ಸಾರಾಂಶ
ದೇಶದಲ್ಲಿ ಇಂದಿನ ಪರಿಸ್ಥಿತಿ ನೋಡಿದರೆ ಮುಂದೆ ಲೋಕಸಭಾ ಚುನಾವಣೆ ಬರುತ್ತದೆಯೋ ಇಲ್ಲವೋ ಎಂಬ ಆತಂಕ ಶುರುವಾಗಿದೆ.
ಹುಬ್ಬಳ್ಳಿ:
ಕಾಂಗ್ರೆಸ್ ಬಡವರಿಗಾಗಿಯೇ ಶ್ರಮಿಸುವ ಪಕ್ಷವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದಿನ ಪರಿಸ್ಥಿತಿ ನೋಡಿದರೆ ಮುಂದೆ ಲೋಕಸಭಾ ಚುನಾವಣೆ ಬರುತ್ತದೆಯೋ ಇಲ್ಲವೋ ಎಂಬ ಆತಂಕ ಶುರುವಾಗಿದೆ. ಸರ್ವಾಧಿಕಾರಿ ಬಿಜೆಪಿ ಆಡಳಿತದಿಂದ ಚುನಾವಣೆ ಬದಲು ಅಘೋಷಿತ ತುರ್ತು ಪರಿಸ್ಥಿತಿ ಬರುತ್ತದೆಯೋ ಎಂಬ ಅನುಮಾನ ಕಾಡುತ್ತಿದೆ. ಇಂಡಿಯಾ ಮೈತ್ರಿಕೂಟದ ಕೆಲ ನಾಯಕರನ್ನು ಜೈಲಿಗೆ ಹಾಕಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಖಾತೆಗಳನ್ನು ಬ್ಲಾಕ್ ಮಾಡಲು ಮೋದಿ ಮುಂದಾಗಿದ್ದಾರೆ. ಐಟಿ, ಇಡಿ, ಸಿಬಿಐ ದಾಳಿಯಿಂದ ಹೆದರಿಸಿ ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ದಿ. ಅನಂತಕುಮಾರ ಈ ಹಿಂದೆ ಕೇಂದ್ರ ಸಚಿವರಾಗಿದ್ದಾಗ ರಾಜ್ಯಕ್ಕೆ ಕೇಂದ್ರದಿಂದ ಹಲವು ಯೋಜನೆಗಳನ್ನು ತಂದು ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಅವರ ಶಿಷ್ಯ ಪ್ರಹ್ಲಾದ ಜೋಶಿ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಜನತೆಗೆ ತಿಳಿಸಲಿ ಎಂದು ಸವಾಲು ಹಾಕಿದರು.ಈ ಲೋಕಸಭಾ ಚುನಾವಣಾಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ವಿನೋದ ಅಸೂಟಿ ಸ್ಪರ್ಧಿಸಿದ್ದು, ಅವರು ಪ್ರಹ್ಲಾದ ಜೋಶಿ ಎದುರು ಗೆದ್ದು ಬರುತ್ತಾರೆ ಎನ್ನುವ ನಂಬಿಕೆಯಿದೆ. ಒಟ್ಟಾರೆ ಈ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.