ಸಾರಾಂಶ
ಮುಂಡಗೋಡ:
ಡಯಾಲಿಸಿಸ್ ಸಿಬ್ಬಂದಿಗಳ ಮುಷ್ಕರದಿಂದಾಗಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ರೋಗಿಯೋರ್ವ ಮೃತಪಟ್ಟ ಘಟನೆ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.ತಾಲೂಕಿನ ಗುಂಜಾವತಿ ಗ್ರಾಮದ ಮಮ್ಮದಗೌಸ್ ಅಬ್ದುಲವಹಾಬ್ ಸೈಯದ್ (೫೮) ಚಿಕಿತ್ಸೆ ಸಿಗದೆ ಮೃತಪಟ್ಟ ವ್ಯಕ್ತಿ. ಕಿಡ್ನಿ ಸಮಸ್ಯೆಯಿಂದಾಗಿ ಕಳೆದ ೨ ತಿಂಗಳಿನಿಂದ ಇವರು ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ವೇತನ ನೀಡದ ಕಾರಣಕ್ಕೆ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ ನಡೆಸಿದ್ದರಿಂದ ಚಿಕಿತ್ಸೆ ಸಿಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.ಆರೋಗ್ಯ ಇಲಾಖೆ ಅಧಿಕಾರಿಗಳ ಭೇಟಿ:ಮೃತರ ಮನೆಗೆ ಆರೋಗ್ಯ ಇಲಾಖೆಯ ಆರ್.ಸಿ.ಎಚ್ ಅಧಿಕಾರಿ ಡಾ. ನಟರಾಜ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಅರ್ಚನಾ ನಾಯಕ, ತಾಲೂಕು ಆರೋಗ್ಯಾಧಿಕಾರಿ ನರೇಂದ್ರ ಪವಾರ, ಹುನಗುಂದ ಆಡಳಿತ ವೈದ್ಯಧಿಕಾರಿ ಡಾ. ಭರತ ಹಾಗೂ ಡಯಾಲಿಸಸ್ ಸಿಬ್ಬಂದಿಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸ್ವಾಂತನ ಹೇಳಿದರು.ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಮ್ಮದಗೌಸ್ ಸೆ. ೧೧ರಿಂದ ವಾರದಲ್ಲಿ ಒಂದು ಬಾರಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಡಿ. ೧ರಂದು ಡಯಾಲಿಸಿಸ್ ಸಿಬ್ಬಂದಿ ಮುಷ್ಕರಕ್ಕೆ ಹೊರಡುತ್ತಿರುವ ಕುರಿತು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ ೧೪ ಜನರಿಗೂ ತಿಳಿಸಿ ತಾತ್ಕಾಲಿಕವಾಗಿ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿತ್ತು. ೧೪ರಲ್ಲಿ ೧೩ ಜನರು ಕೂಡ ಬೇರೆ ಬೇರೆ ಕಡೆ ಹೋಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ನರೇಂದ್ರ ಪವಾರ ಹೇಳಿದ್ದಾರೆ.