ಕಿತ್ತೂರು, ಕಲ್ಯಾಣ ಪ್ರಾಂತ್ಯದ ಅಭಿವೃದ್ಧಿ ಚರ್ಚೆಗೆ ಆದ್ಯತೆ: ಸಭಾಪತಿ ಬಸವರಾಜ ಹೊರಟ್ಟಿ

| Published : Dec 08 2024, 01:17 AM IST

ಕಿತ್ತೂರು, ಕಲ್ಯಾಣ ಪ್ರಾಂತ್ಯದ ಅಭಿವೃದ್ಧಿ ಚರ್ಚೆಗೆ ಆದ್ಯತೆ: ಸಭಾಪತಿ ಬಸವರಾಜ ಹೊರಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ಸಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆ ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ಯ ನಂತರ ಸಂಪೂರ್ಣ ಕಿತ್ತೂರು ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ಸಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆ ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ಯ ನಂತರ ಸಂಪೂರ್ಣ ಕಿತ್ತೂರು ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಯಶಸ್ಸಿಗೆ ಹಾಗೂ ಪರಿಷತ್ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ವಿಧಾನ ಪರಿಷತ್ ಸದಸ್ಯರಿಗೆ ಈಗಾಗಲೆ ಅನೇಕ ಸಲಹೆ ನೀಡಲಾಗಿದೆ. ಈ ಬಾರಿ ಪರಿಷತ್‌ನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿವೆ ಎಂದು ಹೇಳಿದರು.

ಮೊದಲ ವಾರ ಮಂಗಳವಾರ ಹಾಗೂ ಬುಧವಾರ ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ‌ ಚರ್ಚೆಗಳಿಗೆ ಒತ್ತು‌ ನೀಡಲಾಗುವುದು. ಅಧಿವೇಶನದ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ ನಂತರ ಸಂಪೂರ್ಣ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರಾಂತ್ಯಗಳ ಅಭಿವೃದ್ಧಿ ಚಿಂತನೆ ನಡೆಸಲು ಸಲಹೆ ನೀಡಲಾಗಿದೆ ಎಂದು ತಿಳಿಸಿದರು.

ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮ‌ವಹಿಸಲಾಗುತ್ತಿದ್ದು, ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರಕ್ಕೆ ಸಲಹೆ ನೀಡಲು ಕ್ರಮ ವಹಿಸಲಾಗುವುದು. ಸದನದಲ್ಲಿ ರಚನಾತ್ಮಕ ಚರ್ಚೆಗೆ ಪರಿಷತ್ ಸದಸ್ಯರ ಜತೆ ಈಗಾಗಲೆ ಚರ್ಚಿಸಲಾಗಿದ್ದು, ಸದನ ಸುಗಮವಾಗಿ ನಡೆಯಲು ಅಗತ್ಯ ಕ್ರಮ ವಹಿಸಲಾಗಿದೆ ಎಂದರು.

ಶಾಸಕರ ಹಾಜರಾತಿ ಹೆಚ್ಚಳಕ್ಕೆ ಕೂಡ ಆದ್ಯತೆ ನೀಡಲಾಗುವುದು ಎಂದ ಅವರು, ಬೆಳಗಾವಿ ಸುವರ್ಣ ವಿಧಾನಸೌಧ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಧಿವೇಶನ ನಡೆಸಲು ಈ ಬಾರಿ ₹20 ಕೋಟಿ ಖರ್ಚು ಅಂದಾಜಿಸಲಾಗಿದೆ. ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವಗಳು ಬಂದಿವೆ. ಇವುಗಳ ಬಗ್ಗೆ ಕೂಲಂಕಶವಾಗಿ ಚರ್ಚಿಸಿ ನಿರ್ಧಾರ‌‌ ಕೈಗೊಳ್ಳಲಾಗುವುದು. ತಾಜ್ ಗ್ರೂಪ್, ಕೆಎಲ್ಇ ಹೀಗೆ ಅನೇಕ ಸಂಸ್ಥೆಗಳು ಶಾಸಕರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲಹೆ ನೀಡಿದ್ದು, ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಜಿಲ್ಲಾ ವಿಭಜನೆ ಸಾಧಕ-ಬಾಧಕಗಳ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆಯಾಗಬೇಕಿದೆ ಎಂದು ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ವಿಧಾನ‌ ಪರಿಷತ್ ಕಾರ್ಯದರ್ಶಿ ಕೆ.ಆರ್.‌ ಮಹಾಲಕ್ಷ್ಮೀ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.