ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಲು ಅಧಿವೇಶನದಲ್ಲಿ ಚರ್ಚಿಸಿ

| Published : Aug 19 2025, 01:00 AM IST

ಸಾರಾಂಶ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಪಡೆಯುವ ಸಲುವಾಗಿ ಸುಮಾರು 35 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಈ ಅಸಮಾನತೆ ಸರಿಪಡಿಸಲು ಕಳೆದ 2024 ಆಗಸ್ಟ್ 1ರಂದು ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟ ಸಮುದಾಯಗಳಿಗೆ ಜನಸಂಖ್ಯೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಆದೇಶ ನೀಡಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಅತಿ ಹಿಂದುಳಿದ ಹಾಗೂ ಅವಕಾಶ ವಂಚಿತ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ತಾಲೂಕು ಮಾದಿಗ ಸಂಘಟನೆಗಳ ಒಕ್ಕೂಟದಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯಗೆ ಮನವಿ ಸಲ್ಲಿಸಿದರು.

ತಾಲೂಕು ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎಚ್.ರವಿಕುಮಾರ್ ಹಾಗೂ ಗೌರವಾಧ್ಯಕ್ಷ ಅಲ್ಪಹಳ್ಳಿ ಗೋವಿಂದಯ್ಯ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಸಲ್ಲಿಸಿ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸಹಕಾರ ನೀಡಬೇಕೆಂದು ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಪಡೆಯುವ ಸಲುವಾಗಿ ಸುಮಾರು 35 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಈ ಅಸಮಾನತೆ ಸರಿಪಡಿಸಲು ಕಳೆದ 2024 ಆಗಸ್ಟ್ 1ರಂದು ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟ ಸಮುದಾಯಗಳಿಗೆ ಜನಸಂಖ್ಯೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಆದೇಶ ನೀಡಿದೆ.

ಆದರೆ, ಸರ್ಕಾರ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವುದರಿಂದ ನಮ್ಮ ಸಮುದಾಯಕ್ಕೆ ತೀವ್ರ ಅಸಮಾಧಾನ ಹಾಗೂ ಆತಂಕ ಉಂಟಾಗಿದೆ. ಸಮಾಜದ ವಿದ್ಯಾರ್ಥಿಗಳು, ಉದ್ಯೋಗ ಆಕಾಂಕ್ಷಿಗಳು, ಕಾರ್ಮಿಕರು, ಮಹಿಳೆಯರು ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ.

ಮಾದಿಗ ಸಮುದಾಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದೆ. ಸಮುದಾಯ ಸಮಸ್ಯೆ ಎದುರಿಸುತ್ತಿದೆ. ಆದ್ದರಿಂದ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಲು ಹಾಗೂ ಪರಿಶಿಷ್ಟ ಜಾತಿಯ ಒಳಮೀಸಲು ಜಾರಿಗೊಳಿಸಲು ಜಸ್ಟೀಸ್ ನಾಗಮೋಹನದಾಸ್ ವರದಿಯ ಶಿಫಾರಸ್ಸು ಯಥಾವತ್ತಾಗಿ ರಾಜ್ಯ ಸರ್ಕಾರ ಜಾರಿಗೊಳಿಸುವಂತೆ ವಿಧಾನಸಭೆ ಅಧಿವೇಶನದಲ್ಲಿ ತಾವು ಒತ್ತಾಯಿಸಬೇಕೆಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಪಾಂಡವಪುರ ತಾಲೂಕು ಮಾದಿಗ ಸಂಘಟನೆಗಳ ಒಕ್ಕೂಟದ ಗೌರವಾಧ್ಯಕ್ಷ ಅಲ್ಪಹಳ್ಳಿ ಗೋವಿಂದಯ್ಯ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಪುರಸಭೆ ಮಾಜಿ ಅಧ್ಯಕ್ಷೆ ಅರ್ಚನಾ ಚಂದ್ರು, ರಾಚಯ್ಯ, ಪಾಂಡವಪುರ ಚಂದ್ರು, ಗುರು, ಮಲ್ಲೇಶ್, ತುಕಾರಾಮ್ ಸೇರಿದಂತೆ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರಿದ್ದರು.