ಸಾರಾಂಶ
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳು ಜನಪರವಾಗಿವೆಯೆಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.ತಾಲೂಕಿನ ಪುರ ಗ್ರಾಮದ ಕೆರೆಯಂಗಳದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮ ಊರು-ನಮ್ಮ ಕೆರೆ ಕಾರ್ಯಕ್ರಮದಡಿ ೧೨.೪೦ ಲಕ್ಷ ರು. ವೆಚ್ಚದಲ್ಲಿ ಕೈಗೊಂಡಿರುವ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಭಾಗಕ್ಕೆ ಅಗತ್ಯವಿರುವ ಸಮುದಾಯ ಭವನ, ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣ, ಶುದ್ಧ ನೀರಿನ ಘಟಕ ಹಾಗು ದೇಗುಲ ಜೀರ್ಣೋದ್ಧಾರ ಕಾರ್ಯಗಳಿಗೆ ಸಹಾಯಧನ ರೂಪದಲ್ಲಿ ಕೊಡುಗೆ ನೀಡುತ್ತಿದೆ ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಮಟ್ಟದಲ್ಲಿ ಕೈ ಜೋಡಿಸಿದೆ. ಕೃಷಿ, ಜನ-ಜಾನುವಾರುಗಳಿಗೆ ಕೆರೆಗಳ ಅವಶ್ಯಕತೆ ಹೆಚ್ಚಿದೆ ಎಂಬುದನ್ನು ಅರಿತು ಹೂಳೆತ್ತುವ ಕಾರ್ಯ ಕೈಗೊಂಡಿದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಅವರು ಮಾತನಾಡಿ, ೪೩ ವರ್ಷಗಳಿಂದ ರಾಜ್ಯಾದ್ಯಂತ ಸಮಾಜಮುಖಿ ಕಾರ್ಯ ಗಳಲ್ಲಿ ತೊಡಗಿಸಿಕೊಂಡಿದ್ದು ಒಂದು ಗ್ರಾಮ ಸುವ್ಯವಸ್ಥೆಯಿಂದ ಕೂಡಿರಲು ಅಗತ್ಯವಿರುವ ಎಲ್ಲಾ ಕಾಮಗಾರಿಗೆ ಯೋಜನೆ ರೂಪಿಸಿ ಅಭಿವೃದ್ದಿಗೊಳಿಸುವಲ್ಲಿ ಗ್ರಾಮಾಭಿವೃದ್ಧಿ ಯೋಜನೆಯು ಹಗಲಿರುಳು ಶ್ರಮಿಸುತ್ತಿದೆ. ಇದುವರೆಗೂ ರಾಜ್ಯದಲ್ಲಿ ೯೦೦ ಹಾಗೂ ತಾಲೂಕಿನಲ್ಲಿ ೮ಕ್ಕೂ ಹೆಚ್ಚು ಕೆರೆಗಳನ್ನು ಹೂಳೆತ್ತಿ ಅಭಿವೃದ್ಧಿಗೊಳಿಸಲಾಗಿದೆ ಎಂದರು.ಶ್ರೀ ರುದ್ರೇಶ ಸ್ವಾಮೀಜಿ ಪೂಜೆ ನೆರವೇರಿಸಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ವಾಸು, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಸಾವಿತ್ರಮ್ಮ, ಸದಸ್ಯರಾದ ಪಿ.ಕೆ.ಶಿವಶಂಕರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಮಲ್ಲೇಗೌಡ, ಇಂದ್ರಜಿತ್, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ಚಂದ್ರಣ್ಣ, ದಿಡಗ ಪಿಡಿಒ ಕೆ.ಎಸ್. ಪ್ರಕಾಶ್, ಯೋಜನೆ ತಾಲೂಕು ಕೃಷಿ ಅಧಿಕಾರಿ ದಿನೇಶ್, ವಲಯ ಮೇಲ್ವಿಚಾರಕ ಹರೀಶ್, ಸೇವಾ ಪ್ರತಿನಿಧಿ ಪುಷ್ಪಲತಾ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.