ಇನ್ಫೋಸಿಸ್ ಪ್ರತಿಷ್ಠಾನ ವತಿಯಿಂದ ಇಲ್ಲಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಉಡುಪಿ: ಇನ್ಫೋಸಿಸ್ ಪ್ರತಿಷ್ಠಾನ ವತಿಯಿಂದ ಇಲ್ಲಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ದೇಶದ ಅಭಿವೃದ್ಧಿಗೆ ಇನ್ಫೋಸಿಸ್ ಪ್ರತಿಷ್ಠಾನದ ಕೊಡುಗೆ ಮಹತ್ವದ್ದಾಗಿದೆ. ಇಂತಹ ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲವನ್ನು ವೃದ್ಧಿಸುವುದರ ಜೊತೆಗೆ, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸಲು ಸಹಕಾರಿಯಾಗಲಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ ಮಾತನಾಡಿ, ವಿದ್ಯಾರ್ಥಿಗಳು ಡಿಜಿಟಲ್ ತಂತ್ರಜ್ಞಾನದ ಸಾಧಕ-ಬಾಧಕಗಳನ್ನು ಅರಿತುಕೊಂಡು, ಅದರ ಜವಾಬ್ದಾರಿಯುತ ಬಳಕೆಯ ಕುರಿತು ಜ್ಞಾನ ಹೊಂದಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಡಿಜಿಟಲ್ ಸಾಕ್ಷರರಾಗುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಡುಪಿ ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಉಡುಪಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾ ಪಿ. ಹಾಗೂ ಡಾ. ಯಲ್ಲಮ್ಮ, ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ ಉಪಸ್ಥಿತರಿದ್ದರು.ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣ ಭಟ್ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಗ್ರಂಥಪಾಲಕ ವೆಂಕಟೇಶ್ ವಂದಿಸಿದರು.