ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ

| Published : Jul 29 2025, 02:04 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ತಹಸೀಲ್ದಾರ್‌ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಪರಿಶೀಲನೆ ನಡೆಸಿದರು

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ತಹಸೀಲ್ದಾರ್‌ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಪರಿಶೀಲನೆ ನಡೆಸಿದರು.

ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಗಣಕೀಕರಣ ಕಾರ್ಯ ಪರಿಶೀಲಿಸಿದರು. ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ ಹಾಗೂ ಹಣದ ಉಳಿತಾಯವಾಗುತ್ತದೆ. ಸಾರ್ವಜನಿಕರ ಕಚೇರಿ ಅಲೆದಾಟವು ತಪ್ಪಿದಂತಾಗುತ್ತದೆ. ಇದರಿಂದ ಅತ್ಯಂತ ಅನುಕೂಲವಾಗಲಿದ್ದು, ಈ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ತಹಸೀಲ್ದಾರ್‌ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಚುನಾವಣಾ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿರುವ ಕೊಠಡಿಗೆ ತೆರಳಿ, ಪರಿಶೀಲಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.

ಬಳಿಕ, ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ನಿಲ್ದಾಣದಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದರು. ಬಸ್‌ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ನಿಲ್ದಾಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ, ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ಒದಗಿಸಬೇಕು. ಆವರಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಿರ್ವಹಣೆ ಮಾಡುವ ಜೊತೆಗೆ ಕಾಲಕಾಲಕ್ಕೆ ಸಂಬಂಧಿಸಿದ ಅಧಿಕಾರಿಗಳು ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಗುಣಮಟ್ಟದ ಆಹಾರ ಪೂರೈಕೆ ಕುರಿತು ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ, ೨೫೦ ಹಾಸಿಗೆಗಳುಳ್ಳ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಆಸ್ಪತ್ರೆಯ ತಾಯಿ ಮಕ್ಕಳ ವಾರ್ಡ್‌, ನವಜಾತ ಶಿಶು ವಿಭಾಗ, ಸಿಟಿ ಎಂಆರ್‌ಐ ಸ್ಕ್ಯಾನ್ ಸೆಂಟರ್, ನೇತ್ರ ವಿಭಾಗ, ಎನ್‌ಆರ್‌ಸಿ ಕೇಂದ್ರ, ಕ್ಷ-ಕಿರಣ ವಿಭಾಗ, ತುರ್ತು ಘಟಕ ವಿಭಾಗಕ್ಕೆ ಭೇಟಿ ನೀಡಿ ಕಾರ್ಯವೈಖರಿ ವೀಕ್ಷಿಸಿದರು. ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.

ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಆಸ್ಪತ್ತೆ ಬರುವ ರೋಗಿಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ ಉತ್ತಮ ಚಿಕಿತ್ಸೆ ಒದಗಿಸಲು ಮುಂದಾಗಬೇಕು ಎಂದು ಅವರು ಹೇಳಿದರು. ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.