಹಕ್ಕೆ ಕೊಡುಗೆಯಾಗಿ ನೀಡಿ ಪುಣ್ಯದಲ್ಲಿ ಭಾಗಿಗಳಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.ಧರ್ಮಸ್ಥಳದ ವತಿಯಿಂದ ನೂತನ ದಂಪತಿಗೆ ವಿಶೇಷ ಉಡುಗೊರೆ ನೀಡಲಾಯಿತು.

ಹೇಮಾವತಿ ವಿ. ಹೆಗ್ಗಡೆ, ಶ್ರದ್ಧಾ ಅಮಿತ್, ಅಮಿತ್ ಉಪಸ್ಥಿತರಿದ್ದರು. ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಅಖಿಲೇಶ್ ಶೆಟ್ಟಿ ಧರ್ಮಸ್ಥಳ ವಂದಿಸಿದರು. ಎಸ್‌ಡಿಎಂ ಸನಿವಾಸ ಕಾಲೇಜಿನ ಪ್ರಾಂಶುಪಾಲ ಡಾ. ಸುನಿಲ್ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.ವಧೂ-ವರರ ಪ್ರಮಾಣ ವಚನ:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಮಂಗಲ ಮುಹೂರ್ತದಲ್ಲಿ ವಧೂ-ವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ ಮತ್ತು ಕಾಮಗಳಲ್ಲಿ ಸಹಚರರಾಗಿ, ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ ಯಾವುದೇ ದುರಭ್ಯಾಸಗಳಿಗೂ ತುತ್ತಾಗದೆ ಬದುಕುತ್ತೇವೆ ಎಂಬುದಾಗಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಬದ್ಧರಾಗುತ್ತಿದ್ದೇವೆ ಎಂದು ನೂತನ ದಂಪತಿಗಳು ಪ್ರಮಾಣ ವಚನ ಸ್ವೀಕರಿಸಿದರು.