ಹಾವೇರಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಯುವಕರ ಹೋರಾಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಿದೆ. ವಿದ್ಯಾರ್ಥಿಗಳ ಪರವಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ದೆಹಲಿಯಲ್ಲಿ ನಮ್ಮನ್ನೂ ಬಂಧಿಸಲಾಗಿತ್ತು. ದೇಶದ ವಿವಿಧ ರಾಜ್ಯಗಳಿಂದ ಯುವಕರು ಹಾಗೂ ಸಾರ್ವಜನಿಕರು ದೆಹಲಿಯ ಜಂತರ್‌ಮಂತರ್‌ನಲ್ಲಿ ಸೇರಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿ, ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ಆತ್ಮಹತ್ಯೆ ಸೇರಿದಂತೆ ಹಲವು ನೋವಿನ ಘಟನೆಗಳು ನಡೆದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ವಿಳಂಬ ಮಾಡಿತು. ದೇಶಾದ್ಯಂತ ಯುವ ಸಮೂಹ ಬೀದಿಗಿಳಿದು ಹೋರಾಟ ನಡೆಸಿದ ಬಳಿಕ ಸರ್ಕಾರ ಒತ್ತಡಕ್ಕೆ ಮಣಿಯಬೇಕಾಯಿತು. ಧರ್ಮೇಂದ್ರ ಪ್ರಧಾನ್‌ ಅವರು ಈ ಹಿಂದೆಯೇ ರಾಜೀನಾಮೆ ನೀಡಬೇಕಾಗಿತ್ತು. ಆದರೆ, ಇಷ್ಟು ತಡವಾಗಿ ರಾಜೀನಾಮೆ ನೀಡಿರುವುದು ದುರದೃಷ್ಟಕರ ಎಂದು ಹೇಳಿದರು.

ಇದು ಕಾಂಗ್ರೆಸ್ ಪಕ್ಷದ ಅಥವಾ ಸಿಜೆಪಿಯ ಜಯವಲ್ಲ. ಇದು ದೇಶದ ಯುವಕರ ಜಯವಾಗಿದೆ. ಯುವಕರ ಹೋರಾಟಕ್ಕೆ ರಾಹುಲ್ ಗಾಂಧಿ ಅವರು ದೊಡ್ಡ ಶಕ್ತಿ ನೀಡಿದ್ದು, ಬೀದಿಗಿಳಿದು ಹೋರಾಟ ನಡೆಸುವುದರ ಜೊತೆಗೆ ಸಂಸತ್ತಿನಲ್ಲಿಯೂ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದಾರೆ. ಪ್ರಧಾನ್ ಅವರ ರಾಜೀನಾಮೆಯಿಂದ ಹೋರಾಟವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್, ಬಂಧನ ಹಾಗೂ ಪ್ರಕರಣಗಳ ಕುರಿತು ಸರ್ಕಾರ ಉತ್ತರ ನೀಡಬೇಕು. ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ವಿಚಾರವನ್ನು ಸಂಸತ್ತಿನಲ್ಲಿಯೂ ಚರ್ಚಿಸಬೇಕು ಎಂದು ಆಗ್ರಹಿಸಿದ ಅವರು, ಯುವಕರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ಅಸಮಾಧಾನ ವ್ಯಕ್ತವಾಗಿದೆ. ಯುವಕರಿಗೆ ನ್ಯಾಯ ದೊರಕಿಸುವವರೆಗೆ ಕಾಂಗ್ರೆಸ್ ಪಕ್ಷ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು.

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೈಕಮಾಂಡ್ ಹಾಗೂ ಪಕ್ಷದ ಹಿರಿಯ ನಾಯಕರು ಚರ್ಚಿಸಿ ಸಂಪುಟಕ್ಕೆ ಸೇರುವ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ವಿಧಾನ ಪರಿಷತ್‌ ಮುಖ್ಯಸಚೇತಕ ಸಲೀಂ ಅಹ್ಮದ್ ಹೇಳಿದರು.